ಹಾಸನ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಅಂತ್ಯಕ್ರಿಯೆ ಸೋಮವಾರ ಹಾಸನ ಜಿಲ್ಲೆಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ನಡೆಯಿತು. ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಗ್ರಾಮದ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ ನರವೇರಿತು.
ಪಕ್ಷಾತೀತವಾಗಿ ಹಿರಿಯ ನಾಯಕರು ಅಂತಿಮ ನಮನ ಸಲ್ಲಿಸಲು ಮಾವಿನಕೆರೆಯಲ್ಲಿ ಜಮಾಯಿಸಿದ್ದು ಅಂತ್ಯಕ್ರಿಯೆಯಲ್ಲಿ ಭಾಗಿಯಾದರು. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರು ಮತ್ತು ಹಿರಿಯ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಗೌಡರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಮಠಗಳ ಧಾರ್ಮಿಕ ಮುಖಂಡರು ಮತ್ತು ಪೊಲೀಸ್ ಮಹಾನಿರ್ದೇಶಕ ಎಂ ಎ ಸಲೀಂ ಅವರಂತಹ ಹಿರಿಯ ಸರ್ಕಾರಿ ಅಧಿಕಾರಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರ ಜೊತೆಗೆ ಅಂತಿಮ ನಮನ ಸಲ್ಲಿಸಿದರು.
ಅಂತ್ಯಕ್ರಿಯೆಗೆ ಮೊದಲು, ಸರ್ಕಾರಿ ಗೌರವದ ಭಾಗವಾಗಿ ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ಚೆನ್ನಮ್ಮ ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ತ್ರಿವರ್ಣ ಧ್ವಜವನ್ನು ಮುಖ್ಯಮಂತ್ರಿ ಶಿವಕುಮಾರ್, ದೇವೇಗೌಡರಿಗೆ ಹಸ್ತಾಂತರಿಸಿದರು.
ಚೆನ್ನಮ್ಮ 1954ರಲ್ಲಿ ಗೌಡರನ್ನು ವಿವಾಹವಾಗಿದ್ದರು. ದಂಪತಿಗೆ ನಾಲ್ವರು ಗಂಡು ಮಕ್ಕಳು, ಕುಮಾರಸ್ವಾಮಿ, ರೇವಣ್ಣ, ಎಚ್ ಡಿ ಬಾಲಕೃಷ್ಣ ಮತ್ತು ಎಚ್ ಡಿ ರಮೇಶ್ ಮತ್ತು ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಪ್ರಮುಖ ರಾಜಕಾರಣಿಗಳ ಪತ್ನಿ ಮತ್ತು ತಾಯಿಯಾದರೂ, ಚೆನ್ನಮ್ಮ ಹೆಚ್ಚಾಗಿ ಸಾರ್ವಜನಿಕ ಜೀವನದಿಂದ ದೂರವಿದ್ದರು.