ಬೆಂಗಳೂರು: ಮಂಡ್ಯ ಜಿಲ್ಲೆಯ ರೈತರಿಗೆ ಕಳೆದ ಒಂದು ತಿಂಗಳಿನಿಂದಲೂ ಬೆಳೆಗಳಿಗೆ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡುತ್ತಿದ್ದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಮಂಡ್ಯ ರೈತರ ಬೇಡಿಕೆಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದ್ದಾರೆ.
"ಒಂದು ತಿಂಗಳಿನಿಂದ ಬೆಳೆಗಳಿಗೆ ನೀರು ಕೊಡಿ ಎಂದು ಮಂಡ್ಯ ರೈತರು ಅಂಗಲಾಚುತ್ತಿದ್ದರೂ ಈ ಸರ್ಕಾರದ ಕಿವಿಗೆ ಜಾಣಕಿವುಡು ಬಂದಿದೆ. ರೈತರ ಭೂಮಿ ಕಸಿಯುವುದರಲ್ಲಿ ರಣೋತ್ಸಾಹ ತೋರುವ ಸರ್ಕಾರಕ್ಕೆ ಅವರ ಬೆಳೆ ಉಳಿಸಲು ಏಕೆ ನಿರುತ್ಸಾಹವೋ ಅರ್ಥವಾಗುತ್ತಿಲ್ಲ" ಎಂದು ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯ ಜಿಲ್ಲೆಯ ರೈತರು ಬೆಳೆ ಉಳಿಸಿಕೊಳ್ಳಲು ಕಾವೇರಿ ನೀರಿನ ನಿರೀಕ್ಷೆಯಲ್ಲಿದ್ದು, ಕೂಡಲೇ ಕೆಆರ್ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
"ಮಂಡ್ಯ ರೈತರ ಬೇಡಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ. ತಕ್ಷಣವೇ ಕೆಆರ್ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಬೇಕು. ರೈತರ ಆಕ್ರೋಶ ಕಟ್ಟೆಯೊಡೆಯುವ ಮೊದಲು ಸರ್ಕಾರ ಎಚ್ಚೆತ್ತುಕೊಂಡು ನೀರು ಬಿಡುಗಡೆ ಮಾಡಬೇಕು" ಎಂದು ಆಗ್ರಹಿಸಿದ್ದಾರೆ.