ಬೆಂಗಳೂರು: ಕಲ್ಲುಗಣಿಯಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರು ಮೃತಪಟ್ಟಿರುವ ಪ್ರಕರಣದಲ್ಲಿ ಅಧಿಕಾರಿಗಳ ವರದಿ ಬಂದ ಬಳಿಕ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವರದಿಯ ಆಧಾರದ ಮೇಲೆ ಮೃತರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಕಲ್ಲುಗಣಿ ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುತ್ತಿತ್ತೇ ಹಾಗೂ ಅಗತ್ಯ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗುತ್ತಿತ್ತೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬಂಡೆ ಕುಸಿತವು ಸ್ಫೋಟದಿಂದ ಸಂಭವಿಸಿಲ್ಲ ಎಂಬುದು ಗೊತ್ತಾಗಿದೆ ಎಂದು ಅವರು ಹೇಳಿದರು.
ಮೃತ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಕಲ್ಲುಗಣಿ ನಿರ್ವಾಹಕರಿಗೆ ಸೂಚನೆ ನೀಡಲಾಗಿದೆ ಎಂದರು.
ಕೆಲವು ದಿನಗಳ ಹಿಂದೆ ಇದೇ ಕಲ್ಲುಗಣಿಯಲ್ಲಿ ನಡೆದ ಸ್ಫೋಟದಲ್ಲಿ ಚಿರತೆಯೊಂದು ಮೃತಪಟ್ಟಿದ್ದು, ಸಮರ್ಪಕ ತನಿಖೆ ನಡೆಸದೆ ಪ್ರಕರಣವನ್ನು ಮುಚ್ಚಿಹಾಕಲಾಗಿದೆ ಎಂಬ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ಈ ವಿಷಯವನ್ನು ಶಾಸಕ ಸರ್ಕಾರದ ಗಮನಕ್ಕೆ ತಂದಿದ್ದಾರೆ. ವರದಿ ಬಂದ ನಂತರವೇ ನಾನು ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು. ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಲ್ಲುಗಣಿ ನಡೆಸುವವರು ನಿಯಮಗಳು ಮತ್ತು ಕಾನೂನುಗಳನ್ನು ಉಲ್ಲಂಘಿಸಿರುವುದು ದೃಢಪಟ್ಟರೆ, ಎಫ್ಐಆರ್ ದಾಖಲಿಸುವುದು ಸೇರಿದಂತೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ಬಳಿಕ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಅಗತ್ಯ ಮಾರ್ಗಸೂಚಿ
ಗಣಿಗಾರಿಕೆ ಕ್ಷೇತ್ರದ ಕುರಿತು ಶೀಘ್ರದಲ್ಲೇ ಸಭೆ ನಡೆಸಿ ಕಲ್ಲುಗಣಿ ಕಾರ್ಯಾಚರಣೆಗೆ ಸಮಗ್ರ ಮಾರ್ಗಸೂಚಿಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.
ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಅಗತ್ಯವಿರುವ ಎಲ್ಲ ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿನ ಎಲ್ಲಾ ಕಲ್ಲುಗಣಿಗಳ ಕಾರ್ಯಾಚರಣೆಯನ್ನು ನಿಯಂತ್ರಿಸಲು ಹೊಸ ಮಾರ್ಗಸೂಚಿಗಳನ್ನು ರೂಪಿಸಲಾಗುವುದು ಎಂದು ತಿಳಿಸಿದ ಮುಖ್ಯಮಂತ್ರಿ, ಮುಂದೆ ಎಲ್ಲ ಕಲ್ಲುಗಣಿಗಳೂ ಈ ಮಾರ್ಗಸೂಚಿಗಳ ಪ್ರಕಾರವೇ ಕಾರ್ಯನಿರ್ವಹಿಸಬೇಕು. ಇಂತಹ ದುರ್ಘಟನೆಗಳು ಮರುಕಳಿಸದಂತೆ ರಾಜ್ಯದ ಎಲ್ಲಾ ಕಲ್ಲುಗಣಿಗಳಿಗೆ ಅನ್ವಯವಾಗುವ ನಿಯಮಗಳನ್ನು ಜಾರಿಗೆ ತರುತ್ತೇವೆ ಎಂದರು.
ಮೃತರ ಕುಟುಂಬಗಳಿಗೆ ಸರ್ಕಾರದ ನಿಯಮಾವಳಿ ಪ್ರಕಾರ ಪರಿಹಾರ ನೀಡಲಾಗುವುದು. ಜೊತೆಗೆ, ಕಲ್ಲುಗಣಿ ಮಾಲೀಕರಿಗೂ ಪ್ರತ್ಯೇಕ ಪರಿಹಾರ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.