ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದವರ ಬಗ್ಗೆ ಮಾಹಿತಿ ನೀಡಿದ ಸಾಮಾಜಿಕ ಕಾರ್ಯಕರೊಬ್ಬರ ವಿರುದ್ಧ ಹಲ್ಲೆ ಹಾಗೂ ಜೀವ ಬೆದರಿಕೆ ಸೇರಿದಂತೆ ಇನ್ನಿತರ ಆರೋಪಗಳ ಮೇಲೆ FIR ದಾಖಲಿಸಿದ ಪೊಲೀಸರ ನಡೆಯನ್ನು ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ.
ಸಾಮಾಜಿಕ ಕಾರ್ಯಕರ್ತ ಮಲ್ಲಸಂದ್ರದ ಟಿ. ನಾಗೇಂದ್ರಪ್ಪ ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗಳನ್ನು ರದ್ದುಪಡಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಪೊಲೀಸರ ಕಾರ್ಯ ನಿಜಕ್ಕೂ ರಾಷ್ಟ್ರದ ಭದ್ರತೆ ಮತ್ತು ಹಿತಾಸಕ್ತಿಗೆ ಬೆದರಿಕೆಯಾಗಿದ್ದು, ಸರ್ಕಾರ ಅಕ್ರಮ ವಲಸಿಗರನ್ನು ಓಲೈಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.
ಬೆಂಗಳೂರಿನ ಹೊಸಸಿದ್ದಾಪುರದಲ್ಲಿ ಬಾಂಗ್ಲಾದೇಶದ ಪ್ರಜೆ ನಸ್ರೀನಾ ನೆಲೆಸಿರುವ ಬಗ್ಗೆ ಮಾಹಿತಿ ನೀಡಿದ 15 ನಿಮಿಷಗಳಲ್ಲಿಯೇ ಸಾಮಾಜಿಕ ಕಾರ್ಯಕರ್ತ ಟಿ. ನಾಗೇಂದ್ರಪ್ಪನ ವಿರುದ್ಧ ಹಲ್ಲೆ ಆರೋಪದ ಮೇಲೆ ಎಫ್ಐಆರ್ ದಾಖಲಿಸಿ ಅರ್ಜಿದಾರರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಮತ್ತೊಂದೆಡೆ ಮಧ್ಯಾಹ್ನ 3 ಗಂಟೆಗೆ ಕೊಡತಿ ಗ್ರಾಮದ ಕಾರ್ಮಿಕರ ಗುಡಿಸಲಿನಲ್ಲಿದ್ದ ಬಾಂಗ್ಲಾ ನಿವಾಸಿ ಮೊಹಮ್ಮದ್ ಶೈದುಲ್ಲಾ ಇಸ್ಲಾಂ ನೀಡಿದ ದೂರು ಆಧರಿಸಿ ವರ್ತೂರು ಠಾಣಾ ಪೊಲೀಸರು ಮತ್ತೊಂದು ದೂರು ದಾಖಲಿಸಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಅರ್ಜಿದಾರರ ವಿರುದ್ಧದ ಎರಡೂ ಎಫ್ಐಆರ್ ಗಳಿಗೆ ಮುಂದಿನ ವಿಚಾರಣೆವರೆಗೂ ತಡೆ ನೀಡಿದ ನ್ಯಾಯಪೀಠ. ಹಾಗೆಯೇ, ಪ್ರಕರಣ ಕುರಿತು ಸಂಪೂರ್ಣ ಮಾಹಿತಿ ಒದಗಿಸುವಂತೆ ಪೊಲೀಸರು ಹಾಗೂ ಸರ್ಕಾರಕ್ಕೆ ಸೂಚನೆ ನೀಡಿ ಅರ್ಜಿಗಳ ವಿಚಾರಣೆಯನ್ನು ಆ.6ಕ್ಕೆ ಮುಂದೂಡಿತು.