ಕಾರವಾರ: ಅನಾರೋಗ್ಯದಿಂದಾಗಿ ಉತ್ತರ ಕನ್ನಡದ ಮುಂಡಗೋಡ ಪೊಲೀಸ್ ಠಾಣೆಯ ಸಬ್-ಇನ್ಸ್ಪೆಕ್ಟರ್ 33 ವರ್ಷದ ಯಲ್ಲಾಲಿಂಗ ಕುನ್ನೂರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ದಕ್ಷ ಪ್ರಾಮಾಣಿಕ ಅಧಿಕಾರಿಯಾಗಿದ್ದ ಕಲಬುರಗಿಯ ಜೇವರ್ಗಿಯ ಯಲ್ಲಾಲಿಂಗ ಅನೇಕ ವರ್ಷಗಳಿಂದ ಉತ್ತರ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಯಲ್ಲಾಲಿಂಗ ಅವರ ಅಕಾಲಿಕ ಸಾವು ಸಾರ್ವಜನಿಕರು ಮತ್ತು ಪೊಲೀಸ್ ಇಲಾಖೆಯಲ್ಲಿ ಆಘಾತ ಮೂಡಿಸಿದೆ. ಅವರ ನಿಧನಕ್ಕೆ ಪೊಲೀಸರು, ಸಾರ್ವಜನಿಕರು ಸಂತಾಪ ವ್ಯಕ್ತಪಡಿಸಿದ್ದಾರೆ.