ಬೆಂಗಳೂರು: ಸರಿಯಾಗಿ 15 ದಿನದ ಹಿಂದೆ ರಾಜ್ಯದಲ್ಲಿ ಮಳೆ (Rain) ಆಗುತ್ತಿಲ್ಲ ಎನ್ನುವ ಕೂಗು ರಾಜ್ಯದ ಎಲ್ಲಾ ಭಾಗಗಳಿಂದಲೂ ಕೇಳಿ ಬರುತಿತು. ಆದರೆ, ಇದೀಗ ಭಾರತೀಯ ಹವಾಮಾನ ಇಲಾಖೆಯು (Indian Meteorological Department - IMD) ರಾಜ್ಯದ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆ ನೀಡಿದೆ. ಅದರಲ್ಲೂ, ರಾಜ್ಯದ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಸಿಡಿಲು ಮತ್ತು ಪ್ರಬಲ ಗಾಳಿಯೊಂದಿಗೆ ಮಳೆ ಬರಲಿದೆ ಎಂದು ಮುನ್ಸೂಚನೆ (Rain Forecast) ನೀಡಿದೆ. ಆ ಕುರಿತ ವರದಿ ಇಲ್ಲಿದೆ.
ಯಾವ ಜಿಲ್ಲೆಗಳಲ್ಲಿ ಮಳೆ?
IMD ನೀಡಿರುವ ಮಾಹಿತಿಯ ಪ್ರಕಾರ ನಾಳೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗಲಿದೆ ಎನ್ನಲಾಗಿದೆ. ಈ ವೇಳೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.
ಮುಂದುವರೆದು, IMD ಕೆಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಜಾಗರೂಕರಾಗಿರಬೇಕು. ನದಿ ಮತ್ತು ಜಲಾಶಯಗಳ ಸಮೀಪ ಹೋಗಬಾರದು. ಜೊತೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಇದರೊಂದಿಗೆ, ರೈತರು ತಮ್ಮ ಬೆಳೆಗಳಿಗೆ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜೊತೆಗೆ ರಸ್ತೆಯಲ್ಲಿ ಪ್ರಯಾಣಿಸುವಾಗ ಮರ ಮತ್ತು ವಿದ್ಯುತ್ ಕಂಬಗಳ ಕೆಳಗೆ ನಿಲ್ಲಬಾರದು ಎಂದು IMD ಸಲಹೆ ನೀಡಿದೆ.