ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಳಿಕ ಇದೀಗ ದೇವರಾಜ ಅರಸು ಅಭಿವೃದ್ಧಿ ನಿಗಮದಲ್ಲೂ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಹೊಲಿಗೆ ಯಂತ್ರಗಳ ಖರೀದಿ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ ಹಾಗೂ ಕಿಕ್ಬ್ಯಾಕ್ ನಡೆದಿದೆ ಎಂದು ಆರೋಪಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು ಸಲ್ಲಿಸಲಾಗಿದೆ.
ದೂರುದಾರ ಪರಮೇಶ್ ಅವರ ಪ್ರಕಾರ, ಸುಮಾರು ರೂ.10,000 ಮೌಲ್ಯದ ಹೊಲಿಗೆ ಯಂತ್ರವನ್ನು ರೂ.17,000ಕ್ಕೆ ಖರೀದಿಸುವಂತೆ ಟೆಂಡರ್ ನಿಗದಿಪಡಿಸಲಾಗಿದ್ದು, ಈ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಪಾಲನೆಯಾಗಿಲ್ಲ. ರಾಜ್ಯದ ವ್ಯಕ್ತಿಯೊಬ್ಬರಿಗೆ ಟೆಂಡರ್ ನೀಡುವ ವೇಳೆ ಅಕ್ರಮ ನಡೆದಿದ್ದು, ಇದರ ಹಿಂದೆ ಸುಮಾರು ರೂ.5ರಿಂದ ರೂ.6 ಕೋಟಿ ಮೌಲ್ಯದ ಹಗರಣ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಆರೋಪಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ದೂರುದಾರರು ಒತ್ತಾಯಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುಲ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ವಾಲ್ಮೀಕಿ ನಿಗಮದ ಬಳಿಕ ಇದೀಗ ದೇವರಾಜ ಅರಸು ನಿಗಮದಲ್ಲೂ ಕೇಳಿಬರುತ್ತಿರುವ ಅಕ್ರಮದ ಆರೋಪಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಮತ್ತೊಂದು ನಿದರ್ಶನವಾಗಿದೆ ಎಂದು ಕಿಡಿಕಾರಿದ್ದಾರೆ.
ಹಿಂದುಳಿದ ಸಮುದಾಯಗಳ ಕಲ್ಯಾಣಕ್ಕಾಗಿ ಬಡ ಮಹಿಳೆಯರಿಗೆ ತಲುಪಬೇಕಿದ್ದ ಹೊಲಿಗೆ ಯಂತ್ರ ಖರೀದಿಯ ಮೇಲೆಯೂ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿರುವುದು ಅತ್ಯಂತ ಖಂಡನೀಯ. ಜನರ ಕಲ್ಯಾಣಕ್ಕಾಗಿ ರೂಪಿಸಲಾದ ಯೋಜನೆಗಳಲ್ಲೇ ಗೋಲ್ ಮಾಲ್ ನಡೆದಿರುವ ಆರೋಪಗಳಿಗೆ ರಾಜ್ಯ ಸರ್ಕಾರ ಉತ್ತರಿಸಲೇಬೇಕು. ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.