ಬೆಂಗಳೂರು: ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ವೃತ್ತದ ಬಳಿ ಅಳವಡಿಸಲಾಗಿದ್ದ ಹಿಂದಿ ನಾಮಫಲಕವನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ (KRV) ಕಾರ್ಯಕರ್ತರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಮಂಗಳವಾರ ಸಂಜೆ ಕೆಆರ್ವಿ ಕಾರ್ಯಕರ್ತರು ಬೆಲ್ ವೃತ್ತದ ಬಳಿ ಅಳವಡಿಸಲಾಗಿದ್ದ ಹಿಂದಿ ನಾಮಫಲಕವನ್ನು ಮೊದಲು ಹಾನಿಗೊಳಿಸಿ, ಬಳಿಕ ಅದನ್ನು ಕೆಳಗೆ ಕೆಡವಿದ್ದರು.
ಈ ವೇಳೆ, ನಾಮಫಲಕವನ್ನು ಅಕ್ರಮವಾಗಿ ಅಳವಡಿಸಲಾಗಿದೆ ಎಂದು ಆರೋಪಿಸಿದ ಅವರು, ಕರ್ನಾಟಕದಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸಿ, ಪ್ರತಿಭಟನೆ ನಡೆಸಿದರು.
ಕರ್ನಾಟಕದಲ್ಲಿ ಕನ್ನಡಕ್ಕೇ ಮೊದಲ ಆದ್ಯತೆ ಇರಬೇಕು. ಹಿಂದಿ ಭಾಷೆಯನ್ನು ಉತ್ತೇಜಿಸುವ ಅಥವಾ ಹೇರಿಕೆ ಮಾಡುವ ಯಾವುದೇ ಪ್ರಯತ್ನವನ್ನು ನಾವು ವಿರೋಧಿಸುತ್ತೇವೆ" ಎಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಬುಧವಾರ ಜಾಲಹಳ್ಳಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಯೊಬ್ಬರು, "ಸುಮಾರು 15 ಮಂದಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಮಹಿಳೆಯರೂ ಸೇರಿದಂತೆ, ಪ್ರತಿಭಟನೆ ವೇಳೆ ನಾಮಫಲಕವನ್ನು ಧ್ವಂಸಗೊಳಿಸಿದ್ದಾರೆ.
ಪ್ರತಿಭಟನೆಯಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗಿದ್ದು, ಸಾರ್ವಜನಿಕ ಆಸ್ತಿಗೂ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ" ಎಂದು ತಿಳಿಸಿದ್ದಾರೆ.