ಮಡಿಕೇರಿ: ಮಡಿಕೇರಿ ಜಿಲ್ಲಾ ಕಾರಾಗೃಹದೊಳಗೆ ನಡೆದ ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಚಾರಣಾಧೀನ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಟಿ.ಶೆಟ್ಟಿಗೇರಿ ನಿವಾಸಿ ಹೇಮಂತ್ (25) ಎಂದು ಗುರುತಿಸಲಾಗಿದೆ. ಜೂನ್ 1ರಂದು ಬೆಳಿಗ್ಗೆ ಸುಮಾರು 7.58ರ ವೇಳೆಗೆ ಕಾರಾಗೃಹದ ಅಡುಗೆಮನೆ ಸಮೀಪ ಈ ಘಟನೆ ನಡೆದಿತ್ತು.
ಅಂಡರ್ಟ್ರಯಲ್ ಕೈದಿಗಳಾದ ಹೇಮಂತ್ ಹಾಗೂ ರಾಜೇಶ್ ಎಲ್.ಎಸ್ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಕೈ-ಕೈ ಮಿಲಾಯಿಸುವ ಹಂತ ತಲುಪಿದೆ.
ಈ ವೇಳೆ ರಾಜೇಶ್, ಚಾಕುವಿನಿಂದ ಹೇಮಂತ್ ಅವರ ಎದೆ, ಹೊಟ್ಟೆ ಮತ್ತು ಬೆನ್ನಿನ ಭಾಗಗಳಿಗೆ ಹಲವು ಬಾರಿ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಹೇಮಂತ್ ಅವರನ್ನು ಮೊದಲಿಗೆ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಅವರು ಮೃತಪಟ್ಟಿದ್ದಾರೆ. ಹಳೆಯ ವೈಷಮ್ಯವೇ ಘಟನೆಗೆ ಕಾರಣ ಎನ್ನಲಾಗಿದೆ.
ರಾಜೇಶ್ ಅವರು 2024ರ ಅಕ್ಟೋಬರ್ನಿಂದ ಕೊಲೆ ಪ್ರಕರಣವೊಂದರಲ್ಲಿ ಬಂಧಿತರಾಗಿ ಜೈಲಿನಲ್ಲಿದ್ದರು. ಹೇಮಂತ್ ಅವರನ್ನು ಇದೇ ವರ್ಷದ ಮೇ ತಿಂಗಳಲ್ಲಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ರಾಜೇಶ್ ಅವರ ಸಹೋದರ ಗಣೇಶ್ ಮೇಲೆ ಹೇಮಂತ್ ಹಲ್ಲೆ ನಡೆಸಿದ್ದರು ಎಂಬ ಆರೋಪವಿದ್ದು, ಇದೇ ವೈಷಮ್ಯ ಜೈಲಿನೊಳಗೂ ಮುಂದುವರಿದು ಈ ಕೃತ್ಯಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಇನ್ನೊಂದು ಅಚ್ಚರಿಯ ಸಂಗತಿಯೆಂದರೆ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಅವರ ತಂದೆ, ತಾಯಿ ಹಾಗೂ ಸಹೋದರರೂ ವಿಚಾರಣಾಧೀನ ಕೈದಿಗಳಾಗಿ ಮಡಿಕೇರಿ ಜಿಲ್ಲಾ ಕಾರಾಗೃಹದಲ್ಲೇ ಬಂಧಿತರಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ರಾಜೇಶ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.
ಈ ನಡುವೆ ಕಾರಾಗೃಹದೊಳಗೆ ಚಾಕು ಹೇಗೆ ಸಿಕ್ಕಿತು ಮತ್ತು ಭದ್ರತಾ ಲೋಪ ನಡೆದಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.