ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಚುನಾವಣೆಯಲ್ಲಿ ಮತದಾರರ ಸೆಳೆಯಲು ಅಭ್ಯರ್ಥಿಗಳು ದೊಡ್ಡ ಮಟ್ಟದಲ್ಲಿ ಆಮಿಷ ನೀಡಿದ ಆರೋಪ ಕೇಳಿಬಂದಿದೆ.
ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (ಚಿಮುಲ್) ಆಡಳಿತ ಮಂಡಳಿ ನಿರ್ದೇಶಕ ಸ್ಥಾನಗಳಿಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮತದಾನ ನಡೆದಿತ್ತು. ಈ ಚುನಾವಣೆಯಲ್ಲಿ ಮತದಾರರಿಗೆ ಅಭ್ಯರ್ಥಿಗಳ ಪರ ವ್ಯಕ್ತಿಗಳು ಹಣ ಮತ್ತು ಬೆಳ್ಳಿ ವಿತರಣೆ ಮಾಡಲಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಲಕ್ಷಗಟ್ಟಲೆ ಹಣದ ಹಂಚಿಕೆ ಆರೋಪ ಕೇಳಿಬಂದಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದ್ದು, ಮತಗಟ್ಟೆಗಳ ಬಳಿಯೇ ಮತದಾರರಿಗೆ ಆಮಿಷ ಒಡ್ಡಲಾಗಿದ್ದು, ಕೈವಾರ ಕ್ಷೇತ್ರದಲ್ಲಿ ಮತದಾರರಿಗೆ ತಲಾ 2 ಲಕ್ಷ ರೂಪಾಯಿ ಹಂಚಿಕೆ ಮಾಡಲಾಗಿದೆ ಎನ್ನಲಾಗಿದೆ.
ಇತ್ತ ನಂದಿ ಕ್ಷೇತ್ರದಲ್ಲಿ ತಲಾ 8 ಲಕ್ಷ ರೂಪಾಯಿಯವರೆಗೂ ಆಮಿಷ ಒಡ್ಡಲಾಗಿದ್ದರೆ, ಒಬ್ಬ ಅಭ್ಯರ್ಥಿ ಮುಕ್ಕಾಲು ಕೆ.ಜಿ. ತೂಕದ ಬೆಳ್ಳಿ ತಟ್ಟೆ ಹಾಗೂ 2 ಲಕ್ಷ ರೂಪಾಯಿ ನಗದು ನೀಡುತ್ತಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ಅಂತೆಯೇ ಮತ್ತೊಬ್ಬ ಅಭ್ಯರ್ಥಿ 8 ಲಕ್ಷ ರೂಪಾಯಿ ನಗದು ಮತ್ತು ಬೆಳ್ಳಿ ತಟ್ಟೆ ವಿತರಿಸಿದ್ದಾರೆ ಎನ್ನಲಾಗಿದೆ.
ಚಿಮುಲ್ ಚುನಾವಣೆಯಲ್ಲಿ ಮತದಾರರಿಗೆ ಹಣ ಮತ್ತು ಬೆಳ್ಳಿ ತಟ್ಟೆಗಳ ಮೂಲಕ ಭಾರಿ ಆಮಿಷ ಒಡ್ಡಲಾಗಿರುವ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.
ಅಂದಹಾಗೆ ಕೋಲಾರದಿಂದ ವಿಭಜನೆಯಾದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟ ಸಹಕಾರ ಸಂಘಕ್ಕೆ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಒಟ್ಟು 952 ಮತದಾರರು ಇದ್ದಾರೆ.
ಫಲಿತಾಂಶ ಅತಂತ್ರ?
ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಚುನಾವಣೆಯ ಫಲಿತಾಂಶ ಅತಂತ್ರವಾಗಿದೆ ಎಂದು ಹೇಳಲಾಗಿದೆ. ಅಧಿಕಾರ ಹಿಡಿಯಲು ಕಾಂಗ್ರೆಸ್ ಪಕ್ಷೇತರರು ಮತ್ತು ನಾಮನಿರ್ದೇಶಿತ ಸದಸ್ಯರ ಮೊರೆ ಹೋಗುವ ಸಾಧ್ಯತೆ ಇದೆ. ಭಾನುವಾರ ಒಕ್ಕೂಟಕ್ಕೆ ಚುನಾವಣೆ ನಡೆಯಿತು.
ಒಟ್ಟು 13 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಆರು, ಬಿಜೆಪಿ ಜೆಡಿಎಸ್ ಮೈತ್ರಿಕೂಟ ಐದು ಮತ್ತು ಪಕ್ಷೇತರ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಬೆಂಬಲಿತ (ಕೆಎಚ್ಪಿ ಬಣ) ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.