ಬೆಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆಯ ಫಲಾನುಭವಿಗಳು ಬಿಜೆಪಿ ನಾಯಕರ ಮಕ್ಕಳೇ ಆಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಆರೋಪಿಸಿದರು.
ಬಿಜೆಪಿ ಸರ್ಕಾರ ಇರುವ ರಾಜ್ಯಗಳಲ್ಲೇ ಈ ಪ್ರಶ್ನೆಪತ್ರಿಕೆ ಸೋರಿಕೆ ಆಗುತ್ತಿದ್ದು, ಇದರ ಫಲಾನುಭವಿಗಳು ಬಿಜೆಪಿ ನಾಯಕರ ಮಕ್ಕಳಾಗಿದ್ದಾರೆ. ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಬಿಜೆಪಿ ನಾಯಕರ ಮಕ್ಕಳಿಂದಲೇ ಪೊಲೀಸರು ಸೋರಿಕೆಯಾದ ಪ್ರಶ್ನೆಪತ್ರಿಕೆಗಳನ್ನು ವಶಕ್ಕೆ ಪಡೆದಿದ್ದಾರೆ.
ಇದು ಪ್ರಶ್ನೆಪತ್ರಿಕೆ ಸೋರಿಕೆ ವಿಚಾರ ಮಾತ್ರವಲ್ಲ. ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸಾರ್ಹತೆ ಪ್ರಶ್ನೆಯಾಗಿದೆ. ಇದರ ವಿರುದ್ಧ ದೇಶಾದ್ಯಂತ ಹೋರಾಟ ನಡೆದಿದ್ದು, ರಾಜ್ಯದಲ್ಲೂ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು. ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಅವರನ್ನೂ ಆಹ್ವಾನಿಸಲಾಗಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಶ್ನೆಪತ್ರಿಕೆ ಸೋರಿಕೆಗೂ ಬಿಜೆಪಿಗೂ ಇರುವ ಸಂಬಂಧವೇನು? ಪ್ರಶ್ನೆಪತ್ರಿಕೆ ಸೋರಿಕೆ ಆಗುತ್ತಿದ್ದರೆ ಮತ್ತೊಂದೆಡೆ ಪ್ರಧಾನ ಮಂತ್ರಿಗಳು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಮಾಡುತ್ತಾರೆ. ನಕಲಿ ಪದವಿ ಪ್ರಮಾಣಪತ್ರ ಇಟ್ಟುಕೊಂಡಿರುವ ಪ್ರಧಾನಮಂತ್ರಿಗಳು ಮಕ್ಕಳ ಭವಿಷ್ಯ ಅಪಾಯಕ್ಕೆ ಸಿಲುಕಿಸಿದ್ದಾರೆ ಎಂದು ದೂರಿದರು.
2014ರಿಂದ 2026ರವರೆಗೆ 152 ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಉತ್ತರ ಭಾರದ ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಭವಿಷ್ಯ ಆತಂತಕಕ್ಕೆ ಸಿಲುಕಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಗಂಭೀರವಾದ ತನಿಖೆ ನಡೆಯಬೇಕು. ಎಲ್ಲ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ರಾಷ್ಟ್ರೀಯ ತನಿಖೆ ಆಗಬೇಕು. ಇದರಲ್ಲಿ ಯಾವುದೇ ರಾಜಕೀಯ ಇರಬಾರದು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.