ಬೆಂಗಳೂರು: ವಿವಾದದ ನಡುವೆ ಬಿಡದಿ ಟೌನ್ ಶಿಪ್ ಯೋಜನೆಯ ಭೂ ಸ್ವಾಧೀನಕ್ಕೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಯೋಜನೆಯ ಮೊದಲ ಹಂತದಲ್ಲೇ 500 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಕ್ರಮ ಆರಂಭಿಸಿದೆ.
ಮೊದಲ ಹಂತದ ಭೂ ಸ್ವಾಧೀನ ರಾಮನಗರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ನಡೆಯಲಿದೆ. ಯೋಜನಾ ವ್ಯಾಪ್ತಿಯ 9 ಕಂದಾಯ ಗ್ರಾಮಗಳ ಪೈಕಿ ಪ್ರಾರಂಭಿಕವಾಗಿ 3 ಗ್ರಾಮಗಳ 518 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟ ಮಾಡಿದೆ.
ಬಿಡದಿ ಹೋಬಳಿಯ ಕೆಂಪಯ್ಯನಪಾಳ್ಯ, ಮಂಡಲಹಳ್ಳಿ ಹಾಗೂ ವಡೇರಹಳ್ಳಿ ಗ್ರಾಮದ ಸುಮಾರು 754 ರೈತರ ಜಮೀನುಗಳ ಭೂಸ್ವಾಧೀನಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಬಿಡದಿ ಟೌನ್ ಶಿಪ್ಗಾಗಿ ಭೂಸ್ವಾಧೀನಕ್ಕೆ ಪರಿಹಾರವಾಗಿ ಪ್ರತಿ ಎಕರೆ ಭೂಮಿಗೆ ಕನಿಷ್ಠ 2.07 ಕೋಟಿ ರಿಂದ 2.5 ಕೋಟಿ ರೂಪಾಯಿ ವರೆಗೆ ನೀಡುವಂತೆ ಪ್ರಸ್ತಾಪಿಸಲಾಗಿದೆ. ಮತ್ತೊಂದು ಆಯ್ಕೆಯಾಗಿ, ಶೇ.50 ರಷ್ಟು ಅಭಿವೃದ್ಧಿಪಡಿಸಿದ (developed) ಭೂಮಿಯನ್ನು ರೈತರಿಗೆ ಹಿಂತಿರುಗಿಸಿ ನೀಡುವ ವ್ಯವಸ್ಥೆಯನ್ನೂ ಸರ್ಕಾರ ಸೂಚಿಸಿದೆ. ಅಂದರೆ, ರೈತರು ಹಣ ಅಥವಾ ಅಭಿವೃದ್ಧಿಪಡಿಸಿದ ಭೂಮಿ ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬಹುದಾದ ಸಾಧ್ಯತೆ ಇದೆ.
ರೈತರಿಗೆ ತಮ್ಮ ಭೂಮಿಗೆ ಸಂಬಂಧಿಸಿದ ಎಲ್ಲಾ ಸೂಕ್ತ ದಾಖಲೆಗಳನ್ನು ಸಲ್ಲಿಸಿ, ನಿರ್ದಿಷ್ಟ ಸಮಯದಲ್ಲಿ ಪರಿಹಾರವನ್ನು ಪಡೆಯಲು ಸೂಚಿಸಲಾಗಿದೆ.
ಉದ್ದೇಶಿತ ಬಿಡದಿ ಟೌನ್ ಶಿಪ್ ಯೋಜನೆಗೆ ರೈತರಿಂದ ವಿರೋಧ ವ್ಯಕ್ತವಾಗಿದೆ. ತಮ್ಮ ಕೃಷಿಭೂಮಿಯನ್ನು ಕಳೆದುಕೊಳ್ಳಬಾರದು, ಜೀವನೋಪಾಯ ಹಾನಿಯಾಗಬಾರದು ಎಂಬ ಕಾರಣಕ್ಕೆ ರೈತರು ಹಲವು ಬಾರಿ ಪ್ರತಿಭಟನೆ ನಡೆಸಿದ್ದಾರೆ. ಈ ಪರಿಸ್ಥಿತಿಯಲ್ಲಿಯೇ ನಗರಾಭಿವೃದ್ಧಿ ಇಲಾಖೆ ಅಂತಿಮ ಅಧಿಸೂಚನೆ ಹೊರಡಿಸಿರುವುದು ಗಮನಾರ್ಹವಾಗಿದೆ.