ಬೆಂಗಳೂರು: ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ನಡೆದಿರುವ ಷಡ್ಯಂತ್ರದ ಸಮಗ್ರ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಿಎಂ ಡಿ.ಕೆ.ಶಿವಕುಮಾರ್ಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಧರ್ಮಸ್ಥಳದ ವಿಚಾರದಲ್ಲಿ ಇತ್ತೀಚೆಗೆ ಹೊರಬರುತ್ತಿರುವ ಬೆಳವಣಿಗೆಗಳು ನನ್ನನ್ನಷ್ಟೇ ಅಲ್ಲದೆ, ಕೋಟ್ಯಂತರ ಭಕ್ತರ ಮನಸ್ಸಿನಲ್ಲೂ ಆತಂಕ ಮತ್ತು ಅನುಮಾನಗಳನ್ನು ಹುಟ್ಟುಹಾಕಿವೆ.
ಈ ಕಾರಣದಿಂದಲೇ ಈ ಪತ್ರವನ್ನು ಬರೆಯುತ್ತಿದ್ದೇನೆ. ಶ್ರೀ ಕ್ಷೇತ್ರ ಧರ್ಮಸ್ಥಳ ನಮ್ಮ ನಾಡಿನ ಒಂದು ಸಾಮಾನ್ಯ ಧಾರ್ಮಿಕ ಕ್ಷೇತ್ರವಲ್ಲ. ಕೋಟ್ಯಂತರ ಜನರ ನಂಬಿಕೆ,ಭಕ್ತಿ ಮತ್ತು ಧಾರ್ಮಿಕ ಭಾವನೆಗಳ ಕೇಂದ್ರವಾಗಿದೆ.
ಸಮಾಜ ಸೇವೆ, ಶಿಕ್ಷಣ, ಆರೋಗ್ಯ, ಅನ್ನದಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಧರ್ಮಸ್ಥಳ ಸಲ್ಲಿಸಿರುವ ಸೇವೆ ದೇಶಕ್ಕೆ ಮಾದರಿಯಾಗಿದೆ. ಇಂತಹ ಸಂಸ್ಥೆ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಆರೋಪಗಳು, ಅಪಪ್ರಚಾರಗಳು ಮತ್ತು ಅನುಮಾನಗಳ ವಾತಾವರಣ ಸೃಷ್ಟಿಮಾಡುತ್ತಿರುವುದನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಆದಾಗ್ಯೂ ಇದೆಲ್ಲವೂ ತಮ್ಮ ಗಮನಕ್ಕೂ ಈಗಾಗಲೇ ತಿಳಿದಿದೆ ಎಂದು ನಾನು ಭಾವಿಸಿದ್ದೇನೆ ಎಂದು ತಿಳಿಸಿದ್ದಾರೆ.
ಈಗ ಉಚ್ಚ ನ್ಯಾಯಾಲಯದ ಮುಂದೆ ಸಲ್ಲಿಕೆಯಾಗಿರುವ ಅರ್ಜಿಯು ಈ ಪ್ರಕರಣಕ್ಕೆ ಮತ್ತೊಂದು ಗಂಭೀರ ಆಯಾಮವನ್ನು ನೀಡಿದ್ದು, ಮಾಧ್ಯಮ ವರದಿಗಳ ಪ್ರಕಾರ ಆ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠಲ್ ಗೌಡ, ಜಯಂತ್ ಹಾಗೂ ಯೂಟ್ಯೂಬರ್ಗಳಾದ ಸಮೀರ್ ಎಂ.ಡಿ., ಅಜಯ್, ದಿನೇಶ್ ಸೇರಿದಂತೆ ಹಲವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.
ಇದರ ಜೊತೆಗೆ, ಧರ್ಮಸ್ಥಳ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಸುಮಾರು 200 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸಂಘಟಿತ ಮತ್ತು ವ್ಯವಸ್ಥಿತ ಷಡ್ಯಂತ್ರ ರೂಪಿಸಲಾಗಿತ್ತು ಎಂಬ ಅತ್ಯಂತ ಗಂಭೀರ ಆರೋಪವೂ ನ್ಯಾಯಾಲಯದ ಮುಂದೆ ಬಂದಿದೆ ಎಂದು ಸಿ.ಟಿ.ರವಿ ತಿಳಿಸಿದ್ದಾರೆ.
ಈ ಆರೋಪಗಳು ಸತ್ಯವೋ ಸುಳ್ಳೋ ಎಂಬುದನ್ನು ತನಿಖೆಯೇ ನಿರ್ಧರಿಸಬೇಕು. ಆದರೆ, ಒಂದು ಪ್ರಶ್ನೆಗೆ ಉತ್ತರ ಸಿಗಲೇಬೇಕು. ಧರ್ಮಸ್ಥಳದಂತಹ ಪ್ರತಿಷ್ಠಿತ ಸಂಸ್ಥೆಯ ವಿರುದ್ಧ ಇಷ್ಟೊಂದು ದೊಡ್ಡ ಮಟ್ಟದ ಅಭಿಯಾನ ನಡೆಸಲು ಹಣ ಎಲ್ಲಿಂದ ಬಂತು? ಇದರ ಹಿಂದೆ ಯಾರು ಇದ್ದರು? ಇದು ಕೆಲವರ ವೈಯಕ್ತಿಕ ಕೃತ್ಯವೋ ಅಥವಾ ಇದರ ಹಿಂದೆ ದೊಡ್ಡ ಜಾಲವೇ ಕಾರ್ಯನಿರ್ವಹಿಸುತ್ತಿದೆಯೋ? ಎಂಬುವ ಸತ್ಯ ಹೊರಬರಬೇಕಾಗಿದೆ ಎಂದಿದ್ದಾರೆ.
ನಾನು ಈ ಹಿಂದೆಯೇ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿರುವ ಅನುಮಾನ ವ್ಯಕ್ತಪಡಿಸಿದ್ದೆ. ಆಗ ಹಲವರು ಟೀಕೆ ಮಾಡಿದ್ದರು. ಆದರೆ, ಈಗ ಹೊರಬರುತ್ತಿರುವ ಮಾಹಿತಿಗಳನ್ನು ನೋಡಿದಾಗ, ಆ ಅನುಮಾನಗಳನ್ನು ಗಂಭೀರವಾಗಿ ಪರಿಗಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಧರ್ಮಸ್ಥಳದ ವಿರುದ್ಧದ ಆರೋಪಗಳ ತನಿಖೆ ನಡೆದಂತೆಯೇ, ಧರ್ಮಸ್ಥಳದ ವಿರುದ್ಧವೇ ಯಾವುದೇ ಸಂಚು ನಡೆದಿದೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಯಬೇಕು ಎಂದು ಮನವಿ ಮಾಡಿದ್ದಾರೆ.