ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಜನರದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರಿನ ಬಿಇಎಲ್ ಲೇಔಟ್ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳ ನಿದ್ದೆಗೆಡಿಸಿದೆ.
ಬೆಂಗಳೂರಿನ ಬ್ಯಾಡ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಇಎಲ್ ಲೇಔಟ್ ನಲ್ಲಿ ಇಂದು ಬೆಳಗಿನ ಜಾವ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಚಿರತೆ ಓಡಾಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ, ಚಿರತೆ ಸೆರೆಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿ ನೈಸ್ ರಸ್ತೆಯ ಸಮೀಪ ಚಿರತೆಗಾಗಿ ತೀವ್ರ ಶೋಧ ನಡೆಸುತ್ತಿದ್ದು, ಕೆಲ ಸ್ಥಳಗಳಲ್ಲಿ ಬಲೆ ಹಾಕಲಾಗಿದ್ದು, ಚಿರತೆ ಹೊರಬರುವಂತೆ ಮಾಡಲು ಪಟಾಕಿ ಸಹ ಹೊಡೆಯಲಾಗಿದೆ.
ಸ್ಥಳೀಯರ ಪ್ರಕಾರ, ಕಳೆದ 10 ವರ್ಷಗಳಲ್ಲಿ ಈ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಇದೇ ಮೊದಲು. ಸದ್ಯ ಸ್ಥಳೀಯರು ಆತಂಕಗೊಂಡಿದ್ದು, ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.
ಇಂದು ಬೆಳಗ್ಗೆ ಬ್ಯಾಡರಹಳ್ಳಿ ಬಳಿಯ ಭಾರತ್ನಗರದಲ್ಲಿ ಚಿರತೆ ಕಾಣಸಿಕೊಂಡಿದ್ದು, ಬೆಳ್ಳಂಬೆಳಗ್ಗೆ ಪಾರ್ಕ್ಗೆ ಬಂದಿದ್ದ ಜನರಿಗೆ ಚಿರತೆ ದರ್ಶನ ಕೊಟ್ಟಿದೆ. ಚಿರತೆ ಕಂಡ ಜನ ಎದ್ನೋ ಬಿದ್ನೋ ಅಂತ ಪಾರ್ಕ್ನಿಂದ ಓಡಿ ಹೋಗಿದ್ದಾರೆ.
ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಇಂದು ಬೆಳಗಿನ ಜಾವ 4.30ರ ಸುಮಾರಿಗೆ ಚಿರತೆ ಕಾಣಿಸಿಕೊಂಡಿದ್ದು, ಬಳಿಕ ಅರಣ್ಯ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿದಾಗ ಚಿರತೆ ಓಡಾಟ ದೃಢವಾಗಿದೆ. ಚಿರತೆ ಪಾರ್ಕ್ನೊಳಗೆ ಹೋಗುತ್ತಿರುವ ಹಾಗೂ ರಸ್ತೆ ದಾಟುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಅರಣ್ಯ ಅಧಿಕಾರಿಗಳು ಚಿರತೆ ಸೆರೆ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.