ತುಮಕೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರದ ಯಾವುದೇ ನೇರ ಪಾತ್ರವಿಲ್ಲ. ಈ ಕಾರ್ಯವನ್ನು ಭಾರತದ ಚುನಾವಣಾ ಆಯೋಗದ (ECI) ನಿರ್ದೇಶನದಂತೆ ಅಧಿಕಾರಿಗಳು ನಡೆಸುತ್ತಿದ್ದಾರೆ. ಬೂತ್ ಮಟ್ಟದ ಅಧಿಕಾರಿಗಳು (BLO) ತಪ್ಪು ಮಾಡಿದ್ದರೆ ಅವರ ವಿರುದ್ಧ ಚುನಾವಣಾ ಆಯೋಗವೇ ಕ್ರಮ ಕೈಗೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಕಾರ್ಯಾಗಾರದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "SIRಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವುದೇ ನಿರ್ದೇಶನ ನೀಡಿಲ್ಲ. ಚುನಾವಣಾ ಆಯೋಗ ಕೇಳಿದ ಸಿಬ್ಬಂದಿಯನ್ನು ಮಾತ್ರ ಒದಗಿಸಿದ್ದೇವೆ. ಮತದಾರರ ಮನೆಗಳಿಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸಿ, ಬಳಿಕ ಅವುಗಳನ್ನು ಸಂಗ್ರಹಿಸುವುದು ಬಿಎಲ್ಒಗಳ ಕರ್ತವ್ಯ. ಒಂದು ಸ್ಥಳದಲ್ಲೇ ಕುಳಿತು ನಮೂನೆಗಳನ್ನು ಹಂಚಿದರೆ ಅದು ತಪ್ಪು. ಅಂತಹ ಪ್ರಕರಣಗಳು ಕಂಡುಬಂದರೆ ಚುನಾವಣಾ ಆಯೋಗವೇ ಕ್ರಮ ಕೈಗೊಳ್ಳಬೇಕು" ಎಂದು ಹೇಳಿದರು.
"SIR ನಿಯಮಗಳನ್ನು ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ರೂಪಿಸಿಲ್ಲ. ಒಂದು ತಿಂಗಳೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಲು ಚುನಾವಣಾ ಆಯೋಗವೇ ನಿರ್ಧರಿಸಿದೆ. ಸರ್ಕಾರ ಈ ಪ್ರಕ್ರಿಯೆಗೆ ಅಗತ್ಯ ಸಹಕಾರ ನೀಡುತ್ತಿದೆ ಅಷ್ಟೇ" ಎಂದು ಸ್ಪಷ್ಟಪಡಿಸಿದರು.
ಈ ವಿಚಾರದಲ್ಲಿ ಬಿಜೆಪಿ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಇತರೆ ರಾಜ್ಯಗಳಲ್ಲಿ SIR ಹೇಗೆ ನಡೆದಿದೆ ಎಂಬುದನ್ನು ಬಿಜೆಪಿ ಅಧ್ಯಯನ ಮಾಡಬೇಕು" ಎಂದು ತಿರುಗೇಟು ನೀಡಿದರು.
ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಕುರಿತು ಮಾತನಾಡಿ, "ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ಶೀಘ್ರದಲ್ಲೇ ಚುನಾವಣೆ ನಡೆಸುವುದಾಗಿ ಘೋಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಚುನಾವಣೆಯ ದಿನಾಂಕ ಅಂತಿಮಗೊಳ್ಳಲಿದೆ" ಎಂದು ತಿಳಿಸಿದರು.
ತುಮಕೂರಿನಲ್ಲಿ ಹೇಮಾವತಿ ಎಕ್ಸ್ಪ್ರೆಸ್ ಕಾಲುವೆ ಯೋಜನೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, "ಈ ಯೋಜನೆಯನ್ನು ಈಗ ಕೈಬಿಡಲು ಸಾಧ್ಯವಿಲ್ಲ. ಯೋಜನೆಗೆ ರೂ. 900 ಕೋಟಿ ಮೀಸಲಿಡಲಾಗಿದ್ದು, ಅದರ ಒಂದು ಭಾಗದ ವೆಚ್ಚ ಈಗಾಗಲೇ ಭರಿಸಲಾಗಿದೆ. ಈ ಹಂತದಲ್ಲಿ ಯೋಜನೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ" ಎಂದರು.
ಕಂದಾಯ ಇಲಾಖೆಯ ಭೂ ದಾಖಲೆಗಳ ಡಿಜಿಟಲೀಕರಣ ಕುರಿತು ಮಾತನಾಡಿ, 1.44 ಕೋಟಿಗೂ ಅಧಿಕ ಪುಟಗಳ ಭೂ ದಾಖಲೆಗಳನ್ನು ಡಿಜಿಟಲೀಕರಣ ಮಾಡಿ ಸುರಕ್ಷಿತವಾಗಿ ಇ-ಖಜಾನೆಯಲ್ಲಿ ಸಂಗ್ರಹಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅವಧಿಯಲ್ಲಿ ಭೂ ದಾಖಲೆಗಳನ್ನು ಗಣಕೀಕರಣಗೊಳಿಸಿದ ಪರಿಣಾಮ ಇದು ಸಾಧ್ಯವಾಗಿದೆ" ಎಂದು ಹೇಳಿದರು.
ಗೃಹಲಕ್ಷ್ಮಿ ಯೋಜನೆ ಕುರಿತು ಪ್ರತಿಕ್ರಿಯಿಸಿ, "ಈ ಯೋಜನೆಯನ್ನು ವಿಶ್ವ ಬ್ಯಾಂಕ್ ಮೆಚ್ಚುಗೆ ವ್ಯಕ್ತಪಡಿಸಿದೆ. ಯೋಜನೆ ಆರಂಭಿಸಿದಾಗ ವಿರೋಧ ಪಕ್ಷಗಳು ಟೀಕಿಸಿದ್ದವು. ಆದರೆ, ಇದೇ ಮಾದರಿಯ ಯೋಜನೆಗಳನ್ನು ಈಗ ಇತರೆ ರಾಜ್ಯಗಳಲ್ಲೂ ಜಾರಿಗೊಳಿಸಲಾಗಿದೆ" ಎಂದು ಹೇಳಿದರು.