ಬೆಳಗಾವಿ: ಬೆಳಗಾವಿ ನಗರ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ಸೋಮವಾರ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಎಐಸಿಸಿ ವೀಕ್ಷಕರ ಸಮ್ಮುಖದಲ್ಲೇ ಬಿಗ್ ಫೈಟ್ ನಡೆದಿದೆ.
ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ನಡುವೆ ಘರ್ಷಣೆ ಭುಗಿಲೇಳುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಪರಿಸ್ಥಿತಿಯನ್ನು ಹತೋಟಿಗೆ ತಂದರು.
ನಗರ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರ ನಡುವೆಯೇ ಗಲಾಟೆ ಆರಂಭವಾಗಿದೆ. ಈ ಗಲಾಟೆ ವಿಕೋಪಕ್ಕೆ ಹೋಗಿ, ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೈಕೈ ಮಿಲಾಯಿಸಿದ್ದಾರೆ.
ಎಐಸಿಸಿ ವೀಕ್ಷಕ ಮನೋಜ್ ಚವ್ಹಾಣ ನೇತೃತ್ವದಲ್ಲಿ ಇಂದು ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಯುತ್ತಿತ್ತು. ಈ ವೇಳೆ ಜಗಳ ಪ್ರಾರಂಭವಾಗಿ, ಸಭೆಯಲ್ಲಿ ಮಾಜಿ ಶಾಸಕ ರಮೇಶ್ ಕುಡಚಿ ಆಪ್ತನನ್ನು ಥಳಿಸಲಾಗಿದೆ. ಹೇಮಂತ್ ಲಿಂಗಾಡೆ ಎಂಬಾತ ರಮೇಶ್ ಕುಡಚಿ ಆಪ್ತನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಬಳಿಕ ಸುದ್ದಿ ತಿಳಿದ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ರು. ಈ ವೇಳೆ ಪೊಲೀಸರ ಆಗಮನದಿಂದ ಕಾಂಗ್ರೆಸ್ ಸಭೆಯೊಳಗೆ ಪರಿಸ್ಥಿತಿ ಸ್ವಲ್ಪ ತಿಳಿಗೊಂಡಿದೆ ಎನ್ನಲಾಗಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.