ಶಿವಮೊಗ್ಗ: ರಾಜ್ಯದ ಹಲವೆಡೆ ಮುಂಗಾರು ಕ್ಷೀಣಿಸಿದ್ದರೆ, ಶಿವಮೊಗ್ಗದಲ್ಲಿ ಮಳೆಯಾಗುತ್ತಿದ್ದು, ತುಂಗಾ ಜಲಾಶಯ ಭರ್ತಿಯಾಗಿದ್ದು, ರಾಜ್ಯದಲ್ಲಿ ಮೊದಲು ಭರ್ತಿಯಾದ ಡ್ಯಾಂ ಎಂಬ ದಾಖಲೆ ನಿರ್ಮಿಸಿದೆ.
ಜಲಾಶಯಕ್ಕೆ 20,565 ಕ್ಯೂಸೆಕ್ ನೀರು ಬರುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ 12 ಗೇಟ್ಗಳ ಮೂಲಕ 18,051 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ನದಿ ಪಾತ್ರದ ಜನರಿಗೆ ಮುನ್ನೆಚ್ಚರಿಕೆ ವಹಿಸಲು ಆಡಳಿತ ಮಂಡಳಿ ಸೂಚನೆ ನೀಡಿದೆ.
ಕಳೆದ ಮೂರು ದಿನಗಳಿಂದ ಈ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಜಲಾಶಯದ ನೀರಿನ ಮಟ್ಟ ಗರಿಷ್ಠ ಮಟ್ಟವನ್ನು ತಲುಪಿ ಈ ಭಾಗದ ರೈತರಲ್ಲಿ ಸಂತಸ ಮೂಡಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 588.24 ಮೀಟರ್ ಆಗಿದ್ದು, ಪ್ರಸ್ತುತ ಜಲಾಶಯವು ಪೂರ್ಣ ಸಾಮರ್ಥ್ಯದೊಂದಿಗೆ 3.24 ಟಿಎಂಸಿ ನೀರನ್ನು ಹೊಂದಿದೆ.
ಜಲಾಶಯದಿಂದ ನದಿಗೆ ಭಾರಿ ಪ್ರಮಾಣದಲ್ಲಿ ನೀರನ್ನು ಬಿಡುಗಡೆ ಮಾಡುತ್ತಿರುವುದರಿಂದ, ನದಿಯ ಪಾತ್ರದ ಕೆಳಭಾಗದ ಪ್ರದೇಶಗಳಲ್ಲಿ ಪ್ರವಾಹದ ಭೀತಿ ಉಂಟಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನದಿಯ ದಡದಲ್ಲಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮತ್ತು ನದಿ ಪಾತ್ರಕ್ಕೆ ಇಳಿಯದಂತೆ ಆಡಳಿತ ಮಂಡಳಿಯು ಈಗಾಗಲೇ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಲಾಗಿದೆ.