ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆಯೊಂದು ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಬಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಭುವಳ್ಳಿ ಗ್ರಾಮದ ಶ್ರೇಯಸ್ (8) ಚಿರತೆ ದಾಳಿಯಿಂದ ಗಾಯಗೊಂಡ ಬಾಲಕನಾಗಿದ್ದಾನೆ. ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತಾದಿಗಳು ಪಾದಯಾತ್ರೆಯ ಮೂಲಕ ತೆರಳುವುದು ವಾಡಿಕೆ. ಅದರಂತೆ ಪಾದಯಾತ್ರೆಯ ಮೂಲಕ ಪೊನ್ನಾಚಿ ಕ್ರಾಸ್ನಿಂದ ತಲುಪಿ, ನಂತರ ಮುಂದೆ ಅರಣ್ಯ ಪ್ರದೇಶದಲ್ಲಿ ತೆರಳುತ್ತಿದ್ದಾಗ ಬಾಲಕನ ಮೇಲೆ ಚಿರತೆ ದಾಳಿ ಮಾಡಿದೆ.
ಬಾಲಕ ಕುಟುಂಬಸ್ಥರೊಂದಿಗೆ ಮಧ್ಯಾಹ್ನ 11.30ರಲ್ಲಿ ತಾಳುಬೆಟ್ಟದ ಮೂಲಕ ಮ.ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದನು. ಈ ವೇಳೆ 7ನೇ ತಿರುವಿನಲ್ಲಿ ಚಿರತೆ ದಿಢೀರ್ ದಾಳಿ ನಡೆಸಿದ ಪರಿಣಾಮ ಬಾಲಕನ ಕಿವಿ ಹಾಗೂ ಕೈ ಗಾಯಗೊಂಡಿದೆ.
ಬಾಲಕನನ್ನು ಮಲೆ ಮಹದೇಶ್ವರಬೆಟ್ಟದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗಿದೆ.
2026 ಜನವರಿ 21ರಂದು ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ-ತಾಳುಬೆಟ್ಟ ಮಾರ್ಗದಲ್ಲಿ ಪಾದಯಾತ್ರೆ ಸಾಗುವಾಗ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್ ಎಂಬುವರು ಚಿರತೆ ದಾಳಿಗೆ ಬಲಿಯಾಗಿದ್ದರು.
ಚೀರನಹಳ್ಳಿ ಗ್ರಾಮದ ಸುಮಾರು ಮೂವತ್ತಕ್ಕೂ ಹೆಚ್ಚು ಗ್ರಾಮದ ಜನರ ತಂಡ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯ ಮೂಲಕ ತೆರಳುತ್ತಿದ್ದರು. ಈ ವೇಳೆ ಚಿರತೆ ಕಾಣಿಸಿಕೊಂಡಿದೆ. ಇದನ್ನು ಕಂಡು ಗಾಬರಿಗೊಂಡ ಭಕ್ತರ ತಂಡ ದಿಕ್ಕಪಾಲಾಗಿ ಓಡಿದ್ದಾರೆ. ಈ ವೇಳೆ ಪ್ರವೀಣ್ ಅವರ ಮೇಲೆ ದಾಳಿ ನಡೆಸಿದ ಚಿರತೆ ಅರಣ್ಯ ಪ್ರದೇಶಕ್ಕೆ ಎಳೆದು ಸಾಯಿಸಿತು. ಈ ಘಟನೆಯ ಬೆನ್ನಲ್ಲೇ ಮತ್ತೆ ಚಿರತೆ ದಾಳಿ ಮಾಡಿರುವುದು ಭಕ್ತರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.
ಘಟನೆ ಬೆನ್ನಲ್ಲೇ ಜಿಲ್ಲಾಡಳಿತ, ಅರಣ್ಯ ಇಲಾಖೆ ಹಾಗೂ ಮಹದೇಶ್ವರ ಬೆಟ್ಟ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಕ್ರಮ ಕೈಗೊಂಡಿದ್ದು, ಪ್ರತಿ ಕಿಲೋಮೀಟರ್ಗೆ ತಂಡವೊಂದನ್ನು ನಿಯೋಜಿಸಿದೆ.
ತಂಡದಲ್ಲಿ ನಾಲ್ವರು ಕಾರ್ಯ ನಿರ್ವಹಿಸುತ್ತಿದ್ದು, ಪಾದಯಾತ್ರಿಗಳ ಸುರಕ್ಷತೆಗೆ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಡ್ರೋನ್ ಕ್ಯಾಮೆರಾದ ಮೂಲಕ ಕಾಡುಪ್ರಾಣಿಗಳ ಚಲನವಲನಗಳನ್ನು ಗಮನಿಸಲಾಗುತ್ತಿದೆ.