ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನಡೆದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.
ಸಮಾಧಿ ಸ್ಥಳದಲ್ಲಿ ಸುಂದರ ಸ್ಮಾರಕ ನಿರ್ಮಿಸಿ ಧಾರ್ಮಿಕ ಹಾಗೂ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ ಎಂದು ಕೇಂದ್ರ ಸಚಿವ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಮೊನ್ನೆ ಸೋಮವಾರ ಚೆನ್ನಮ್ಮ ಅವರ ಅಂತ್ಯಸಂಸ್ಕಾರ ನಡೆದ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ತಾಯಿಯ ಹೆಸರನ್ನು ಚಿರಸ್ಥಾಯಿಯಾಗಿಸಲು ಇಡೀ ಕುಟುಂಬಸ್ಥರು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
11ನೇ ದಿನಕ್ಕೆ ಘೋಷಣೆ
ಸ್ಮಾರಕ ನಿರ್ಮಾಣ ಸಂಬಂಧ ಪ್ರಸಿದ್ಧ ವಾಸ್ತುಶಿಲ್ಪಿಗಳಿಂದ 300 ಕೋಟಿ ವೆಚ್ಚದ ಯೋಜನೆ ಈಗಾಗಲೇ ರೂಪುಗೊಳ್ಳುತ್ತಿದೆ. 11ನೇ ದಿನದ ಕಾರ್ಯದ ವೇಳೆ ಸ್ಮಾರಕ ನಿರ್ಮಾಣ ಕುರಿತಂತೆ ನಾನೇ ಪ್ರಕಟಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.