ಬೆಂಗಳೂರು: ವಿಧಾನಸಭೆ ಅಧಿವೇಶನಕ್ಕೆ ಮಾಧ್ಯಮಗಳಿಗೆ ನಿರ್ಬಂಧದ ಬಳಿಕ ರಾಜ್ಯ ಸರ್ಕಾರ ಇದೀಗ ವಿಧಾನಸೌಧದಲ್ಲಿಯೂ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದು. ಸರ್ಕಾರದ ಈ ನಡೆಗೆ ವಿಪಕ್ಷಗಳು ತೀವ್ರವಾಗಿ ಕಿಡಿಕಾರುತ್ತಿವೆ.
ಪ್ರಶ್ನೆ ಕೇಳುವ ಪತ್ರಕರ್ತರನ್ನು ಕಂಡರೆ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಇಷ್ಟೊಂದು ನಡುಕವೇ? ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರುತ್ತಿರುವುದು ಸಿದ್ದರಾಮಯ್ಯ ಸರ್ಕಾರದ ಹೇಡಿತನಕ್ಕೆ ಸಾಕ್ಷಿ ಎಂದು ಜೆಡಿಎಸ್ ಕಿಡಿಕಾರಿದೆ,
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಸಚಿವರು, ಶಾಸಕರ ಭ್ರಷ್ಟಾಚಾರವನ್ನು ಪ್ರಶ್ನಿಸಿದರೆ ಭಯವೇಕೆ? ಮಾಧ್ಯಮಗಳ ಧ್ವನಿ ಅಡಗಿಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ನಡೆಯಲ್ಲವೇ ಸಿದ್ದರಾಮಯ್ಯ ಅವರೇ? ಎಂದು ಪ್ರಶ್ನಿಸಿದೆ.
ಸಂವಿಧಾನ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವ ಸಮಾಜವಾದಿ ಮುಖವಾಡ ತೊಟ್ಟ ಮಜವಾದಿಗೆ ಇಂದು ನಡುಕ ಶುರುವಾಗಿದೆ. ಸರ್ಕಾರದ ಹಗರಣಗಳು, ಕಮಿಷನ್, ಟ್ರಾನ್ಸ್ ಫರ್ ದಂಧೆ, ಅಕ್ರಮಗಳು ಬಯಲಾಗುತ್ತವೆ ಎಂಬ ಆತಂಕದಿಂದ ಮಾಧ್ಯಮಗಳ ಸ್ವಾತಂತ್ರ್ಯ ಕಸಿಯಲು ಮುಂದಾಗಿದೆ. ಇದು ಪ್ರಜಾಪ್ರಭುತ್ವದ ಆಶಯದ ಮೇಲೆ ಪ್ರಹಾರವಾಗಿದೆ. ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ. ಮುಖ್ಯಮಂತ್ರಿಗಳೇ, ಸತ್ಯವನ್ನು ಮುಚ್ಚಿಡಲು ಗೋಡೆಗಳನ್ನು ಕಟ್ಟುವುದು ಬಿಟ್ಟು, ಪಾರದರ್ಶಕ ಆಡಳಿತ ನೀಡಿ ಎಂದು ಆಗ್ರಹಿಸಿದೆ.
ಜೆಡಿಎಸ್ ಯುವಕ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಮಾತನಾಡಿ, ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದು ದೇಶಾದ್ಯಂತ 'ಅಭಿವ್ಯಕ್ತಿ ಸ್ವಾತಂತ್ರ್ಯ'ದ ಭಾಷಣ ಮಾಡುವ ರಾಹುಲ್ ಗಾಂಧಿ ಅವರೇ, ಒಮ್ಮೆ ನಿಮ್ಮದೇ ಪಕ್ಷದ ಆಡಳಿತವಿರುವ ಕರ್ನಾಟಕದತ್ತ ನೋಡಿ, ವಿಧಾನಸೌಧದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿರುವುದು ಯಾವ 'ಸಂವಿಧಾನ'ದ ನಿಯಮ ರಾಹುಲ್ ಅವರೇ? ಮೊದಲು ಕರ್ನಾಟಕ ಸರ್ಕಾರಕ್ಕೆ ಸಂವಿಧಾನದ ಪಾಠ ಮಾಡಿ ಎಂದು ಆಗ್ರಹಿಸಿದ್ದಾರೆ.
ಮಾಧ್ಯಮಗಳನ್ನು ಪಂಜರದಲ್ಲಿ ಇಡಲು ಹೊರಟಿರುವ ಈ ಕರಾಳ ಸುತ್ತೋಲೆ ಅಪ್ಪಟ "ತುರ್ತು ಪರಿಸ್ಥಿತಿ"ಯ ಮುಂದುವರಿದ ಭಾಗ ಎಂದು ಕಿಡಿಕಾರಿದ್ದಾರೆ.