ರೈತ (ಸಂಗ್ರಹ ಚಿತ್ರ) 
ರಾಜ್ಯ

ಮಳೆ ಕೊರತೆ: ವಲಸೆ ತಡೆಯಲು ಸರ್ಕಾರ ಮಾಸ್ಟರ್ ಪ್ಲ್ಯಾನ್; VB-G RAM G ಉದ್ಯೋಗ ನೀಡಲು ಮುಂದು!

ದುರ್ಬಲ ಮುಂಗಾರು ಪರಿಸ್ಥಿತಿಯಿಂದ ಗ್ರಾಮೀಣ ಜನರ ಜೀವನೋಪಾಯಕ್ಕೆ ಧಕ್ಕೆಯಾಗದಂತೆ ಹಾಗೂ ವಲಸೆ ತಡೆಯುವ ಉದ್ದೇಶದಿಂದ ಪ್ರತಿ ತಿಂಗಳು 1.25 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿಸುವ ಗುರಿಯನ್ನು ರಾಜ್ಯ ಸರ್ಕಾರ ನಿಗದಿಪಡಿಸಿದೆ.

ಬೆಂಗಳೂರು: ರಾಜ್ಯದ 178 ತಾಲ್ಲೂಕುಗಳಲ್ಲಿ ಮಳೆ ಕೊರತೆ ಉಂಟಾಗಿದ್ದು, ಅವುಗಳಲ್ಲಿ 60 ತಾಲ್ಲೂಕುಗಳು ತೀವ್ರ ಮಳೆ ಕೊರತೆಯನ್ನು ಎದುರಿಸುತ್ತಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಕಲ್ಪಿಸಲು ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) - VB-G RAM G ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದುರ್ಬಲ ಮುಂಗಾರು ಪರಿಸ್ಥಿತಿಯಿಂದ ಗ್ರಾಮೀಣ ಜನರ ಜೀವನೋಪಾಯಕ್ಕೆ ಧಕ್ಕೆಯಾಗದಂತೆ ಹಾಗೂ ವಲಸೆ ತಡೆಯುವ ಉದ್ದೇಶದಿಂದ ಪ್ರತಿ ತಿಂಗಳು 1.25 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿಸುವ ಗುರಿಯನ್ನು ರಾಜ್ಯ ಸರ್ಕಾರ ನಿಗದಿಪಡಿಸಿದೆ ಎಂದು ಹೇಳಿದರು.

ಗ್ರಾಮಗಳಿಂದ ವಲಸೆ ತಡೆಯಲು ಕುಡಿಯುವ ನೀರು ಮತ್ತು ಉದ್ಯೋಗಕ್ಕೆ ಸರ್ಕಾರ ಮೊದಲ ಆದ್ಯತೆ ನೀಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸಂಭವನೀಯ ಕುಡಿಯುವ ನೀರಿನ ಸಮಸ್ಯೆ ಎದುರಿಸಲು 117 ಕೋಟಿ ರೂಪಾಯಿಗಳನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ. ನೀರಿನ ಮೂಲಗಳು ಬತ್ತಿರುವ ಕಡೆ ಖಾಸಗಿ ಕೊಳವೆಬಾವಿ, ತೆರೆದ ಬಾವಿಗಳನ್ನು ಬಾಡಿಗೆಗೆ ಪಡೆದು ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲು ಜಿಲ್ಲಾಡಳಿತಕ್ಕೆ ಅಧಿಕಾರ ನೀಡಲಾಗಿದೆ. ಅಗತ್ಯವಿದ್ದರೆ ಹೊಸ ಕೊಳವೆಬಾವಿಗಳನ್ನು ಕೊರೆಸಲು ಸಹ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

ಮುಂದಿನ ಮೂರು-ನಾಲ್ಕು ತಿಂಗಳಲ್ಲಿ ಮಳೆ ಪರಿಸ್ಥಿತಿ ಸುಧಾರಿಸದಿದ್ದರೆ, ಮುಂದಿನ ಮುಂಗಾರು ಬರುವವರೆಗೆ ಕುಡಿಯುವ ನೀರಿನ ಪೂರೈಕೆ ಖಚಿತಪಡಿಸಲು ಪರ್ಯಾಯ ಯೋಜನೆಯನ್ನೂ ಸರ್ಕಾರ ಸಿದ್ಧಪಡಿಸುತ್ತಿದೆ ಎಂದು ತಿಳಿಸಿದರು.

ಬೆಳೆ ವಿಮೆಗೆ ರೈತರು ನೋಂದಾಯಿಸಿಕೊಳ್ಳಿ

ಇದೇ ವೇಳೆ ಬೆಳೆ ವಿಮೆ ಯೋಜನೆಗೆ ಕಡ್ಡಾಯವಾಗಿ ನೋಂದಾಯಿಸಿಕೊಳ್ಳುವಂತೆ ರೈತರಿಗೆ ಮನವಿ ಮಾಡಿದ ಅವರು, ಬ್ಯಾಂಕ್ ಸಾಲ ಬಾಕಿ ಇರುವ ರೈತರು ಹಾಗೂ ಒನ್‌ಟೈಮ್ ಸೆಟಲ್‌ಮೆಂಟ್ ಮೂಲಕ ಸಾಲ ತೀರಿಸಿರುವ ರೈತರೂ ಸಹ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ (CSC) ವಿಮೆ ಪ್ರೀಮಿಯಂ ಪಾವತಿಸಿ ಯೋಜನೆಗೆ ಸೇರಬಹುದು ಎಂದು ಹೇಳಿದರು.

ಕೇಂದ್ರದ ಅನುದಾನ ಕಡಿತ ನಡುವೆಯೂ ಯೋಜನೆ ಜಾರಿ

ಕೇಂದ್ರ ಸರ್ಕಾರ ಯೋಜನೆಯ ಅನುದಾನ ಹಂಚಿಕೆಯ ಅನುಪಾತವನ್ನು 90:10ರಿಂದ 60:40ಕ್ಕೆ ಬದಲಾಯಿಸಿದರೂ, ರಾಜ್ಯ ಸರ್ಕಾರ ಜುಲೈ 1ರಿಂದ VB-G RAM G ಯೋಜನೆಯನ್ನು ಜಾರಿಗೊಳಿಸಿದೆ ಎಂದು ಹೇಳಿದರು.

ಇಲ್ಲಿಯವರೆಗೆ ಗ್ರಾಮ ಪಂಚಾಯಿತಿಗಳ ಮೂಲಕ ಕೆಲಸ ಕೇಳಿದ ಎಲ್ಲರಿಗೂ ಉದ್ಯೋಗ ಒದಗಿಸಲಾಗಿದ್ದು, 5 ಲಕ್ಷ ಮಾನವ ದಿನಗಳ ಉದ್ಯೋಗ ಈಗಾಗಲೇ ಸೃಷ್ಟಿಯಾಗಿದೆ ಎಂದು ತಿಳಿಸಿದರು.

318 ಬಗೆಯ ಕಾಮಗಾರಿಗಳಿಗೆ ಅವಕಾಶ

ಈ ಯೋಜನೆಯಡಿ ಒಟ್ಟು 318 ಬಗೆಯ ಕಾಮಗಾರಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಶಾಲಾ ಕಟ್ಟಡಗಳು, ಆರೋಗ್ಯ ಕೇಂದ್ರಗಳು ಹಾಗೂ ಸರ್ಕಾರಿ ಕಟ್ಟಡಗಳ ದುರಸ್ತಿ, ಕೃಷಿ ಹೊಂಡ ನಿರ್ಮಾಣ, ವಿತರಣಾ ಕಾಲುವೆಗಳು, ಹನಿ ನೀರಾವರಿ ವ್ಯವಸ್ಥೆ, ಮಿನಿ ಅರಣ್ಯ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೊಳ್ಳಬಹುದು.

ಗ್ರಾಮ ಪಂಚಾಯಿತಿಗಳಿಗೆ ಆನ್‌ಲೈನ್ ಮೂಲಕ ಹೆಚ್ಚುವರಿ ಕ್ರಿಯಾ ಯೋಜನೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಜುಲೈ ಅಂತ್ಯದ ವೇಳೆಗೆ 10 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಸುವ ಗುರಿಯಿದೆ ಎಂದು ಹೇಳಿದರು.

2,900 ಕೋಟಿ ರೂ. ಬಿಡುಗಡೆ

ಯೋಜನೆ ಅನುಷ್ಠಾನಕ್ಕಾಗಿ ಮೊದಲ ತ್ರೈಮಾಸಿಕದಲ್ಲೇ 2,900 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ಗ್ರಾಮೀಣ ಕರ್ನಾಟಕದಲ್ಲಿ ಉದ್ಯೋಗ ಬಿಕ್ಕಟ್ಟು ಉಂಟಾಗುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ ಸಚಿವರು, ಗ್ರಾಮೀಣ ಉದ್ಯೋಗ ಚೀಟಿದಾರರಿಗೆ (Job Card holders) 125 ದಿನಗಳ ಉದ್ಯೋಗ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

New delhi: ಪ್ರಧಾನಿ ನಿವಾಸದ ಹೊರಗಡೆ ಪ್ರತಿಭಟನೆ; ರಾಹುಲ್, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ವಶಕ್ಕೆ ಪಡೆದ ಪೊಲೀಸರು! Video

ಯುವಜನತೆಯ ಪ್ರತಿಭಟನೆ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ: ಬಂಧನಕ್ಕೆ ಹೆದರಲ್ಲ, ನ್ಯಾಯ ಸಿಗುವವರೆಗೂ ಹೋರಾಟ- CM ಡಿಕೆ ಶಿವಕುಮಾರ್! Video

ಏನಿದು 'ಗ್ರೇಟರ್ ಇಂಟಿಗ್ರೇಟೆಡ್ ಟೌನ್‌ಶಿಪ್'? ಬಿಡದಿಯೇ ಏಕೆ? 7,431 ಎಕರೆ 'AI ಸಿಟಿ'ಯ ಸಂಪೂರ್ಣ ಮಾಹಿತಿ ಇಲ್ಲಿದೆ!

ಮೆರವಣಿಗೆ ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ CJP ಪ್ರತಿಭಟನಾಕಾರರು; ಇಂಟರ್ನೆಟ್ ಸ್ಥಗಿತಗೊಂಡರೂ ಗುಂಪುಗಳಿಗೆ ಸಂಪರ್ಕ ಸಾಧನೆ!

Delhi protest crackdown: ಪ್ರಧಾನಿ ಮೋದಿ ನಿವಾಸದ ಹೊರಗೆ ಪ್ರತಿಭಟನೆ ನಿಲ್ಲಿಸಲು ರಾಹುಲ್ ನಕಾರ; ಕಾಂಗ್ರೆಸ್ ನ ಆರು ಬೇಡಿಕೆಗಳೇನು?