ಬೆಂಗಳೂರು: ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯಲ್ಲಿ ನಡೆಯುತ್ತಿರುವ ನವೀಕರಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಂಗಳವಾರ ಬಸವನಗುಡಿ ಶಾಸಕ ಎಲ್.ಎ. ರವಿ ಸುಬ್ರಹ್ಮಣ್ಯ ಹಾಗೂ ಮಾಜಿ ಬಿಬಿಎಂಪಿ ಮೇಯರ್ ಹುಚ್ಚಪ್ಪ ಅವರೊಂದಿಗೆ ಬೆಂಗಳೂರು ಕೇಂದ್ರ ಹಾಗೂ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ಚಾಮರಾಜಪೇಟೆ ಮತ್ತು ಬಸವನಗುಡಿ ವಿಧಾನಸಭಾ ಕ್ಷೇತ್ರಗಳ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಾರ್ವಜನಿಕರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ ಯಾವುದೇ ವಿಳಂಬವಿಲ್ಲದೆ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಚಾಮರಾಜಪೇಟೆ ಹಿಂದೂ ರುದ್ರಭೂಮಿಗೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ನವೀಕರಣ ಕಾಮಗಾರಿಯೊಂದಿಗೆ ಅಗತ್ಯ ಮೂಲಸೌಕರ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದರು.
ಪರಿಶೀಲನೆ ವೇಳೆ ಚಾಮರಾಜಪೇಟೆ 8ನೇ ಮುಖ್ಯರಸ್ತೆ ಹಾಗೂ ಆಜಾದ್ ನಗರ ಮುಳಕಟ್ಟಮ್ಮ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ಅಕ್ರಮವಾಗಿ ನಿಲ್ಲಿಸಿರುವುದು ಕಂಡುಬಂದಿದ್ದು, ಇದರಿಂದ ಸಂಚಾರ ದಟ್ಟಣೆ ಉಂಟಾಗುವುದರ ಜೊತೆಗೆ ರುದ್ರಭೂಮಿಗೆ ಬರುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಅಧಿಕಾರಿಗಳಿಗೆ ತಿಳಿಸಿದರು.
ತಕ್ಷಣವೇ ಅಕ್ರಮವಾಗಿ ನಿಲುಗಡೆ ಮಾಡಿರುವ ವಾಹನಗಳನ್ನು ತೆರವುಗೊಳಿಸುವಂತೆ ನಗರ ಪಾಲಿಕೆ ಅಧಿಕಾರಿಗಳು ಹಾಗೂ ಸಂಚಾರ ಪೊಲೀಸರಿಗೆ ಸೂಚಿಸಿದರು.
ಅಲ್ಲದೆ, ಸಮಾನ ಅಗಲವಿಲ್ಲದ ಆಜಾದ್ ನಗರ ಮುಳಕಟ್ಟಮ್ಮ ರಸ್ತೆಯನ್ನು ಅಗಲೀಕರಣಗೊಳಿಸುವ ಸಾಧ್ಯತೆಯನ್ನು ಪರಿಶೀಲಿಸುವಂತೆಯೂ ಸಲಹೆ ನೀಡಿದರು.
ರಾಜೀವ್ ಗಾಂಧಿ ಕ್ರೀಡಾಂಗಣದ ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ, ಕ್ರೀಡಾಂಗಣದ ಸಮರ್ಪಕ ನಿರ್ವಹಣೆಗಾಗಿ ಖಾಸಗಿ ಸಂಸ್ಥೆಯನ್ನು ನೇಮಿಸಲು ಟೆಂಡರ್ ಆಹ್ವಾನಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಂಜನೇಯ ಸ್ವಾಮಿ ದೇವಸ್ಥಾನದ ಸಮೀಪದ ರಾಜಕಾಲುವೆಯಲ್ಲಿ ಕಸ ಸಂಗ್ರಹವಾಗಿ ನೀರಿನ ಹರಿವಿಗೆ ಅಡ್ಡಿಯಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ತಕ್ಷಣ ಕಸ ತೆರವುಗೊಳಿಸಿ, ಕಾಲುವೆಯನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.