ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಇಲಾಖೆಗಳ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಚುನಾವಣಾ ಭರವಸೆಯನ್ನು ಪಾಲಿಸಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತೀವ್ರವಾಗಿ ಟೀಕಿಸಿದರು.
ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲಾ ಖಾಲಿ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ತಮ್ಮ ಚುನಾವಣಾಪೂರ್ವ ಭರವಸೆ ನೀಡಿದ್ದರು.
ರಾಹುಲ್ ಗಾಂಧಿ ಅವರು ಬೆಳಗಾವಿಗೆ ಬಂದಾಗ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 2.5 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ಹೇಳಿದ್ದರು. ಆದರೆ ಮುಖ್ಯಮಂತ್ರಿ ಎಲ್ಲವನ್ನೂ ಮರೆತಂತಿದ್ದಾರೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವಿನ ‘ಕುರ್ಚಿ ಯುದ್ಧ’ದಿಂದ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವರಿಗೆ ಸಮಯವೇ ಇಲ್ಲ ಎಂದರು.
ಧಾರವಾಡ ಸೇರಿದಂತೆ ಬೆಂಗಳೂರು, ವಿಜಯಪುರ, ಬಾಗಲಕೋಟೆ, ಬೀದರ್ ಮುಂತಾದ ಕಡೆಗಳಲ್ಲಿ ನಡೆದ ಪ್ರತಿಭಟನೆಗಳನ್ನು ಉಲ್ಲೇಖಿಸಿದ ಅವರು, ಸರ್ಕಾರ ಕುಂಭಕರ್ಣನ ನಿದ್ರೆಯಲ್ಲಿ ಮುಳುಗಿದಂತಿದೆ, ಉದ್ಯೋಗ ಸೃಷ್ಟಿಸುವ ಮನೋಬಲವೇ ಇಲ್ಲ ಎಂದು ಕಿಡಿಕಾರಿದರು.
ಪ್ರತಿಭಟನೆಗಳ ನಡುವೆಯೂ ಅವರು ಇದರ ಬಗ್ಗೆ ಒಂದೇ ಮಾತನ್ನೂ ಆಡಿಲ್ಲ ಎಂದರು. ಎಲ್ಲ ಸಮಸ್ಯೆಗಳಿಗೂ ಹಿಂದಿನ ಬಿಜೆಪಿ ಸರ್ಕಾರವನ್ನೇ ದೋಷಾರೋಪಣೆ ಮಾಡುವುದು ಸರ್ಕಾರದ ಪ್ರವೃತ್ತಿಯಾಗಿದೆ ಎಂದು ಅವರು ಆರೋಪಿಸಿದರು.