ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆ ಭಾರೀ ಅನಾಹುತಕ್ಕೆ ಕಾರಣವಾಗಿದ್ದು, ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಭೂಕುಸಿತವಾಗಿ ಮನೆ ಮೇಲೆ ಮಣ್ಣು ಬಿದ್ದ ಪರಿಣಾಮ ತಾಯಿ ಹಾಗೂ ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಮೃತರನ್ನು ಶಾಂತಾ (46), ಅನಾಮಿಕಾ ಚೌರಾಸಿಯಾ (8) ಹಾಗೂ ಪರಿ (4) ಎಂದು ಗುರುತಿಸಲಾಗಿದೆ. ಇವರು ಮೂಲತಃ ಬಿಹಾರದ ನಿವಾಸಿಗಳಾಗಿದ್ದು, ಕಟ್ಟಡ ನಿರ್ಮಾಣ ಕಾಮಗಾರಿಗಾಗಿ ಮಂಗಳೂರಿಗೆ ಬಂದು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ಮಂಗಳವಾರ ರಾತ್ರಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಕೃತಕ ನೆರೆ ಹಾಗೂ ಭೂಕುಸಿತದ ಘಟನೆಗಳು ವರದಿಯಾಗಿವೆ.
ಇದೇ ವೇಳೆ ಕಂಕನಾಡಿ ನಗರ ಪೊಲೀಸ್ ಠಾಣೆ ಸಮೀಪದ ನಾಗುರಿಯಲ್ಲಿರುವ ಮನೆಯ ಮೇಲ್ಭಾಗದ ಮೇಲೆ ಮಣ್ಣು ಏಕಾಏಕಿ ಕುಸಿದು ಬಿದ್ದಿದೆ.
ಘಟನೆ ವೇಳೆ ಮನೆಯೊಳಗಿದ್ದ ನಾಲ್ವರು ಮಣ್ಣಿನಡಿ ಸಿಲುಕಿದ್ದರು. ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ ಬಳಿಕ ಅಗ್ನಿಶಾಮಕ ದಳ, ಎಸ್ಡಿಆರ್ಎಫ್ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಅವಶೇಷಗಳಡಿ ಸಿಲುಕಿದ್ದವರನ್ನು ಹೊರತೆಗೆದರು. ಆದರೆ, ಶಾಂತಾ ಹಾಗೂ ಅವರ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿರುವುದು ದೃಢಪಟ್ಟಿದೆಯ
ಘಟನೆಯಲ್ಲಿ ಸಿಲುಕಿದ್ದ ಇನ್ನೂ ಮೂವರನ್ನು ರಕ್ಷಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಕುರಿತು ವೈದ್ಯರು ನಿಗಾ ವಹಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಬಾಡಿಗೆ ಮನೆಯೊಂದರಲ್ಲಿ ನಾಲ್ಕು ಕುಟುಂಬಗಳು ವಾಸಿಸುತ್ತಿದ್ದವು. ಬುಧವಾರ ಮುಂಜಾನೆ ಸುಮಾರು 4.45 ಗಂಟೆ ವೇಳೆಗೆ ಗುಡ್ಡ ಕುಸಿದ ಪರಿಣಾಮ ಮನೆಯ ಹಿಂಭಾಗದ ಗೋಡೆ ಸಂಪೂರ್ಣ ಕುಸಿದು ಬಿದ್ದಿದೆ. ಇದರಿಂದ ಮನೆಯೊಳಗಿದ್ದ ಕುಟುಂಬಗಳು ಅಪಾಯಕ್ಕೆ ಸಿಲುಕಿದವು.
ಘಟನಾ ಸ್ಥಳದಲ್ಲಿ ಮಣ್ಣಿನ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ಯಾವುದೇ ವ್ಯಕ್ತಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಈ ನಡುವೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದು, ಬಳಿಕ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದಾರೆ.