ರಾಮನಗರ: ಸರ್ಕಾರ ಬರುತ್ತೆ ಹೋಗುತ್ತೆ, ಮುಖ್ಯಮಂತ್ರಿಗಳೂ ಬರ್ತಾರೆ ಹೋಗ್ತಾರೆ. ನಿಮ್ಮ ಮುಖ್ಯಮಂತ್ರಿ ಗೂಟ ಹೊಡೆದುಕೊಂಡು ಇರಲ್ಲ. ಅಧಿಕಾರಿಗಳು ಕಾನೂನು ವ್ಯಾಪ್ತಿಯಲ್ಲಿ ಕೆಲಸ ಮಾಡಿ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್- ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್ )ಯಲ್ಲಿ ಕೇಂದ್ರ ಚುನಾವಣಾ ಆಯೋಗ ನಿಗದಿಪಡಿಸಿರುವ ನಿಯಮಾವಳಿ ಹಾಗೂ ಮಾರ್ಗಸೂಚಿಗಳನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗಾಳಿಗೆ ತೂರಿ ಅಕ್ರಮ ಎಸಗುತ್ತಿದೆ ಎಂದು ಆರೋಪಿಸಿದರು.
ಎಸ್ ಐಆರ್ ಪ್ರಕ್ರಿಯೆಯ ನಿಯಮ ಉಲ್ಲಂಘಿಸಿದ ಬಿಎಲ್ಒಗಳಿಗೆ ಕೇವಲ ನೋಟಿಸ್ ನೀಡಿ ನಾಟಕ ಮಾಡುತ್ತಿದ್ದಾರೆ. ಕೂಡಲೇ ಅವರೆಲ್ಲರನ್ನು ಅಮಾನತು ಮಾಡಬೇಕು. ರಾಮನಗರದ 35 ಸೂಕ್ಷ್ಮ ಮತಗಟ್ಟೆಗಳ ಎಸ್ಐಆರ್ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗವೇ ಖುದ್ದಾಗಿ ಬಂದು ನಡೆಸಬೇಕು.
ಅಕ್ರಮದ ಎಲ್ಲಾ ವೀಡಿಯೋ ಸಾಕ್ಷ್ಯಗಳನ್ನು ಪೆನ್ಡ್ರೈವ್ನಲ್ಲಿ ಹಾಕಿ ರಾಜ್ಯ ಚುನಾವಣಾ ಆಯೋಗ ಹಾಗೂ ದೆಹಲಿಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗುವುದು. ಅಗತ್ಯಬಿದ್ದರೆ ಪಶ್ಚಿಮ ಬಂಗಾಳದಂತೆ ಸೆಂಟ್ರಲ್ ಫೋರ್ಸ್ ತಂದು ಎಸ್ಐಆರ್ ನಡೆಸುವಂತೆ ಒತ್ತಾಯಿಸುತ್ತೇವೆ ಎಂದರು.
ದೆಹಲಿಯಲ್ಲಿ ಕುಳಿತು ವೋಟ್ ಚೋರಿ ಬಗ್ಗೆ ಮಾತನಾಡುವ ರಾಹುಲ್ಗಾಂಧಿ ಅವರೇ, ಕರ್ನಾಟಕದಲ್ಲಿ ನಿಮ್ಮದೇ ಸರ್ಕಾರ ಏನು ಮಾಡುತ್ತಿದೆ ಎಂಬುದನ್ನು ಬಂದು ನೋಡಲಿ. ಈ ವಿಚಾರವನ್ನು ದೆಹಲಿಗೆ ತೆಗೆದುಕೊಂಡು ಹೋಗಿ, ರಾಹುಲ್ ಗಾಂಧಿಗೆ ಅರ್ಥವಾಗುವಂತೆ ಇಂಗ್ಲಿಷ್ನಲ್ಲೇ ಪ್ರೆಸ್ಮೀಟ್ ಮಾಡುತ್ತೇನೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾಡುತ್ತಿರುವ ಎಲ್ಲಾ ಯೋಜನೆಗಳು 30 ಸಾವಿರ ಕೋಟಿ ದಾಟುತ್ತಿವೆ. ಇದನ್ನು ನೋಡಿದರೆ ದೆಹಲಿಯ ಗಾಂಧಿ ಕುಟುಂಬಕ್ಕೆ ಇವರು ಯಾವುದೋ ದೊಡ್ಡ ಕಮಿಟ್ಮೆಂಟ್ ಕೊಟ್ಟು ಬಂದ ಹಾಗೆ ಕಾಣುತ್ತಿದೆ. ಸುಮಾರು 9 ಸಾವಿರ ಕೋಟಿ ರುಪಾಯಿ ಕೊಳ್ಳೆ ಹೊಡೆದು ಚುನಾವಣೆ ಮಾಡಲು ಪ್ಲ್ಯಾನ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮುಸ್ಲಿಮರ ವಾರ್ಡುಗಳಾದ ಟಿಪ್ಪುನಗರ, ಯಾರಬ್ನಗರ, ಮೆಹಬೂಬ್ ನಗರಗಳಲ್ಲಿ ಅಕ್ರಮವಾಗಿ ಎಸ್ಐಆರ್ ನಡೆಯುತ್ತಿದೆ. ಅಲ್ಲಿಗೆ ಹೋಗಲು ಭಯದ ವಾತಾವರಣ ಸೃಷ್ಟಿಸಲಾಗಿದೆ. ಆದರೂ ನಮ್ಮ ಕಾರ್ಯಕರ್ತರು ಧೈರ್ಯ ಮಾಡಿ ಒಳಗೆ ಹೋಗಿ ವಿಡಿಯೋ ಸಾಕ್ಷ್ಯ ತಂದಿದ್ದಾರೆ. ಇದನ್ನು ನೋಡಿದರೆ ರಾಮನಗರ ಮುಂದೆ ‘ರಹೀಂನಗರ’ ಆಗುತ್ತೋ ಏನೋ ಎಂಬ ಭಯ ಕಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕುಣಿಗಲ್ನಲ್ಲಿ ಒಂದು ಕೆಟ್ಟ ಜೀನ್ ಇದೆ. ಅವರು ಡಾಕ್ಟರ್ ಅಂತೆ, ಯಾವ ರೀತಿ ಆಪರೇಷನ್ ಮಾಡ್ತಾರೋ ಗೊತ್ತಿಲ್ಲ, ಅಲ್ಲೂ ಎಸ್ಐಆರ್ ಅಕ್ರಮ ಮಾಡ್ತಿದ್ದಾರೆ. ಇನ್ನು ಇಲ್ಲಿನ ಜನಪ್ರತಿನಿಧಿ ಪುಣ್ಯಾತ್ಮ ಆಸ್ಪತ್ರೆಯಲ್ಲೇ ಕೂತು ಬಿಎಲ್ಒಗಳಿಗೆ ಫೋನ್ ಮಾಡಿ ನಮ್ಮಪ್ಪನ ಸರ್ಕಾರ ಇದೆ, ನಾನು ಹೇಳಿದ ಹಾಗೆ ಮಾಡು ಎಂದು ಬೆದರಿಸುತ್ತಿದ್ದಾರಂತೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.