ಸಾರಿಗೆ ನೌಕರರ ಮುಷ್ಕರದ ಎಚ್ಚರಿಕೆಗೆ ಸರ್ಕಾರ ಎಚ್ಚೆತ್ತುಕೊಂಡಿದ್ದು, ನೌಕರರ ಬೇಡಿಕೆಗಳಲ್ಲಿ ಪ್ರಮುಖವಾದ ವೇತನ ಬಾಕಿ ಪಾವತಿಗೆ ಮುಂದಾಗಿದೆ.
ಸಾರಿಗೆ ನೌಕರರಿಗೆ 38 ತಿಂಗಳ ವೇತನ ಬಾಕಿ ನೀಡಬೇಕಿದ್ದು, ಈ ಪೈಕಿ ಮೊದಲ ಹಂತದಲ್ಲಿ 26 ತಿಂಗಳ ಅರಿಯರ್ಸ್ ಪಾವತಿಸಲು ಸರ್ಕಾರ ಆದೇಶ ಪ್ರಕಟಿಸಿದೆ. ಏಪ್ರಿಲ್ 2025 ರಿಂದ ವೇತನ ಪರಿಷ್ಕರಣೆಗೂ ಒಪ್ಪಿಗೆ ಸೂಚಿಸಿದ್ದು, ನೌಕರರು ನಡೆಸಲುದ್ದೇಶಿಸಿದ್ದ ಬೃಹತ್ ಪ್ರತಿಭಟನೆ ರದ್ದಾಗುವ ಸಾಧ್ಯತೆ ಇದೆ.
ಸಾರಿಗೆ ಸಂಸ್ಥೆಯ 4 ನಿಗಮಗಳ (KSRTC, BMTC, NWKRTC, KKRTC) ನೌಕರರು ಒಟ್ಟು 38 ತಿಂಗಳ ವೇತನ ಹಿಂಬಾಕಿಯನ್ನು ನೀಡುವಂತೆ ಒತ್ತಾಯಿಸುತ್ತಿದ್ದರು. ಈ ಬಗ್ಗೆ ಗಂಭೀರ ಚರ್ಚೆ ನಡೆಸಿದ ರಾಜ್ಯ ಸರ್ಕಾರ, ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ, ಪ್ರಾಥಮಿಕ ಹಂತದಲ್ಲಿ 26 ತಿಂಗಳ ಅರಿಯರ್ಸ್ ನೀಡಲು ಅಧಿಕೃತ ಒಪ್ಪಿಗೆ ಸೂಚಿಸಿದೆ. 1-1-2021 ರಿಂದ 28-03-2023 ರವರೆಗೆ 26 ತಿಂಗಳ ಹಿಂಬಾಕಿ ನೌಕರರಿಗೆ ಸಿಗಲಿದೆ.
ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ನಂತರ ಮತ್ತೊಂದು ಪ್ರಮುಖ ಘೋಷಣೆ ಮಾಡಿದ್ದಾರೆ. 1ನೇ ಏಪ್ರಿಲ್ 2025 ರಿಂದ ಜಾರಿಗೆ ಬರುವಂತೆ ಸಾರಿಗೆ ನೌಕರರ ವೇತನವನ್ನು ಪರಿಷ್ಕರಣೆ ಮಾಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ವೇತನದಲ್ಲಿ ಎಷ್ಟು ಪ್ರಮಾಣದ ಏರಿಕೆ ಮಾಡಬೇಕು ಎಂಬ ಬಗ್ಗೆ ಸಾರಿಗೆ ಸಂಘಟನೆಗಳ ಮುಖಂಡರೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.