ಬೆಂಗಳೂರು: ಬೆಂಗಳೂರು ದಕ್ಷಿಣ ಮತ್ತು ತುಮಕೂರಿನಲ್ಲಿ ಎರಡನೇ ಏರ್ಪೋರ್ಟ್ ನಿಲ್ದಾಣ ನಿರ್ಮಾಣ ವಿಚಾರವಾಗಿ ಸ್ಥಳ ಆಯ್ಕೆ ಸಂಬಂಧ ಪೈಪೋಟಿ ಮಧ್ಯೆ ಇದೀಗ ರಾಜ್ಯ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಸ್ಪಷ್ಟನೆ ನೀಡಿದೆ.
ಲೋಕಸಭೆಯಲ್ಲಿ ಸಂಸದ ಪಿ.ಸಿ.ಮೋಹನ್ ಪ್ರಶ್ನೆಗೆ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೊಲ್ ಈ ಬಗ್ಗೆ ಉತ್ತರ ನೀಡಿದ್ದಾರೆ.
ಕನಕಪುರ ರಸ್ತೆ ಮತ್ತು ಕುಣಿಗಲ್ ರಸ್ತೆಯಲ್ಲಿ ಪರಿಗಣನೆಯಲ್ಲಿರುವ ಸ್ಥಳಗಳು ಮತ್ತು ಪ್ರತಿ ಸ್ಥಳದಲ್ಲಿ ಗುರುತಿಸಲಾದ ಭೂಮಿಯ ವ್ಯಾಪ್ತಿಯು ಸೇರಿದಂತೆ ಎರಡನೇ ವಿಮಾನ ನಿಲ್ದಾಣ ಪ್ರಸ್ತಾವನೆಯ ಪ್ರಸ್ತುತ ಸ್ಥಿತಿಯ ಬಗ್ಗೆ ಸಂಸದ ಪಿ.ಸಿ ಮೋಹನ್ ಲೋಕಸಭೆಯಲ್ಲಿ ಪ್ರಶ್ನೆಯನ್ನು ಎತ್ತಿದ್ದರು.
ಯೋಜನೆಗಾಗಿ ನಡೆಸಲಾಗುತ್ತಿರುವ ಕಾರ್ಯಸಾಧ್ಯತಾ ಅಧ್ಯಯನದ ನಿರೀಕ್ಷಿತ ಪೂರ್ಣಗೊಳಿಸುವ ದಿನಾಂಕ, ಯೋಜನೆಗೆ ಅಂತಿಮ ಅನುಮೋದನೆ ಮತ್ತು ನಿರ್ಮಾಣದ ಪ್ರಾರಂಭಕ್ಕೆ ನಿರೀಕ್ಷಿತ ಸಮಯ ಮತ್ತು ಅಸ್ತಿತ್ವದಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಯಾವುದೇ ವಿಸ್ತರಣೆಯನ್ನು ಯೋಜಿಸಲಾಗಿದೆಯೇ ಎಂಬ ಬಗ್ಗೆಯೂ ಅವರು ಮಾಹಿತಿ ಕೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್, ರಾಜ್ಯ ಸರ್ಕಾರದ ಕೋರಿಕೆಯಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಬೆಂಗಳೂರಿನ ಸುತ್ತಮುತ್ತಲಿನ 3 ಪ್ರಸ್ತಾಪಿತ ಸ್ಥಳಗಳಲ್ಲಿ ಪೂರ್ವ-ಸಾಧ್ಯತಾ ಅಧ್ಯಯನ ನಡೆಸಿ, ಆ ವರದಿಯನ್ನು ರಾಜ್ಯ ಸರ್ಕಾರಕ್ಕೆ ರವಾನಿಸಿತ್ತು.
ಆದರೆ ಕೇಂದ್ರ ಸರ್ಕಾರದ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ನೀತಿಯಡಿ ಹೊಸ ಪ್ರಸ್ತಾವನೆಯನ್ನು ಸಲ್ಲಿಸಲು ರಾಜ್ಯ ಸರ್ಕಾರದಿಂದ ಯಾವುದೇ ಉತ್ತರ ಅಥವಾ ಸ್ಪಂದನೆ ಬಂದಿಲ್ಲ ಎಂದು ಸಚಿವಾಲಯ ತಿಳಿಸಿದೆ. ರಾಜ್ಯ ಸರ್ಕಾರ ಹೊಸ ಪ್ರಸ್ತಾವನೆಯನ್ನು ಅಧಿಕೃತವಾಗಿ ಸಲ್ಲಿಸಿದ ಬಳಿಕವಷ್ಟೇ 2ನೇ ವಿಮಾನ ನಿಲ್ದಾಣದ ಪ್ರಕ್ರಿಯೆಗಳು ಆರಂಭಗೊಳ್ಳಲಿವೆ ಎಂದು ಕೇಂದ್ರ ಸ್ಪಷ್ಟನೆ ನೀಡಿದೆ.
ಇನ್ನೊಂದೆಡೆ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿನಕ್ಕೆ ಸರಾಸರಿ 1.23 ಲಕ್ಷ ಪ್ರಯಾಣಿಕರು ಆಗಮಿಸುತ್ತಿದ್ದು, ವಾರ್ಷಿಕ 51.5 ಮಿಲಿಯನ್ (5.15 ಕೋಟಿ) ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ. ಬೆಳೆಯುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು ಟರ್ಮಿನಲ್ 2ರ ಹಂತ 2ರ ವಿಸ್ತರಣೆ ಕೈಗೆತ್ತಿಕೊಳ್ಳಲು ಏರ್ಪೋರ್ಟ್ ಮಾಸ್ಟರ್ ಪ್ಲಾನ್ ಸಿದ್ಧಪಡಿಸುತ್ತಿದೆ.
AAI ಈಗಾಗಲೇ ಮೂರು ಸ್ಥಳಗಳಲ್ಲಿ ಪೂರ್ವ-ಕಾರ್ಯಸಾಧ್ಯತಾ ಅಧ್ಯಯನಗಳನ್ನು ನಡೆಸಿದೆ. AAI ನ ಸ್ಥಳ ಪರಿಶೀಲನೆಗಳ ನಂತರ, ರಾಜ್ಯ ಸರ್ಕಾರಕ್ಕೆ ಕಾರ್ಯಸಾಧ್ಯತೆ ಮತ್ತು ಕಾರ್ಯತಂತ್ರದ ವರದಿಯನ್ನು ಸಿದ್ಧಪಡಿಸುವ ಸಲುವಾಗಿ, ಬಿಡ್ ಮಾಡಲು ಸಂಸ್ಥೆಗಳಿಗೆ ರಾಜ್ಯ ಸರ್ಕಾರವು ಟೆಂಡರ್ ಅನ್ನು ಕರೆಯಲಾಗಿದೆ ಎಂದು ಮಾರ್ಚ್ನಲ್ಲಿ ಕೈಗಾರಿಕಾ ಸಚಿವ MB ಪಾಟೀಲ್ ಘೋಷಿಸಿದ್ದರು.