ಬೆಂಗಳೂರು: ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ 42ನೇ ಎಸಿಜೆಎಂ ಕೋರ್ಟ್ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು ಶಾಸಕರಿಗೆ ಬಂಧನ ಭೀತಿ ಶುರುವಾಗಿದೆ. ಅಕ್ರಮವಾಗಿ ಗೋ ಹತ್ಯೆ ಮಾಡಿದ್ದಾರೆಂದು ಆರೋಪಿ ಶಾಸಕ ಶರಣು ಸಲಗರ್ 2023ರ ಜುಲೈ 1ರಂದು ಬಕ್ರೀದ್ ಹಬ್ಬದ ವೇಳೆ ಗಲಾಟೆ ಮಾಡಿದ್ದರು. ಮುಸ್ಲಿಂ ಸಮುದಾಯದ ಮನೆಯೊಂದಕ್ಕೆ ನುಗ್ಗಿ ಗಲಾಟೆ ಮಾಡಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಈ ಕುರಿತು ತನಿಖೆ ನಡೆಸಿದ ಪೊಲೀಸರು ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.
ಸಾಕ್ಷ್ಯ ವಿಚಾರಣೆ ವೇಳೆ ಕೋರ್ಟ್ಗೆ ಶಾಸಕರು ಗೈರಾಗಿದ್ದರಿಂದ ಇಂದು ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಹೀಗಾಗಿ ಪೊಲೀಸರು ಯಾವುದೇ ಕ್ಷಣದಲ್ಲಾದರೂ ಶರಣು ಸಲಗರ್ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಇನ್ನು ಸಲಗರ್ ಸೇರಿದಂತೆ ಸುಮಾರು 9 ಜನರ ವಿರುದ್ಧ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಶರಣು ಸಲಗರ್ ಜೊತೆ ಲಿಂಗರಾಜ್, ಸಂತೋಷ್, ಶಿವಕುಮಾರ್, ವಿನೋದ್, ಸಚಿನ್, ರಾಜಕುಮಾರ್, ಶಂಬುಲಿಂಗ್ ಹಾಗೂ ಶರಣಬಸಪ್ಪ ಎಂಬುವರ ವಿರುದ್ಧ ಕೋರ್ಚ್ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.