ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗದ ವಿಶ್ವಾಸಾರ್ಹತೆಗೆ ದೊಡ್ಡ ಧಕ್ಕೆ ತರುವಂತಹ ಗಂಭೀರ ಹಗರಣವೊಂದು ಬೆಳಕಿಗೆ ಬಂದಿದ್ದು ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು, ಸ್ವಜನಪಕ್ಷಪಾತ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಇಡೀ ಪ್ರಕರಣದ ಕುರಿತು ಉನ್ನತ ಮಟ್ಟದ ಸಮಗ್ರ ತನಿಖೆ ನಡೆಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಪ್ರತ್ಯೇಕ ಪತ್ರ ಬರೆದಿದ್ದಾರೆ.
ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ಮತ್ತು ನಿಯಮಗಳ ಉಲ್ಲಂಘನೆ ನಡೆದಿರುವ ಕುರಿತು ಸ್ವತಃ ಕೆಪಿಎಸ್ಸಿ ಕಾರ್ಯದರ್ಶಿಯವರೇ ಸರ್ಕಾರಕ್ಕೆ ವಿಸ್ತೃತ ವರದಿಯೊಂದನ್ನು ಸಲ್ಲಿಸಿದ್ದು, ಇದು ರಾಜಕೀಯ ವಲಯದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಕೆಪಿಎಸ್ಸಿ ಅಧ್ಯಕ್ಷರ ನಡೆ ಸಹಜ ನ್ಯಾಯ ತತ್ವಕ್ಕೆ ಸಂಪೂರ್ಣ ವಿರುದ್ಧವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಯ ನೇಮಕಾತಿ ಪರೀಕ್ಷೆಯಲ್ಲಿ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಸ್ವಂತ ಪುತ್ರಿಯರೇ ಅಭ್ಯರ್ಥಿಗಳಾಗಿದ್ದರು.
ತಮ್ಮ ಕುಟುಂಬದವರೇ ಅಭ್ಯರ್ಥಿಯಾಗಿದ್ದಾಗ ಆ ಪ್ರಕ್ರಿಯೆಯಿಂದ ದೂರವಿರಬೇಕಾದ ಅಧ್ಯಕ್ಷರು, ತಾವೇ ಖುದ್ದಾಗಿ ಇಡೀ ಆಯ್ಕೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ. ಅಷ್ಟೇ ಅಲ್ಲದೆ, ಇತ್ತೀಚೆಗೆ ಪ್ರಕಟಗೊಂಡ ಆಯ್ಕೆ ನಡಾವಳಿಗಳ ಅಂತಿಮ ಪಟ್ಟಿಗೂ ತಾವೇ ಸಹಿ ಹಾಕುವ ಮೂಲಕ ನೈತಿಕತೆಯ ಎಲ್ಲಾ ಗೆರೆಗಳನ್ನು ದಾಟಿದ್ದಾರೆ ಎಂದು ಜೋಶಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅಧ್ಯಕ್ಷರ ಪುತ್ರಿಯರ ಆಯ್ಕೆ ಕೇವಲ ಸ್ವಜನಪಕ್ಷಪಾತಕ್ಕೆ ಸೀಮಿತವಾಗಿಲ್ಲ, ಬದಲಿಗೆ ಇದರಲ್ಲಿ ದೊಡ್ಡ ಮಟ್ಟದ ಕಾನೂನು ಉಲ್ಲಂಘನೆಯೂ ನಡೆದಿದೆ ಎಂಬ ಸಂಶಯಗಳು ವ್ಯಕ್ತವಾಗಿವೆ. ಪುತ್ರಿಯರ ಪೈಕಿ ಒಬ್ಬರು ಪಡೆದಿರುವ ಮೀಸಲಾತಿ ಅರ್ಹತೆಯೇ ಸಂಶಯಾಸ್ಪದವಾಗಿದೆ.
ಸರ್ಕಾರ ನಿಗದಿಪಡಿಸಿರುವ ಆದಾಯದ ಮಾನದಂಡಗಳನ್ನು ಪೂರೈಸದಿದ್ದರೂ, ಸುಳ್ಳು ಮಾಹಿತಿಗಳನ್ನು ಒದಗಿಸಿ ಮೀಸಲಾತಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಇದು ಹಗಲಿರುಳು ಕಷ್ಟಪಟ್ಟು ಓದುವ ಅರ್ಹ ಮತ್ತು ಪ್ರಾಮಾಣಿಕ ಕೆಪಿಎಸ್ಸಿ ಉದ್ಯೋಗಾಕಾಂಕ್ಷಿಗಳಿಗೆ ಎಸಗಿರುವ ದ್ರೋಹವಾಗಿದೆ. ಇಡೀ ನೇಮಕಾತಿ ವ್ಯವಸ್ಥೆಗೇ ಅಂಟಿದ ಕಪ್ಪುಚುಕ್ಕೆಯಾಗಿದೆ ಎಂದು ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.