ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ದಿನ ಕಾರಿನಲ್ಲಿ ಮೌನವಾಗಿ ಕುಳಿತಿದ್ದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟ್ರೋಲ್ ಆಗುತ್ತಿರುವ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ನಾಯಕರೊಬ್ಬರು ಅಧಿಕಾರದಿಂದ ಕೆಳಗಿಳಿಯುತ್ತಿದ್ದರೆ, ಹೊಸ ನಾಯಕರು ಜವಾಬ್ದಾರಿ ವಹಿಸಿಕೊಳ್ಳುವಂತಹ ಭಾವನಾತ್ಮಕ ಸಂದರ್ಭ ಅದಾಗಿತ್ತು. ಆ ಸಮಯದಲ್ಲಿ ಏನು ಮಾತನಾಡಬೇಕೆಂದು ತಿಳಿದಿರಲಿಲ್ಲ. ಅಂತಹ ಕ್ಷಣಗಳಲ್ಲಿ ಯಾವುದೇ ಹೇಳಿಕೆ ನೀಡಿದರೂ ಅದನ್ನು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿಯೇ ನಾನು ಮೌನವಾಗಿದ್ದೆ ಎಂದು ಹೇಳಿದರು.
ಟ್ರೋಲ್ಗಳ ಬಗ್ಗೆ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ಟ್ರೋಲ್ಗಳು ನನಗೆ ಹೊಸದಲ್ಲ. ಕರ್ನಾಟಕದ ಟ್ರೋಲ್ ಪೇಜ್ಗಳ ಕ್ರಶ್ ನಾನಾಗಿದ್ದೇನೆ ಎಂದು ತಿಳಿಸಿದರು.
ಸಚಿವ ಸ್ಥಾನ ಸಿಗುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಸಚಿವ ಸ್ಥಾನ ಪಡೆಯುವ ಆಸೆ ಇದೆ. ಆದರೆ ಕೊಟ್ಟರೂ, ಕೊಡದಿದ್ದರೂ ಪರವಾಗಿಲ್ಲ. ನಾವು ಅಧಿಕಾರಕ್ಕಾಗಿ ರಾಜಕೀಯಕ್ಕೆ ಬಂದಿಲ್ಲ, ಪಕ್ಷದ ಸಿದ್ಧಾಂತ ಮತ್ತು ಜನಸೇವೆ ಮಾಡುವ ಉದ್ದೇಶದಿಂದ ಬಂದಿದ್ದೇವೆ. ನಾನು ಒಬಿಸಿ ಸಮುದಾಯದ ಯುವ ನಾಯಕ. ರಾಜ್ಯದಲ್ಲಿ ಒಬಿಸಿ ಚಳವಳಿಯನ್ನು ಮತ್ತಷ್ಟು ಬಲಪಡಿಸುವುದು ನನ್ನ ಉದ್ದೇಶ. ಅಧಿಕಾರವೇ ಗುರಿಯಾಗಿದ್ದರೆ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ಕೆಲಸ ಮಾಡುತ್ತಿರಲಿಲ್ಲ ಎಂದು ಪ್ರದೀಪ್ ಈಶ್ವರ್ ಹೇಳಿದರು.
ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಿಕೆ ಹರಿಪ್ರಸಾದ್ ಮತ್ತು ಮುಖ್ಯಮಂತ್ರಿಯಾದ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯ ಮತ್ತೊಂದು ಹಂತದ ಅಭಿವೃದ್ಧಿಯತ್ತ ಸಾಗಲಿದೆ ಎಂಬ ವಿಶ್ವಾಸವಿದೆ. ಒಬಿಸಿ ಸಮುದಾಯದ ನಾಯಕ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ಗೆ ಒಬಿಸಿ ಸಮುದಾಯದ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.