ಮಂಗಳೂರು: ಬಿಜೆಪಿ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದೆ.
ಬೆಂಗಳೂರು ಸಮೀಪದ ಹೊಸೂರು ಹಾಗೂ ಕೇರಳದ ಕೊಚ್ಚಿಯಲ್ಲಿ ಭಾನುವಾರ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಸೋಮವಾರ ಪ್ರಕಟಣೆ ನೀಡಿರುವ ಎನ್ಐಎ, ಆಂಧ್ರಪ್ರದೇಶ ಪೊಲೀಸರಿಂದ ದೊರೆತ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ಮೂಲದ ಅಬ್ದುಲ್ ನಾಸೀರ್ ಅಲಿಯಾಸ್ ನಾಸೀರ್ (41) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೌಷಾದ್ (32) ಬಂಧಿತ ಆರೋಪಿಗಳಾಗಿದ್ದಾರೆ.
ಪ್ರಕರಣದಲ್ಲಿ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಎನ್ಐಎ ತಿಳಿಸಿದೆ.
2022ರ ಜುಲೈ 26ರಂದು ಸಂಜೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದರು. ತನಿಖೆಯಲ್ಲಿ, ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಕಾರ್ಯಕರ್ತರು ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿತ್ತು.
ಎನ್ಐಎ ಮಾಹಿತಿ ಪ್ರಕಾರ, ಅಬ್ದುಲ್ ನಾಸೀರ್ನನ್ನು ಕೊಚ್ಚಿಯಿಂದ ಹಾಗೂ ನೌಷಾದ್ನನ್ನು ಹೊಸೂರಿನಿಂದ ಬಂಧಿಸಲಾಗಿದೆ.
ಪ್ರಮುಖ ಆರೋಪಿಗಳಿಗೆ ಆಶ್ರಯ ಮತ್ತು ನೆರವು ನೀಡಿದ ಆರೋಪದಡಿ ಇವರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಹಾಗೂ ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಈಗಾಗಲೇ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಅಲ್ಲದೆ, ಇಬ್ಬರ ವಿರುದ್ಧ ಲುಕ್ಔಟ್ ನೋಟಿಸ್ ಕೂಡ ಜಾರಿಗೊಳಿಸಲಾಗಿದ್ದು, ಅವರ ಬಗ್ಗೆ ಮಾಹಿತಿ ನೀಡುವವರಿಗೆ ತಲಾ 4 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ತಿಳಿಸಿದೆ.