ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದ ಗ್ರಾಮೀಣ ಮೂಲಸೌಕರ್ಯ ಮತ್ತು ರೈತರ ಆರ್ಥಿಕ ಪ್ರಗತಿಗೆ ಬೂಸ್ಟರ್ ಡೋಸ್ ನೀಡುವ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯಾದಗಿರಿ ಜಿಲ್ಲೆಯ ಗುರ್ಮಿತ್ಕಲ್ ತಾಲ್ಲೂಕಿನ ಬಡೇಪಲ್ಲಿಯಲ್ಲಿ ನೂತನ "ರೈತರ ತರಬೇತಿ ಕೇಂದ್ರ ಮತ್ತು ಅಗ್ರೋ-ಪ್ರೊಸೆಸಿಂಗ್ ಕಾಮನ್ ಫೆಸಿಲಿಟಿ ಸೆಂಟರ್ (CFC) ಗುರುವಾರ ಉದ್ಘಾಟಿಸಿದ್ದಾರೆ.
ಸಂಸದ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (MPLADS) ಅಡಿಯಲ್ಲಿ ಸ್ಥಾಪಿಸಲಾದ ಈ ಯೋಜನೆಗೆ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಮಾರ್ಗದರ್ಶನ ನೀಡಿದೆ. ಕೇಂದ್ರ ಸರ್ಕಾರ ಹಾಗೂ ನಬಾರ್ಡ್ ಸಹಯೋಗದೊಂದಿಗೆ ಈ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದ ರೈತರ ಆರ್ಥಿಕ ಸ್ಥಿತಿ ಸುಧಾರಣೆ, ಕೃಷಿ ಮೌಲ್ಯ ಸರಪಳಿ ಬಲಪಡಿಸುವುದು ಹಾಗೂ ಗ್ರಾಮೀಣ ಜೀವನೋಪಾಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಈ ಕೇಂದ್ರವನ್ನು ನಿರ್ಮಿಸಲಾಗಿದೆ.
ಈ ಕೇಂದ್ರದಲ್ಲಿ ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉತ್ಪನ್ನ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಕುರಿತ ತರಬೇತಿಗಳನ್ನು ನೀಡಲಾಗುತ್ತದೆ. ಜೊತೆಗೆ, ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಮೌಲ್ಯ ಹೆಚ್ಚಿಸುವ ಅಗತ್ಯ ಮೂಲಸೌಕರ್ಯಗಳನ್ನೂ ಒದಗಿಸಲಾಗುತ್ತದೆ.
ರೈತರಿಗೆ ತರಬೇತಿ ನೀಡುವ ಜೊತೆಗೆ ಕೃಷಿ ಉತ್ಪನ್ನಗಳ ಪ್ರೊಸೆಸಿಂಗ್ಗೆ ಅಗತ್ಯವಾದ ಕಾಮನ್ ಫೆಸಿಲಿಟಿ ಸೆಂಟರ್ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಸ್ಥಳೀಯ ರೈತರಿಗೆ ಉತ್ಪಾದಕತೆ ಹೆಚ್ಚಿಸುವುದರ ಜೊತೆಗೆ ಹೆಚ್ಚುವರಿ ಆದಾಯ ಗಳಿಸುವ ಅವಕಾಶ ಸಿಗಲಿದೆ ಎನ್ನಲಾಗಿದೆ.
ಯೋಜನೆಯ ಮೂಲಕ ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಜ್ಞಾನ ಹಂಚಿಕೆ, ಕೌಶಲ್ಯ ವೃದ್ಧಿ ಹಾಗೂ ಆಧುನಿಕ ಕೃಷಿ ಪದ್ಧತಿಗಳ ಅಳವಡಿಕೆಗೆ ಉತ್ತೇಜನ ಸಿಗಲಿದ್ದು, ಗ್ರಾಮೀಣಾಭಿವೃದ್ಧಿಗೆ ಇದು ಪ್ರಮುಖ ಹೆಜ್ಜೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಸಹಯೋಗದಲ್ಲಿ ಜಾರಿಯಾಗಿರುವ ಈ ಯೋಜನೆ, ಯಾದಗಿರಿ ಜಿಲ್ಲೆಯ ಕೃಷಿ ಆಧಾರಿತ ಆರ್ಥಿಕ ವ್ಯವಸ್ಥೆಗೆ ಹೊಸ ಬಲ ತುಂಬುವ ನಿರೀಕ್ಷೆ ಮೂಡಿಸಿದೆ