ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 2028 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ, ಆದರೆ ಅವರನ್ನು ಇನ್ನೂ ಐದು ವರ್ಷಗಳ ಕಾಲ ಚುನಾವಣಾ ಕಣದಲ್ಲಿ ಉಳಿಯುವಂತೆ ಮನವೊಲಿಸಲು ಪಕ್ಷದ ನಾಯಕರು ಪ್ರಯತ್ನಿಸುತ್ತಾರೆ ಎಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಸೋಮವಾರ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು 'ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ' ಎಂದು ಹೇಳಿದ್ದಾರೆ. ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಅವರು ಹೇಳಿಲ್ಲ. ಈ ಅವಧಿ ಮುಗಿಯುವ ಹೊತ್ತಿಗೆ ತಮಗೆ 82 ವರ್ಷ ವಯಸ್ಸಾಗುತ್ತದೆ, ಆದ್ದರಿಂದ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಆದಾಗ್ಯೂ ಅವರು ರಾಜಕೀಯದಲ್ಲಿ ಸಕ್ರಿಯ ಪಾತ್ರ ವಹಿಸುವುದನ್ನು ಮುಂದುವರಿಸುವುದಾಗಿ ಮತ್ತು ಪಕ್ಷಕ್ಕಾಗಿ ಕೆಲಸ ಮಾಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಹಾಗಿದ್ದರೂ, ಇನ್ನೂ ಐದು ವರ್ಷಗಳ ಕಾಲ ಚುನಾವಣಾ ಕಣದಲ್ಲಿ ಉಳಿಯುವಂತೆ ಅವರನ್ನು ಮನವೊಲಿಸಲು ನಾವೆಲ್ಲರೂ ಪ್ರಯತ್ನಿಸುತ್ತೇವೆ ಎಂದಿದ್ದಾರೆ.
ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತರಾಗುತ್ತಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯು ಕಿರಿಯ ನಾಯಕರನ್ನು ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರೆ ಸಿದ್ದರಾಮಯ್ಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಶಾಸಕ ಅಶೋಕ್ ಪಟ್ಟಣ್ ಹೇಳಿದರು.
ಕಾಂಗ್ರೆಸ್ ಎಂಎಲ್ಸಿ ಎಸಿ ಶ್ರೀನಿವಾಸ ಮಾತನಾಡಿ ಸಿದ್ದರಾಮಯ್ಯ ಅವರು ಇನ್ನೂ ಹಲವು ವರ್ಷಗಳ ಕಾಲ ರಾಜಕೀಯದ ಮೂಲಕ ಜನರಿಗೆ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತಾರೆ .ಕರ್ನಾಟಕದ ಜನರು ಅವರನ್ನು ಎಂದಿಗೂ ಕೈಬಿಡುವುದಿಲ್ಲ ಎಂದು ಹೇಳಿದರು.