ಗಂಗಾವತಿ: ಸದಾ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಬಾಯಿಗೆ ಬಂದಂತೆ ಮಾತನಾಡುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೊಬ್ಬ ಹುಚ್ಚ ಎಂದು ಶಾಸಕ ಜನಾರ್ದನ ರೆಡ್ಡಿ ಶನಿವಾರ ಟೀಕಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಸರ್ಕಾರದಲ್ಲಿ ಸಂಪೂರ್ಣ ನಿಶಕ್ತರಾಗಿದ್ದಾರೆ. ಇಲಾಖೆಯ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುವುದನ್ನು ಬಿಟ್ಟು, ಕೇವಲ ಮಾಧ್ಯಮಗಳಲ್ಲಿ ಸದಾ ಸುದ್ದಿಯಲ್ಲಿರಬೇಕು ಎನ್ನುವ ಉದ್ದೇಶದಿಂದ ಪ್ರತಿ ದಿನ ಆರ್ಎಸ್ಎಸ್ ಸಂಘಟನೆಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಏಕಾಏಕಿ ಇವರಿಗೆ ಪ್ರಮುಖ ಜವಾಬ್ದಾರಿ ನೀಡಿದ್ದು, ಆದರೆ ಇವರು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಟೀಕಿಸಿದರು.
ಇನ್ನು ಹದಿನೈದು ದಿನಗಳ ಕಾಲ ಇವರ ನಡವಳಿಕೆಯನ್ನು ಗಮನಿಸಿ, ತದನಂತರ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಇವರ ಮಾನಸಿಕ ಸ್ಥಿತಿ ಸರಿಯಾಗಿದೆಯೇ ಇಲ್ಲವೇ ಎಂಬುದನ್ನು ತಪಾಸಣೆ ಒಳಪಡಿಸಬೇಕಿದೆ ಎಂದು ಲೇವಡಿ ಮಾಡಿದರು.
ದೇಶದಲ್ಲಿ ಜವಾಹರ್ ಲಾಲ್ ನೆಹರೂ, ಇಂದಿರಾ ಗಾಂಧಿ, ಮಲ್ಲಿಕಾರ್ಜನ ಖರ್ಗೆ ಅವರಿಗೇ ಏನೂ ಮಾಡಲು ಆಗಲಿಲ್ಲ. ಈಗ ಪ್ರಿಯಾಂಕ್ ಖರ್ಗೆ ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.