ಮಂಡ್ಯ: ಭಾನುವಾರ ಕಾರೆಕಟ್ಟೆ ಗ್ರಾಮದ ಬಳಿಯ ಕೀರ್ತಿ ಕೆಮಿಕಲ್ಸ್ ಇಂಡಸ್ಟ್ರೀಸ್ ಕಾರ್ಖಾನೆಯೊಂದರಲ್ಲಿ ರಾಸಾಯನಿಕ ಸಂಗ್ರಹಣಾ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಸಾವಿಗೀಡಾಗಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಸಾಯನಿಕ ಕಾರ್ಖಾನೆಯನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, ಬಿಹಾರ ಮೂಲಕ ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಗಾಯಾಳುಗಳನ್ನು ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ.
ಕೆಲವು ಸಮಯದಿಂದ ಕಾರೆಕಟ್ಟೆಯಿಂದ ಈ ಘಟಕದ ಸಾಮಗ್ರಿಗಳನ್ನು ಹೊಸ ಸ್ಥಳಕ್ಕೆ ಸಾಗಿಸುವ ಪ್ರಕ್ರಿಯೆಯಲ್ಲಿತ್ತು ಮತ್ತು ಭಾನುವಾರ ರಾಸಾಯನಿಕ ಟ್ಯಾಂಕ್ ಅನ್ನು ತೆರವುಗೊಳಿಸುತ್ತಿದ್ದಾಗ ಅವಘಡ ಸಂಭವಿಸಿದೆ. ಈ ಸಂಬಂಧ ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
2022ರಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಹತ್ತಿರದ ಪ್ರದೇಶಗಳಲ್ಲಿ ಬೆಳೆಗಳಿಗೆ ಹಾನಿಯಾಗಿ, ಎರಡು ನಾಯಿಗಳು ಸಾವಿಗೀಡಾಗಿದ್ದವು. ಇದು ಹತ್ತಿರದಲ್ಲಿ ವಾಸಿಸುವ ಜನರ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮ ಬೀರಿತು. ಇದನ್ನು ಉಲ್ಲೇಖಿಸಿ ಸ್ಥಳೀಯರು ಕಾರ್ಖಾನೆಯ ಸುರಕ್ಷತಾ ಕ್ರಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.
ರೈತರು ಮತ್ತು ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾದ ನಂತರ, ಸ್ಥಳೀಯ ಶಾಸಕರು ಮತ್ತು ಜಿಲ್ಲಾಡಳಿತದ ಮಧ್ಯಪ್ರವೇಶದಿಂದ ಕಾರ್ಖಾನೆಯ ಕಾರ್ಯಾಚರಣೆ ಸ್ಥಗಿತಗೊಂಡಿತು. ಬಳಿಕ ಮಾಲೀಕರು ಕಾರ್ಖಾನೆಯನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸಲು ನಿರ್ಧರಿಸಿದ್ದರು ಎಂದು ವರದಿಯಾಗಿದೆ.