ಮಡಿಕೇರಿ: ಗದ್ದಿಗೆಬೆಟ್ಟ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಕಿಡಿಗೇಡಿಗಳು ಸಮಾಧಿಯಂತಿರುವ ರಚನೆಯ ನಿರ್ಮಾಣ ಮಡಿಕೇರಿಯ ಸಿದ್ದಾಪುರ ಸಮೀಪದ ಮಾಲ್ದಾರೆಯಲ್ಲಿ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ.
ಬಿಜೆಪಿ ಮತ್ತು ಹಿಂದುತ್ವ ಸಂಘಟನೆಗಳ ಬೆಂಬಲದೊಂದಿಗೆ ಗ್ರಾಮಸ್ಥರು ದೇವಸ್ಥಾನದ ಹೊರಗೆ ಬೃಹತ್ ಪ್ರತಿಭಟನೆ ನಡೆಸಿ, ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ದೇವಾಲಯದ ಆಡಳಿತ ಮಂಡಳಿಯ ಪ್ರಕಾರ, ಸಿಬ್ಬಂದಿ ಭಾನುವಾರ ಬೆಳಿಗ್ಗೆ ದೇವಾಲಯದ ಆವರಣಕ್ಕೆ ಪ್ರವೇಶಿಸಿದಾಗ ಹೂವಿನಿಂದ ಅಲಂಕರಿಸಲ್ಪಟ್ಟ ಸಮಾಧಿಯ ರಚನೆ ಕಣ್ಣಿಗೆ ಬಿದ್ದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಅವರು, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಮತ್ತು ಈ ಪ್ರದೇಶದಲ್ಲಿ ಕೋಮು ಸೌಹಾರ್ದತೆಯನ್ನು ಕೆರಳಿಸಲು ಇತರ ಧರ್ಮದ ಕೆಲವು ಕಿಡಿಗೇಡಿಗಳು ಸಮಾಧಿ ಸ್ಥಾಪಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ದುಷ್ಕರ್ಮಿಗಳು ಎರಡು ವಾಹನಗಳಲ್ಲಿ ಬಂದು ಸಮಾಧಿ ಸ್ಥಾಪಿಸುತ್ತಿರುವುದನ್ನು ತೋರಿಸುವ ಸಿಸಿಟಿವಿ ದೃಶ್ಯಾವಳಿಗಳನ್ನು ದೇವಾಲಯದ ಆಡಳಿತ ಮಂಡಳಿ ಪೊಲೀಸರ ಗಮನಕ್ಕೆ ತಂದಿದೆ.
ಸಿದ್ದಾಪುರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿರುವಾಗಲೇ ಬಿಜೆಪಿ ಹಾಗೂ ಹಿಂದುತ್ವ ಸಂಘಟನೆಗಳ ಬೆಂಬಲಿತ ನೂರಾರು ಗ್ರಾಮಸ್ಥರು ಸೋಮವಾರ ದೇವಸ್ಥಾನದ ಹೊರಗೆ ಜಮಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದ್ದರಿಂದ ಮಾಲ್ದಾರೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಪೊಲೀಸ್ ಇಲಾಖೆ ವಿರುದ್ಧ ಘೋಷಣೆ ಕೂಗಿ, ಬಂಧನಕ್ಕೆ ವಿಳಂಬ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಈ ಪ್ರದೇಶ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವುದರಿಂದ ಅಧಿಕಾರಿಗಳು ಕೂಡ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.
ಏತನ್ಮಧ್ಯೆ, ಪ್ರತಿಭಟನಾಕಾರರು ಸಮಾಧಿಯನ್ನು ಅಗೆದಾಗ ಅದು ಖಾಲಿಯಾಗಿ ಕಂಡುಬಂದಿತು. ದುಷ್ಕರ್ಮಿಗಳು ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದು, ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರ ನಿಷ್ಕ್ರಿಯತೆಯನ್ನು ಪ್ರಶ್ನಿಸಿದ ಪ್ರತಿಭಟನಾಕಾರರು, ಪೊಲೀಸರ ವಿರುದ್ಧ ನಿರ್ಲಕ್ಷ್ಯದ ಆರೋಪ ಮಾಡಿದ್ದಾರೆ. ಪ್ರತಿಭಟನೆಯಲ್ಲಿ ಗ್ರಾಮದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಹಿಂದೂ ಸಂಘಟನೆಗಳ ಹಲವಾರು ನಾಯಕರು, ಪೊಲೀಸರು ಬಂಧನವನ್ನು ವಿಳಂಬ ಮಾಡಿದರೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಘೋಷಿಸಿದರು.
ರಸ್ತೆ ತಡೆ ಮುಂದುವರಿದಿದ್ದು, ಅರಣ್ಯ ಇಲಾಖೆ ಆರ್ಎಫ್ಒ ನವೀನ್ ಕುಮಾರ್ ಮತ್ತು ಪೊಲೀಸ್ ಸಿಬ್ಬಂದಿ ಪ್ರತಿಭಟನಾಕಾರರಿಗೆ ಪ್ರಕರಣ ದಾಖಲಿಸಲಾಗುವುದು ಮತ್ತು ದುಷ್ಕರ್ಮಿಗಳನ್ನು ಪತ್ತೆಹಚ್ಚಲು ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರದೇಶದಲ್ಲಿ 100 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ರಾಬಿನ್ ದೇವಯ್ಯ ಮತ್ತು ರವಿ ಕುಶಾಲಪ್ಪ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಆರ್ಎಸ್ಎಸ್ ಮತ್ತು ಇತರ ಹಿಂದೂ ಸಂಘಟನೆಗಳ ಸದಸ್ಯರೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.