ಬೆಂಗಳೂರು: ಎಸ್ಸಿ ಒಳ ಮೀಸಲಾತಿ ಮಸೂದೆಗೆ ಅನುಮೋದನೆ ನೀಡುವಂತೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ನೇತೃತ್ವದ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ.
ಮಂಗಳವಾರ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ನಿಯೋಗವು, ಒಳ ಮೀಸಲಾತಿ ಮಸೂದೆಗೆ ಅನುಮೋದನೆ ಕೋರಿ ಮನವಿ ಪತ್ರ ಸಲ್ಲಿಸಿತು.
ಪರಿಶಿಷ್ಟ ಜಾತಿ ಎಡಗೈ ಸಮುದಾಯದ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸಮುದಾಯ ಮುಖಂಡರನ್ನು ಒಳಗೊಂಡ ನಿಯೋಗ ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿತು.
ಸಂವಿಧಾನದ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಮೌಲ್ಯಗಳಿಗೆ ಅನುಗುಣವಾಗಿ ಪರಿಶಿಷ್ಟ ಜಾತಿಯ 101 ಒಳ ಸಮುದಾಯಗಳಿಗೆ ನ್ಯಾಯಸಮ್ಮತ ಮೀಸಲಾತಿ ಕಲ್ಪಿಸಲು ಮಸೂದೆ ಮಹತ್ವದ ಹೆಜ್ಜೆಯಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು.
ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳ ಸಹಮತದಿಂದ ಎರಡೂ ಸದನಗಳಲ್ಲಿ ಅಂಗೀಕರಿಸಲ್ಪಟ್ಟ ಒಳಮೀಸಲಾತಿ ಮಸೂದೆಗೆ ಅನುಮೋದನೆ ನೀಡಬೇಕು ಎಂದು ಮನವಿ ಮಾಡಿದರು.