ದಾವಣಗೆರೆ: ಬೇರೆ ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್ಐಆರ್) ನೆಪದಲ್ಲಿ ಮತದಾನ ಹಕ್ಕು ಕಸಿಕೊಂಡಿದ್ದು ಬಿಜೆಪಿ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.
ಚುನಾವಣಾ ಆಯೋಗವು ಅರ್ಹ ಮತದಾರರ ಹಕ್ಕು ಸಂರಕ್ಷಿಸಬೇಕು. ಅನ್ಯ ರಾಜ್ಯಗಳಲ್ಲಿ ನಡೆದ ಎಸ್ಐಆರ್ ಪ್ರಕ್ರಿಯೆಯಲ್ಲಿ ಇದು ಸಾಧ್ಯವಾಗಿಲ್ಲ. ಮತದಾರರಿಗೆ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಇಲ್ಲವಾದ್ದರಿಂದ ಬಿಜೆಪಿಗೆ ಮತಕಳ್ಳತನ ಸುಲಭವಾಯಿತು ಎಂದಿದ್ದಾರೆ.
ಚುನಾವಣಾ ಆಯೋಗ ಎಸ್ಐಆರ್ ಪ್ರಕ್ರಿಯೆ ನಡೆಸುತ್ತಿದೆ. ಇದರಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಎಸ್ಐಆರ್ಗೆ ಚಾಲನೆ ನೀಡಿ ಕೋಟ್ಯಂತರ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದು ಕೇಂದ್ರ ಸರ್ಕಾರ ಎಂದು ವಿಜಯೇಂದ್ರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು.
15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನೀಡಬೇಕಿದ್ದ ₹ 820 ಕೋಟಿಯನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚಪಾಲಿಕೆಗಳ ಚುನಾವಣೆ ಆಗಸ್ಟ್ನಲ್ಲಿ ನಡೆಯಲಿದೆ. ಚುನಾವಣಾ ಆಯೋಗದ ಸೂಚನೆಯ ಮೇರೆಗೆ ಉಳಿದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
ನಾವು ವಿದ್ಯುತ್ ಖಾಸಗೀಕರಣದ ಪರವಾಗಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ವಿದ್ಯುತ್ ಸರಬರಾಜು ಕಂಪನಿಗಳು ಸಹ ಇದನ್ನು ವಿರೋಧಿಸಿವೆ ಎಂದು ಹೇಳಿದರು.
ವಸತಿ ಬಡಾವಣೆಗಳ ಅಭಿವೃದ್ಧಿಗಾಗಿ ತಮ್ಮ ಭೂಮಿಯನ್ನು ಬಿಟ್ಟುಕೊಡಲು ರೈತರ ವಿರೋಧದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರವು ನಗರದ ಹೊರವಲಯದಲ್ಲಿರುವ ಹಳೇ ಕುಂದವಾಡದಲ್ಲಿ 53 ಎಕರೆ ಭೂಮಿಯಲ್ಲಿ ವಸತಿ ಪ್ಲಾಟ್ಗಳನ್ನು ಅಭಿವೃದ್ಧಿಪಡಿಸಲು ಯೋಜಿಸಿದೆ ಎಂದು ಹೇಳಿದರು.