ಬೆಂಗಳೂರು: ಬೆಂಗಳೂರು–ಹೊಸೂರು ಮುಖ್ಯರಸ್ತೆಯ ನೇರಳೂರು ಸಮೀಪ ಚಲಿಸುತ್ತಿದ್ದ ಕಾರೊಂದು ಏಕಾಏಕಿ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.
ಕಾರಿನ ಎಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿ ಅರಿತ ಚಾಲಕ ತಕ್ಷಣವೇ ಕಾರನ್ನು ರಸ್ತೆಯ ಬದಿಗೆ ನಿಲ್ಲಿಸಿ ಸುರಕ್ಷಿತವಾಗಿ ಹೊರಬಂದಿದ್ದಾರೆ. ಹೀಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಸಮೀಪದ ಪೆಟ್ರೋಲ್ ಬಂಕ್ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದ್ದಾರೆ.
ಆದರೆ ಬೆಂಕಿ ವೇಗವಾಗಿ ಹರಡಿಕೊಂಡ ಪರಿಣಾಮ ಕೆಲವೇ ಕ್ಷಣಗಳಲ್ಲಿ ಇಡೀ ಕಾರನ್ನು ಆವರಿಸಿಕೊಂಡಿದೆ. ಬೆಂಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಸುಟ್ಟುಹೋಗಿದೆ.
ಘಟನೆ ಕುರಿತು ಮಾಹಿತಿ ಪಡೆದ ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಘಟನೆಯಿಂದ ಬೆಂಗಳೂರು–ಹೊಸೂರು ಮುಖ್ಯರಸ್ತೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.