ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಇತ್ತೀಚೆಗೆ ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಕಾವೇರಿ ಜಲ ಪರಿಸ್ಥಿತಿಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿದರು.
ಕಾವೇರಿ ಜಲ ವಿವಾದ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಸ್ಟ್ 2ರಂದು (ಭಾನುವಾರ) ಬೆಂಗಳೂರಿನ ತಮ್ಮ ಅಧಿಕೃತ ನಿವಾಸ'ಕೃಷ್ಣಾ'ದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.
ತಮಿಳು ನಾಡಿಗೆ ಹೆಚ್ಚಿನ ನೀರು ಬಿಟ್ಟಿಲ್ಲ, ಸಹಜವಾಗಿ ಹರಿದುಹೋಗುವ ನೀರು ತಮಿಳು ನಾಡಿಗೆ ಹೋಗುತ್ತಿದೆಯಷ್ಟೆ ಎಂದು ಸ್ಪಷ್ಟಪಡಿಸಿದರು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA), ಕರ್ನಾಟಕದ ಮನವಿಯನ್ನು ತಿರಸ್ಕರಿಸಿ, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಶಿಫಾರಸನ್ನು ಎತ್ತಿಹಿಡಿದು, ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿದ ಬೆನ್ನಲ್ಲೇ ಈ ಸಭೆ ನಡೆಯುತ್ತಿದೆ.
ಸಭೆಗೆ ಮಾಜಿ ಮುಖ್ಯಮಂತ್ರಿಗಳು, ಸಂಸದರು, ಹಾಗೂ ಕಾವೇರಿ ಜಲಾನಯನ ಪ್ರದೇಶದ ಶಾಸಕರನ್ನು ಆಹ್ವಾನಿಸಲಾಗಿದೆ. ಸಭೆಯಲ್ಲಿ ಕಾವೇರಿ ನೀರಿನ ಹಂಚಿಕೆ ಕುರಿತು ರಾಜ್ಯದ ಮುಂದಿನ ಕಾನೂನು ಹಾಗೂ ರಾಜಕೀಯ ಹೋರಾಟದ ರೂಪುರೇಷೆಗಳ ಕುರಿತು ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸಲೀಂ ಅಹ್ಮದ್, ಹಿರಿಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.
ದೆಹಲಿಯಲ್ಲಿ ನಡೆದ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA), ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸನ್ನು ಎತ್ತಿಹಿಡಿದು, ಕರ್ನಾಟಕವು ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಬೇಕು ಎಂದು ನಿರ್ದೇಶಿಸಿತ್ತು. ಒಟ್ಟು 4 ಟಿಎಂಸಿ ನೀರು ಬಿಡುಗಡೆ ಮಾಡಲು ಶಿಫಾರಸು ಮಾಡಲಾಗಿದೆ.
ಆಗಸ್ಟ್ 3ರಂದು ನಿಗದಿಯಾಗಿದ್ದ ಸಭೆಯನ್ನು ಸದ್ಯಕ್ಕೆ ಮುಂದೂಡುವಂತೆ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಕಚೇರಿಯಿಂದ ನಮ್ಮ ಮುಖ್ಯ ಕಾರ್ಯದರ್ಶಿಗೆ ಕರೆ ಬಂದಿತ್ತು. ಮುಖ್ಯಮಂತ್ರಿ ನಮ್ಮನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು ಬಯಸಿದ್ದಾರೆ ಎಂದು ತಿಳಿಸಲಾಗಿತ್ತು. ಆ ಮನವಿಯನ್ನು ನಾವು ಒಪ್ಪಿಕೊಂಡು ಆಗಸ್ಟ್ 3ರಂದು ಸಭೆಯನ್ನು ನಿಗದಿಪಡಿಸಿದ್ದೆವು.
ಆದರೆ, ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಈಗಿನ ವಾತಾವರಣ ಸೂಕ್ತವಾಗಿಲ್ಲ ಎಂದು ನನಗೆ ಅನಿಸುತ್ತಿದೆ. ಆದ್ದರಿಂದ, ಸಭೆಯನ್ನು ಸ್ವಲ್ಪ ಕಾಲ ಮುಂದೂಡುವಂತೆ ತಮಿಳುನಾಡು ಮುಖ್ಯಮಂತ್ರಿಗೆ ಮನವಿ ಮಾಡಿದ್ದೇನೆ. ಎರಡೂ ರಾಜ್ಯಗಳ ನಡುವೆ ಸೌಹಾರ್ದಯುತ ವಾತಾವರಣ ಇರಬೇಕು ಎಂಬುದು ನನ್ನ ಆಶಯ. ಯಾವುದೇ ರೀತಿಯ ಕಹಿ ಭಾವನೆಗಳು ಮೂಡಬಾರದು.
ನೀರಿನ ಸಮಸ್ಯೆಗೆ ಸಂಬಂಧಿಸಿದ ಯಾವುದೇ ಪರಿಹಾರವೂ ಎರಡೂ ರಾಜ್ಯಗಳಿಗೆ ಅನುಕೂಲವಾಗಬೇಕು. ಇದಕ್ಕೆಲ್ಲ ಮಳೆ ದೇವರ ಕೃಪೆಯೇ ಮುಖ್ಯ. ಮಳೆಯಾದರೆ ಸಮಸ್ಯೆ ಬಹುತೇಕ ಬಗೆಹರಿಯುತ್ತದೆ," ಎಂದು ಹೇಳಿದರು.
ಮೆಕೆದಾಟು ಯೋಜನೆ ಕುರಿತು ಮಾತನಾಡಿದ ಅವರು, "ಸುಪ್ರೀಂ ಕೋರ್ಟ್ ಈಗಾಗಲೇ ಸ್ಪಷ್ಟವಾದ ತೀರ್ಪು ನೀಡಿದೆ. ನಾವು ನ್ಯಾಯಾಲಯದ ಆದೇಶವನ್ನು ಪಾಲಿಸಲೇಬೇಕು. ಯಾವುದೇ ಆದೇಶವನ್ನು ಉಲ್ಲಂಘಿಸುವ ಉದ್ದೇಶ ನಮ್ಮದಲ್ಲ.
ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆ ಕುರಿತು ಪ್ರತಿಕ್ರಿಯಿಸಿದ ಅವರು, "ರಾಜ್ಯದ ಹಿತದೃಷ್ಟಿಯಿಂದ ನಮ್ಮ ಪಕ್ಷದ ನಾಯಕರು ಹಾಗೂ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ನನ್ನ ಕರ್ತವ್ಯ. ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ, ರಾಜ್ಯದ ಹಿತಾಸಕ್ತಿಯ ವಿಷಯದಲ್ಲಿ ಎಲ್ಲರೂ ನಮ್ಮೊಂದಿಗೆ ಸಹಕರಿಸುತ್ತಿದ್ದಾರೆ. ಇದೇ ಕಾರಣಕ್ಕೆ ನಾಡಿದ್ದು ಸರ್ವಪಕ್ಷ ಸಭೆ ಕರೆದಿದ್ದೇವೆ.
ಅಷ್ಟರೊಳಗೆ ತಮಿಳುನಾಡು ಮುಖ್ಯಮಂತ್ರಿಗೆ ಸಭೆಯನ್ನು ಮುಂದೂಡುವಂತೆ ಮನವಿ ಮಾಡಿದ್ದೇನೆ. ಎರಡೂ ರಾಜ್ಯಗಳ ಹಿತದೃಷ್ಟಿಯಿಂದ ಶಾಂತ, ಸೌಹಾರ್ದಯುತ ಮತ್ತು ಉತ್ತಮ ವಾತಾವರಣದಲ್ಲಿ ಭೇಟಿಯಾಗಿ ಚರ್ಚಿಸುವುದು ಸೂಕ್ತ," ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.