ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯದ ವಿವಿಧ ಮೂಲಸೌಕರ್ಯ, ನೀರಾವರಿ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದ ಅನುಮೋದನೆ, ಆರ್ಥಿಕ ನೆರವು ಹಾಗೂ ಸಹಕಾರ ಕೋರಿರುವ 18 ಅಂಶಗಳ ಮನವಿಪತ್ರವನ್ನು ಸಲ್ಲಿಸಿದರು.
ಈ ಮನವಿಪತ್ರದಲ್ಲಿ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದ ಬೆಂಬಲ, ಬಾಕಿ ಅನುದಾನಗಳ ಬಿಡುಗಡೆ, ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿ ಹಾಗೂ ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಸ್ಥಾಪನೆಗೆ ಒತ್ತು ನೀಡಲಾಗಿದೆ.
ಮುಖ್ಯ ಬೇಡಿಕೆಗಳ ಪೈಕಿ, ಬೆಂಗಳೂರಿನ ಹೆಚ್ಚುತ್ತಿರುವ ಮೂಲಸೌಕರ್ಯ ಅಗತ್ಯಗಳನ್ನು ಪೂರೈಸಲು 26,000 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ನೀಡುವಂತೆ ಶಿವಕುಮಾರ್ ಮನವಿ ಮಾಡಿದ್ದಾರೆ. ಜೊತೆಗೆ, ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ ಯೋಜನೆಗೆ ಶೀಘ್ರ ಅನುಮೋದನೆ ನೀಡುವುದು ಹಾಗೂ ಬೆಂಗಳೂರು ಮೆಟ್ರೋ ಮತ್ತು ಉಪನಗರ ರೈಲು ಜಾಲದ ವಿಸ್ತರಣೆಗೆ ಹೆಚ್ಚುವರಿ ಆರ್ಥಿಕ ನೆರವು ಒದಗಿಸುವಂತೆ ಕೋರಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ವಾರ್ಷಿಕ 25,000 ಕೋಟಿ ರೂಪಾಯಿ ಆರ್ಥಿಕ ನೆರವು ನೀಡುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ಈ ಪ್ರದೇಶದಲ್ಲಿ ಮೂಲಸೌಕರ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಇನ್ನಷ್ಟು ಹೂಡಿಕೆ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.
ನೀರಾವರಿ ಕ್ಷೇತ್ರದಲ್ಲಿ, ಬಹುಕಾಲದಿಂದ ಬಾಕಿ ಉಳಿದಿರುವ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಶೀಘ್ರ ಅನುಮೋದನೆ ನೀಡುವಂತೆ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಬೆಂಬಲ ಮುಂದುವರಿಸುವಂತೆ ಅವರು ಒತ್ತಾಯಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ 21,167.93 ಕೋಟಿ ರೂಪಾಯಿ ವೆಚ್ಚದ ಅಂದಾಜು ಈಗಾಗಲೇ ಮೌಲ್ಯಮಾಪನಗೊಂಡಿದ್ದು, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ವೇಗವರ್ಧಿತ ನೀರಾವರಿ ಪ್ರಯೋಜನ ಕಾರ್ಯಕ್ರಮ (PMKSY-AIBP) ಅಡಿಯಲ್ಲಿ ಶೀಘ್ರ ಅನುದಾನ ಬಿಡುಗಡೆ ಮಾಡುವಂತೆ ಕೋರಿದ್ದಾರೆ.
ಕಳಸಾ ಮತ್ತು ಬಂಡೂರಿ ಕುಡಿಯುವ ನೀರಿನ ಯೋಜನೆಗಳಿಗೆ ಅರಣ್ಯ ಮತ್ತು ವನ್ಯಜೀವಿ ಇಲಾಖೆಗಳ ಅನುಮೋದನೆ ವಿಳಂಬವಾಗುತ್ತಿರುವ ವಿಚಾರವನ್ನೂ ಮನವಿಪತ್ರದಲ್ಲಿ ಪ್ರಸ್ತಾಪಿಸಲಾಗಿದೆ. ಈ ಯೋಜನೆಗಳಿಗೆ ಯಾವುದೇ ಕಾನೂನು ಅಡೆತಡೆಗಳಿಲ್ಲ ಎಂದು ತಿಳಿಸಿದ ಶಿವಕುಮಾರ್, ಶೀಘ್ರ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.
ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಬೆಂಬಲಕ್ಕಾಗಿ ಪಿಎಂಕೆಎಸ್ ವೈ-ಎಐಬಿಪಿ, ಪ್ರವಾಹ ನಿರ್ವಹಣೆ ಮತ್ತು ಗಡಿ ಪ್ರದೇಶಗಳ ಕಾರ್ಯಕ್ರಮ (FMBAP) ಹಾಗೂ ಆಧುನೀಕರಣ, ಕಮಾಂಡ್ ಏರಿಯಾ ಅಭಿವೃದ್ಧಿ ಮತ್ತು ಜಲ ನಿರ್ವಹಣೆ (MCAD) ಯೋಜನೆಗಳಡಿ ನೆರವು ನೀಡುವಂತೆ ಕೋರಿದ್ದಾರೆ.
ಪ್ರಸ್ತಾವಿತ ಗೋದಾವರಿ-ಕಾವೇರಿ ಮತ್ತು ಬೇಡ್ತಿ-ವರದಾ ನದಿ ಜೋಡಣೆ ಯೋಜನೆಗಳ ಅಡಿಯಲ್ಲಿ ಕರ್ನಾಟಕಕ್ಕೆ ಕನಿಷ್ಠ 40-45 ಟಿಎಂಸಿ ನೀರು ಹಂಚಿಕೆ ಮಾಡುವಂತೆ ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳಿಗೆ ಬಾಕಿ ಇರುವ ಅನುದಾನಗಳ ವಿಷಯವನ್ನೂ ಅವರು ಪ್ರಸ್ತಾಪಿಸಿದ್ದಾರೆ. 2025-26ನೇ ಸಾಲಿನ 15ನೇ ಹಣಕಾಸು ಆಯೋಗದ ಅನುದಾನದಡಿ ಗ್ರಾಮ ಪಂಚಾಯಿತಿಗಳಿಗೆ ನೀಡಬೇಕಿರುವ 2,860 ಕೋಟಿ ರೂಪಾಯಿ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ. ಈ ವಿಳಂಬದಿಂದ ಗ್ರಾಮೀಣ ಅಭಿವೃದ್ಧಿ ಕಾರ್ಯಗಳಿಗೆ ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಾರ್ವಜನಿಕ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರಮುಖ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಸಹಕಾರ ಮತ್ತು ಸಕಾಲಿಕ ಆರ್ಥಿಕ ನೆರವು ಅಗತ್ಯವಾಗಿದೆ ಎಂದು ಡಿ ಕೆ ಶಿವಕುಮಾರ್ ಒತ್ತಿ ಹೇಳಿದ್ದಾರೆ.