ಬೆಂಗಳೂರು: ತಾವು ಕೇಂದ್ರ ಸರ್ಕಾರದ ಜಿಎಸ್ಟಿ ಅಧಿಕಾರಿಗಳೆಂದು ಹೇಳಿಕೊಂಡು ಗುಟ್ಕಾ ವ್ಯಾಪಾರಿಗೆ ಬೆದರಿಸಿ 5 ಲಕ್ಷ ರೂ. ಸುಲಿಗೆ ಮಾಡಿದ್ದ ಇಬ್ಬರು ಹೊರಗುತ್ತಿಗೆ ನೌಕರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನಾಗರಾಜ ಪಿ ಮತ್ತು ದಾದಾಪಿರ್ ಎಂದು ಗುರುತಿಸಲಾಗಿದ್ದು, ಈ ಇಬ್ಬರೂ ಕೇಂದ್ರ ಜಿಎಸ್ಟಿ ಕಚೇರಿಯಲ್ಲಿ ಹೌಸ್ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ನಕಲಿ ಗುರುತಿನ ಚೀಟಿಗಳನ್ನು ಸೃಷ್ಟಿಸಿ, ಜಿಎಸ್ಟಿ ಅಧಿಕಾರಿಗಳೆಂದು ಹೇಳಿಕೊಂಡು ವ್ಯಾಪಾರಿಯಿಂದ 5 ಲಕ್ಷ ರೂ. ಹಣ ವಸೂಲಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು ಪಶ್ಚಿಮ ಆಯುಕ್ತಾಲಯದ ಕೇಂದ್ರ ತೆರಿಗೆ(ಜಿಎಸ್ಟಿ) ಪ್ರಧಾನ ಆಯುಕ್ತರ ಕಚೇರಿ ಫೆಬ್ರವರಿ 17 ರಂದು ಬನಶಂಕರಿ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ತನಿಖೆ ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪೊಲೀಸರ ಪ್ರಕಾರ, ಜಿಎಸ್ಟಿ ಕಚೇರಿಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಹೌಸ್ಕೀಪಿಂಗ್ ಸಿಬ್ಬಂದಿಯಾಗಿದ್ದ ಈ ಇಬ್ಬರು ಆರೋಪಿಗಳು ನಕಲಿ ಗುರುತಿನ ಚೀಟಿಗಳನ್ನು ಸೃಷ್ಟಿಸಿ, ತಾವು ಕೇಂದ್ರ ಸರ್ಕಾರಿ ಅಧಿಕಾರಿಗಳು ಹೇಳಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಕಲಿ ಗುರುತಿನ ಚೀಟಿಗಳನ್ನು ಬಳಸಿ, ಅವರು ಪೀಣ್ಯದ ವ್ಯಾಪಾರಿಯನ್ನು ಬೆದರಿಸಿ ಹಣ ಸುಲಿಗೆ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತನಿಖೆಯ ಆಧಾರದ ಮೇಲೆ, ಫೆಬ್ರವರಿ 17 ರಂದು ಅವರ ಕೆಲಸದ ಸ್ಥಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಯಿತು ಎಂದು ಅವರು ಹೇಳಿದ್ದಾರೆ.
ವಿಚಾರಣೆಯ ಸಮಯದಲ್ಲಿ, ಆರೋಪಿಗಳು ಅಪರಾಧವನ್ನು ಒಪ್ಪಿಕೊಂಡಿದ್ದು, ಸುಲಭವಾಗಿ ಹಣ ಗಳಿಸುವುದು ಅವರ ಉದ್ದೇಶವಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.
ಆರೋಪಿಗಳಿಂದ 5 ಲಕ್ಷ ರೂ. ನಗದು ಮತ್ತು ಮೂರು ನಕಲಿ ಗುರುತಿನ ಚೀಟಿಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
"ಈ ನಕಲಿ ಗುರುತಿನ ಚೀಟಿಗಳನ್ನು ತಯಾರಿಸಲು ಅವರಿಗೆ ಯಾರು ಸಹಾಯ ಮಾಡಿದರು, ಅವುಗಳನ್ನು ಎಲ್ಲಿ ಮಾಡಲಾಯಿತು ಮತ್ತು ಅವರು ಇದೇ ರೀತಿಯ ರೀತಿ ಇತರರನ್ನು ಬೆದರಿಸಿ, ಹಣ ಪಡೆದಿದ್ದಾರೆಯೇ ಅಥವಾ ವಂಚಿಸಿದ್ದಾರೆಯೇ ಎಂಬ ಬಗ್ಗೆಯೂ ನಾವು ತನಿಖೆ ನಡೆಸುತ್ತಿದ್ದೇವೆ" ಎಂದು ಅವರು ಹೇಳಿದ್ದಾರೆ.
ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.