ಬೆಂಗಳೂರು: ಭಾರತದ ಪ್ರತಿಷ್ಠಿತ ಉತ್ಪಾದನಾ ಕಂಪೆನಿಗಳಲ್ಲೊಂದಾಗಿದ್ದು, ಇದೀಗ ಸಂಕಷ್ಟದಲ್ಲಿರುವ ಹಿಂದೂಸ್ತಾನ್ ಮಷೀನ್ ಟೂಲ್ಸ್ (ಎಚ್ಎಂಟಿ)ಗೆ ಕಾಯಕಲ್ಪ ನೀಡುವ ಯೋಜನೆ ಅಂತಿಮ ಹಂತದಲ್ಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನ ಕೇಂದ್ರೀಯ ಕೈಗಾರಿಕಾ ಉತ್ಪಾದನ ಸಂಸ್ಥೆ (ಇಎಂಟಿಐ) 65ನೇ ಸಂಸ್ಥಾಪನ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉತ್ಪಾದನೆ ಆಧರಿತ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಪ್ರಧಾನಿ ನರೇಂದ್ರ ಮೋದಿಯವರು ದೂರದೃಷ್ಟಿ ಹೊಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಎಚ್ಎಂಟಿ ಕಂಪನಿಗೆ ಮರುಜೀವ ನೀಡುವ ಯೋಜನೆ ಅಂತಿಮ ಅಂತದಲ್ಲಿ ಇದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಉತ್ಪಾದನೆ ಆಧಾರಿತ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಸುವ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರ ಅಭೂತಪೂರ್ವ ಒತ್ತು ನೀಡಿದೆ ಎಂದರು.
ಮೋದಿ ಸರ್ಕಾರ ಉತ್ಪಾದನೆ ಮತ್ತು ಸಂಶೋಧನಾ ಪರಿಸರ ವ್ಯವಸ್ಥೆಗಳನ್ನು ಬಲಪಡಿಸುವತ್ತ ಸರ್ಕಾರ ಗಮನಹರಿಸಿದೆ. ಈ ಪ್ರಯತ್ನಗಳು ಕೈಗಾರಿಕಾ ಬೆಳವಣಿಗೆಯನ್ನು ವೇಗಗೊಳಿಸಿವೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ದೊಡ್ಡ ಪ್ರಮಾಣದ ಉದ್ಯೋಗಾವಕಾಶಗಳನ್ನು ಸೃಷ್ಟಿಸಿವೆ ಎಂದು ಅವರು ಹೇಳಿದರು.
ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪದವೀಧರರಿಗೆ ಉದ್ಯೋಗಾವಕಾಶಗಳ ಬಗ್ಗೆ ಕಳವಳವಿರುವ ಸಮಯದಲ್ಲಿ, ತಾಂತ್ರಿಕವಾಗಿ ಅರ್ಹ ಯುವಕರಿಗೆ ಉತ್ತಮ ಗುಣಮಟ್ಟದ, ಕೌಶಲ್ಯ ಆಧಾರಿತ ಉದ್ಯೋಗವನ್ನು ಉತ್ಪಾದಿಸುವ ದೃಢವಾದ ಪರಿಸರ ವ್ಯವಸ್ಥೆಯನ್ನು ರಚಿಸಲು ಸರ್ಕಾರ ಕೆಲಸ ಮಾಡಿದೆ ಎಂದು ಮಾಹಿತಿ ನೀಡಿದರು.
ಕೇಂದ್ರ ಉತ್ಪಾದನಾ ತಂತ್ರಜ್ಞಾನ ಸಂಸ್ಥೆಯನ್ನು ಭಾರತದ ಅತ್ಯಂತ ವಿಶಿಷ್ಟ ಕೈಗಾರಿಕಾ ಸಂಶೋಧನಾ ಸಂಸ್ಥೆಗಳಲ್ಲಿ ಒಂದೆಂದು ಬಣ್ಣಿಸಿದ ಕುಮಾರಸ್ವಾಮಿ, ಏರೋಸ್ಪೇಸ್ ಮತ್ತು ರಕ್ಷಣಾ ಸೇರಿದಂತೆ ಹಲವಾರು ಕ್ಷೇತ್ರಗಳಿಗೆ ಸುಧಾರಿತ ತಂತ್ರಜ್ಞಾನಗಳು ಮತ್ತು ಉಪಕರಣಗಳನ್ನು ಅಭಿವೃದ್ಧಿಪಡಿಸುವ ಮೂಲಕ ಸಂಸ್ಥೆ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.
ಬೆಂಗಳೂರು ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಕಾರ್ಯಾಚರಣೆ ಮಾಡುತ್ತಿರುವ ಎಚ್ಎಂಟಿಯ ಎಲ್ಲ ಘಟಕಗಳನ್ನೂ ಪುನರುಜ್ಜೀವನಗೊಳಿಸುವ ಉದ್ದೇಶವನ್ನು ಕೇಂದ್ರ ಸರಕಾರ ಹೊಂದಿದೆ. ಕಳೆದ 2 ವರ್ಷಗಳಿಂದ ಎಚ್ಎಂಟಿ ಕಂಪನಿಗೆ ಕಾಯಕಲ್ಪ ನೀಡುವ ಉದ್ದೇಶದಿಂದ ಸರ್ಕಾರ ಕೆಲಸ ಮಾಡುತ್ತಿದೆ.
ನೀತಿ ಆಯೋಗದ ಸದಸ್ಯರಾದ ಡಾ. ವಿ. ಕೆ. ಸಾರಸ್ವತ ಅವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿ ವರದಿ ಪಡೆದುಕೊಳ್ಳಲಾಗಿದೆ. ಸಮಿತಿಯು ಮೌಲಿಕವಾದ ಅನೇಕ ಶಿಫಾರಸುಗಳನ್ನು ಮಾಡಿದೆ. ಆ ಆಧಾರದ ಮೇಲೆ ಕಂಪೆನಿಯನ್ನು ಮೇಲೆತ್ತುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.