ಬೆಂಗಳೂರು: ರಾಜ್ಯ ಸರ್ಕಾರದ ಎರಡು ಪ್ರಮುಖ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಫಲಾನುಭವಿಗಳ ಪಟ್ಟಿಯಲ್ಲಿ ಮೃತರು ಹಾಗೂ ಅನರ್ಹರು ಪತ್ತೆಯಾಗಿರುವುದರಿಂದ ಕೋಟ್ಯಂತರ ರೂಪಾಯಿ ದುರುಪಯೋಗವಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ಗೃಹಜ್ಯೋತಿ ಯೋಜನೆಯಡಿ ಎಲ್ಲಾ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು (DCs), ಪೊಲೀಸ್ ಅಧೀಕ್ಷಕರು (SPs), ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿಭಾಗೀಯ ಅರಣ್ಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹೊಸದಾಗಿ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಯಡಿ ಸುಮಾರು 100 ಕೋಟಿ ರೂಪಾಯಿ ಮೃತ ಫಲಾನುಭವಿಗಳ ಖಾತೆಗಳಿಗೆ ಹೋಗಿದೆ. ಕೆಲವರು ಬೇರೆ ವ್ಯಕ್ತಿಗಳ ಮೊಬೈಲ್ ಸಂಖ್ಯೆಯನ್ನು ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಸಿಕ್ಕ ನಂತರ ನಾವು ತನಿಖೆ ನಡೆಸಿದ್ದೇವೆ. ಆದ್ದರಿಂದ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಯಾರ ಯೋಜನೆಯನ್ನೂ ನಾವು ನಿಲ್ಲಿಸುವುದಿಲ್ಲ. ಆದರೆ ಹೊಸದಾಗಿ ಅರ್ಜಿ ಸಲ್ಲಿಸಬೇಕು.
ನಾವು ಯಾರನ್ನೂ ಪಟ್ಟಿಯಿಂದ ತೆಗೆದುಹಾಕಲು ಬಯಸುವುದಿಲ್ಲ. ಯಾರನ್ನೂ ತೆಗೆದುಹಾಕುವುದಿಲ್ಲ. ಆದರೆ ಫಲಾನುಭವಿಗಳು ಸರಿಯಾದ ಮಾಹಿತಿಯನ್ನು ನೀಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಹಣ ಕರ್ನಾಟಕದ ಬ್ಯಾಂಕ್ ಖಾತೆಗಳಿಗೆ ಹೋಗುತ್ತಿದೆಯೇ ಅಥವಾ ಬೇರೆ ರಾಜ್ಯಗಳ ಬ್ಯಾಂಕ್ಗಳಿಗೆ ಹೋಗುತ್ತಿದೆಯೇ, ಸಾಲ ಮರುಪಾವತಿಗೆ ಬಳಸಲಾಗುತ್ತಿದೆಯೇ, ಚಿಟ್ ಫಂಡ್ ಅಥವಾ ಇತರ ಉದ್ದೇಶಗಳಿಗೆ ಬಳಸಲಾಗುತ್ತಿದೆಯೇ ಎಂಬುದನ್ನು ತಿಳಿದುಕೊಳ್ಳಲು ನಾವು ಬಯಸುತ್ತೇವೆ. ಗೃಹಲಕ್ಷ್ಮಿ ಯೋಜನೆಯ ಹಣ ಜನರ ಜೀವನೋಪಾಯಕ್ಕೆ ನೆರವಾಗಲು ಉದ್ದೇಶಿತವಾಗಿದೆ ಎಂದು ಅವರು ತಿಳಿಸಿದರು.
1.64 ಕೋಟಿ ಫಲಾನುಭವಿಗಳನ್ನು ಹೊಂದಿರುವ ಗೃಹಜ್ಯೋತಿ ಯೋಜನೆಗೂ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.
ಕೆಲವು ಫಲಾನುಭವಿಗಳು ಒಂದೇ ಹೆಸರಿನಲ್ಲಿ ಐದು ವಿದ್ಯುತ್ ಮೀಟರ್ಗಳನ್ನು ನೋಂದಾಯಿಸಿಕೊಂಡಿದ್ದಾರೆ. ಅವರು ಮನೆ ಮಾಲೀಕರೇ ಅಥವಾ ಬಾಡಿಗೆದಾರರೇ, ಕರ್ನಾಟಕದವರೇ ಅಥವಾ ಬೇರೆ ರಾಜ್ಯದವರೇ ಎಂಬ ಮಾಹಿತಿ ಸರ್ಕಾರಕ್ಕೆ ಬೇಕಾಗಿದೆ ಎಂದು ಹೇಳಿದರು.
ನೈಜ ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡುವ ಯೋಜನೆ ಸರ್ಕಾರಕ್ಕಿದೆ ಎಂದು ತಿಳಿಸಿದ ಅವರು, ಕೆಲವರು ಅಂಗಡಿಗಳಂತಹ ವಾಣಿಜ್ಯ ಉದ್ದೇಶಗಳಿಗೆ ಗೃಹಜ್ಯೋತಿ ಸೌಲಭ್ಯವನ್ನು ಬಳಸುತ್ತಿರುವುದು ಗಮನಕ್ಕೆ ಬಂದಿದೆ ಎಂದರು.
ವಿದ್ಯುತ್ ವೆಚ್ಚ ಹೆಚ್ಚುತ್ತಿರುವ ಕಾರಣ ವಾಣಿಜ್ಯ ಉದ್ದೇಶಗಳಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.
ಕೆಲಸದಲ್ಲಿ ವಿಳಂಬ, ಲಂಚ, ಭ್ರಷ್ಟಾಚಾರ ಕಂಡರೆ ನಿರ್ದಾಕ್ಷಿಣ್ಯ ಕ್ರಮ
ತಮ್ಮ ಸರ್ಕಾರದ ಗುರಿ "ಭ್ರಷ್ಟಾಚಾರ ಮುಕ್ತ ಕರ್ನಾಟಕ" ಎಂದು ಪುನರುಚ್ಚರಿಸಿದ ಮುಖ್ಯಮಂತ್ರಿ, ಲಂಚ ಕೇಳಿದರೆ ಸಾರ್ವಜನಿಕರು ಸಂಪರ್ಕಿಸಲು ಸಾಧ್ಯವಾಗುವಂತೆ ಸರ್ಕಾರಿ ಕಚೇರಿಗಳಲ್ಲಿ ದೂರವಾಣಿ ಸಂಖ್ಯೆಯಿರುವ ಫಲಕಗಳನ್ನು ಅಳವಡಿಸಲಾಗುವುದು ಎಂದರು.
ಭ್ರಷ್ಟಾಚಾರ ಮುಕ್ತ ಕರ್ನಾಟಕ ನಿರ್ಮಾಣ ಮಾಡಬೇಕು. ಯಾರೂ 10 ರೂಪಾಯಿಯನ್ನೂ ಕೊಡಬಾರದು, ಪಡೆಯಬಾರದು. ತಾಲೂಕು ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಕಚೇರಿಗಳಲ್ಲಿ ದೂರವಾಣಿ ಸಂಖ್ಯೆಯಿರುವ ಫಲಕವನ್ನು ಕಡ್ಡಾಯವಾಗಿ ಅಳವಡಿಸಲಾಗುವುದು. ಲಂಚ ಕೇಳಿದರೆ ಸಾರ್ವಜನಿಕರು ಆ ಸಂಖ್ಯೆಗೆ ಕರೆ ಮಾಡಬಹುದು. ಸುಲಿಗೆ ನಡೆಸುವವರು ಅಥವಾ ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುವವರನ್ನು ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ತಮ್ಮಿಂದಾಗಲಿ, ತಮ್ಮ ಕಚೇರಿಯಿಂದಾಗಲಿ, ಸಚಿವರಿಂದಾಗಲಿ ಅಥವಾ ಶಾಸಕರಿಂದಾಗಲಿ ಬರುವ ಯಾವುದೇ ಕಾನೂನುಬಾಹಿರ ಸೂಚನೆಗಳನ್ನು ಅಧಿಕಾರಿಗಳು ಪಾಲಿಸಬಾರದು ಎಂದು ಸೂಚಿಸಿರುವುದಾಗಿ ಅವರು ತಿಳಿಸಿದರು.
ಯಾವುದೇ ಸಚಿವ ಅಥವಾ ಶಾಸಕರಿಂದ ನಿಯಮಬಾಹಿರ ಒತ್ತಡ ಬಂದರೆ ಅದನ್ನು ನೇರವಾಗಿ ನನ್ನ ಗಮನಕ್ಕೆ ತರಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಎಸ್ಪಿಗಳು ನನ್ನೊಂದಿಗೆ ನೇರ ಸಂಪರ್ಕದಲ್ಲಿರಬೇಕು. ಭ್ರಷ್ಟಾಚಾರ ಮುಕ್ತ ಆಡಳಿತ ನೀಡಬೇಕು. ಒಂದೇ ಬಾರಿಗೆ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆ ಎಂದು ಹೇಳುವುದಿಲ್ಲ, ಆದರೆ ನನ್ನಿಂದಾದಷ್ಟು ಪ್ರಯತ್ನ ಮಾಡುತ್ತೇನೆ ಎಂದು ಅವರು ಹೇಳಿದರು.
ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿ ಹಾಜರು
ಎಲ್ಲ ಅಧಿಕಾರಿಗಳು ಬೆಳಗ್ಗೆ 10 ಗಂಟೆಗೆ ಕಚೇರಿಗೆ ಹಾಜರಾಗಬೇಕು. ಬಯೋಮೆಟ್ರಿಕ್ ಹಾಜರಾತಿಗೆ ಬೆರಳಚ್ಚು ನೋಂದಾಯಿಸಿದ ತಕ್ಷಣವೇ ಮುಖ್ಯ ಕಾರ್ಯದರ್ಶಿ ಅಥವಾ ಆಡಳಿತದ ಉಸ್ತುವಾರಿ ಕಾರ್ಯದರ್ಶಿಗೆ ಸಂದೇಶ ಹೋಗುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಗ್ರಾಮ ಲೆಕ್ಕಾಧಿಕಾರಿಗಳಿಂದ ಹಿಡಿದು ಕಂದಾಯ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ಎಸ್ಪಿಗಳು ಮತ್ತು ಜಿಲ್ಲಾಧಿಕಾರಿಗಳವರೆಗೆ ಎಲ್ಲರೂ ತಮ್ಮ ಕಾರ್ಯವ್ಯಾಪ್ತಿಯ ಕೇಂದ್ರದಲ್ಲೇ ಹಾಜರಿರಬೇಕು. ಅವರ ವಿಳಾಸ ಹಾಗೂ ದೂರವಾಣಿ ಸಂಖ್ಯೆಗಳು ಸಾರ್ವಜನಿಕರ ಅನುಕೂಲಕ್ಕಾಗಿ ವೆಬ್ಸೈಟ್ನಲ್ಲಿ ಲಭ್ಯವಾಗಬೇಕು ಎಂದು ಸೂಚಿಸಿದರು.
ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಕುಡಿಯುವ ನೀರು, ಜಾನುವಾರುಗಳ ಮೇವು, ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಲಭ್ಯತೆ ಕುರಿತು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಮಳೆ ಆರಂಭವಾಗಿದೆ. ರೈತರಿಗೆ ಬೀಜ ಮತ್ತು ರಸಗೊಬ್ಬರ ಸಕಾಲದಲ್ಲಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ರಸಗೊಬ್ಬರದ ವಿಚಾರದಲ್ಲಿ ಮಧ್ಯಪ್ರಾಚ್ಯದ ಯುದ್ಧದಿಂದ ಹಲವು ಸಮಸ್ಯೆಗಳು ಎದುರಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಆದ್ದರಿಂದ ಈ ವಿಷಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಅವರು ಹೇಳಿದರು.
ಪ್ರತಿ ತಾಲೂಕು ಮಟ್ಟದಲ್ಲಿ ಸಚಿವರು 'ಜನ ಸಂಪರ್ಕ ಸಭೆ' ನಡೆಸುವಂತೆ ಹಾಗೂ ಹೋಬಳಿ ಮಟ್ಟದಲ್ಲಿ ಶಾಸಕರು ಇಂತಹ ಸಭೆಗಳನ್ನು ನಡೆಸುವಂತೆ ಸೂಚಿಸಲಾಗಿದೆ ಎಂದರು.
ಜನರು ತಮ್ಮ ಅಹವಾಲುಗಳಿಗಾಗಿ ಬೆಂಗಳೂರು ಅಥವಾ ಜಿಲ್ಲಾ ಕೇಂದ್ರಗಳಿಗೆ ಬರುವ ಅಗತ್ಯವಿಲ್ಲದಂತೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ಅಧಿಕಾರಿಗಳು ಪ್ರತಿಯೊಂದು ಗ್ರಾಮ ಪಂಚಾಯಿತಿಗೂ ಭೇಟಿ ನೀಡಬೇಕು ಎಂದು ಸೂಚಿಸಿದರು.
ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಲಿರುವುದರಿಂದ, ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಪ್ರತಿ ತಾಲೂಕಿಗೆ ಭೇಟಿ ನೀಡಿ, ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಮಾರ್ಗದರ್ಶನ ನೀಡಬೇಕು ಹಾಗೂ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ರಕ್ಷಿತವಾಗುವಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಹೇಳಿದರು.
ಮೊದಲ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳು ಮತ್ತು ಘೋಷಣೆಗಳ ಕುರಿತು ಅಧಿಕಾರಿಗಳಿಗೆ ಅಗತ್ಯ ಮಾಹಿತಿ ಹಾಗೂ ಸೂಚನೆಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.
ಭಾರತ್ ಜೋಡೋ ಕಾರ್ಯಕ್ರಮ
ರಾಜ್ಯ ಸಾರಿಗೆ ಬಸ್ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಯುವ ಸಬಲೀಕರಣಕ್ಕಾಗಿ 10 ಸಾವಿರ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಮತ್ತು ಉದ್ಯೋಗ ಜಾಗೃತಿ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದರು.
ಇದಲ್ಲದೆ, ಮಾದಕ ವಸ್ತುಗಳ ಜಾಲ ಮತ್ತು ಸೈಬರ್ ಅಪರಾಧ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲು ಹಾಗೂ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಆ್ಯಂಟಿ ರೌಡಿ ಸ್ಕ್ವಾಡ್ ರಚಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.