ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಿಯಲ್ ಎಸ್ಟೇಟ್ ದೊರೆ. 1999ರಲ್ಲಿ ಕೇವಲ ಮೂರು ಎಕರೆ ಹೊಂದಿದ್ದ ರಾಜ್ಯದ ಮುಖ್ಯಮಂತ್ರಿ ಆಸ್ತಿ 2018ರ ವೇಳೆಗೆ 1,400 ಕೋಟಿ ಹೇಗಾಯಿತು? ಇಷ್ಟು ವೇಗವಾಗಿ ಶ್ರೀಮಂತರಾಗುವುದು ಹೇಗೆ ಎಂದು ರೈತರಿಗೂ ಹೇಳಲಿ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನೇರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರವೇ ಜನರ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದೆ. ನೇರವಾಗಿ ಮುಖ್ಯಮಂತ್ರಿಗಳೇ ರಿಯಲ್ ಎಸ್ಟೇಟ್ ಮಾಫಿಯಾ ದೊರೆಗಳ ಜೊತೆ ಕೈ ಜೋಡಿಸಿ ಈ ದಂಧೆ ನಡೆಸುತ್ತಿದ್ದಾರೆ.
ಬಹುಪಾಲು ರೈತರು ಭೂಮಿ ಕೊಡಲು ತಯಾರಿಲ್ಲ. ಪೊಲೀಸರು ಮತ್ತು ರೌಡಿಗಳನ್ನು ಬಿಟ್ಟು ರೈತರನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರವೇ ರಿಯಲ್ ಎಸ್ಟೇಟ್ ಏಜೆಂಟ್ ಆಗಿ ಕೆಲಸ ಮಾಡುತ್ತಿದೆ’ ಎಂದು ಗಂಭೀರ ಆರೋಪ ಮಾಡಿದರು.
‘ಬಿಡದಿ ಟೌನ್ಶಿಪ್ಗೆ ಪ್ರಧಾನಿ ನರೇಂದ್ರ ಮೋದಿ ‘ಗ್ರೀನ್ ಸಿಗ್ನಲ್’ ಕೊಟ್ಟಿದ್ದಾರೋ ಇಲ್ಲವೋ ಗೊತ್ತಿಲ್ಲ. ಮೋದಿ ಅವರು ಗುಜರಾತ್ನಲ್ಲಿ ಬರಡು ಭೂಮಿಯಲ್ಲಿ ಟೌನ್ಶಿಪ್ ಮಾಡಿದ್ದಾರೆ. ಡಿಕೆಶಿ ಅವರು ಮಾಡುತ್ತಿರುವ ಜಾಗದಲ್ಲಿ ಲಕ್ಷಾಂತರ ತೆಂಗು, ಅಡಿಕೆ ಬೆಳೆ ಬೆಳೆಯುತ್ತಾರೆ. ಉಪಯೋಗಕ್ಕೆ ಬಾರದ ಜಾಗದಲ್ಲಿ ಟೌನ್ಶಿಪ್ ಮಾಡಿದರೆ ನನ್ನ ಅಭ್ಯಂತರವಿಲ್ಲ’ ಎಂದರು.
‘ಹಿಂದೆ ‘ಬಿ.ಎಂ.ಐ.ಸಿ.ಪಿ’ ಎಂಬ ಪ್ರಾಧಿಕಾರ ರಚಿಸಿ, ಅದಕ್ಕೆ ಡಿಕೆಶಿ ಅಧ್ಯಕ್ಷರಾಗಿದ್ದರು. ಬೆಂಗಳೂರು- ಮೈಸೂರು ರಸ್ತೆಯಲ್ಲಿ 1.75 ಲಕ್ಷ ಎಕರೆ ಭೂಮಿಯನ್ನು ರಸ್ತೆಗೆ ಮತ್ತು ಟೌನ್ಶಿಪ್ ಮಾಡಲು ಸ್ವಾಧೀನಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದರು. ಕಳೆದ 30 ವರ್ಷಗಳಲ್ಲಿ ಏನಾಯ್ತು ಆ ಪ್ರಾಜೆಕ್ಟ್’ ಎಂದು ಪ್ರಶ್ನಿಸಿದರು.
ಮೋದಿ ಅವರ ಆಡಳಿತದ ಗುಜರಾತ್ನಲ್ಲಿ ಟೌನ್ಶಿಪ್ಗಳು ಬಂದಿದೆ ಎಂಬುದು ನಿಜ. ಆದರೆ, ಅಲ್ಲಿ ರೈತರ ಕೃಷಿ ಭೂಮಿಯನ್ನು ಕಿತ್ತುಕೊಂಡು ಇಂತಹ ಯೋಜನೆಗಳನ್ನು ಮಾಡಿಲ್ಲ. ಒಣಭೂಮಿ ಮತ್ತು ನೀರಾವರಿಗೆ ಯೋಗ್ಯವಲ್ಲದ ಪ್ರದೇಶಗಳಲ್ಲಿ ಇಂತಹ ಬೃಹತ್ ಯೋಜನೆಗಳನ್ನು ಅನುಷ್ಠಾನ ಮಾಡಿದ್ದಾರೆ. ಬೇಕಿದ್ದರೆ ಹೋಗಿ ನೋಡಿಕೊಂಡು ಬರಲಿ ಎಂದು ಅವರು ಹೇಳಿದರು.