ಬೆಂಗಳೂರು: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ವಿರುದ್ಧ ಭೂ ಒತ್ತುವರಿ ಆರೋಪದ ಸುಳ್ಳು ಮತ್ತು ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಿಗೆ ಬೆಂಗಳೂರಿನ ನಗರ ಸಿವಿಲ್ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ.
ನಗರದ XVI ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಜೂನ್ 11ರಂದು ಈ ಆದೇಶ ಹೊರಡಿಸಿದ್ದು, ಪವನ್ ಕಲ್ಯಾಣ್ ವಿರುದ್ಧದ ಮಾನಹಾನಿಕರ ವಿಷಯಗಳನ್ನು ಪ್ರಕಟಿಸುವುದು, ಮರುಪ್ರಕಟಿಸುವುದು, ಪ್ರಸಾರ ಮಾಡುವುದು, ಅಪ್ಲೋಡ್ ಮಾಡುವುದು ಅಥವಾ ಪ್ರದರ್ಶಿಸುವುದನ್ನು ವಿವಿಧ ಮಾಧ್ಯಮ ಸಂಸ್ಥೆಗಳು ಹಾಗೂ ಸಾಮಾಜಿಕ ಜಾಲತಾಣಗಳಿಗೆ ತಾತ್ಕಾಲಿಕವಾಗಿ ನಿರ್ಬಂಧಿಸಿದೆ.
ಅಲ್ಲದೆ, ಗೂಗಲ್, ಮೆಟಾ ಮತ್ತು ಎಕ್ಸ್ (X) ಸಂಸ್ಥೆಗಳು ಅಂತಹ ವಿಡಿಯೋ ಮತ್ತು ಲಿಂಕ್ಗಳನ್ನು ತಕ್ಷಣವೇ ತೆಗೆದುಹಾಕಲು ಕೋರ್ಟ್ ಆದೇಶಿಸಿದ್ದು, ಮುಂದಿನ ವಿಚಾರಣೆಯ ದಿನಾಂಕವಾದ ಜುಲೈ 24ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ.
ಪವನ್ ಕಲ್ಯಾಣ್ ಸಲ್ಲಿಸಿದ್ದ ಮೂಲ ದಾವೆಯ ವಿಚಾರಣೆ ವೇಳೆ ನ್ಯಾಯಾಲಯ ಈ ಮಧ್ಯಂತರ ಆದೇಶ ನೀಡಿದೆ. ತಮ್ಮ ವಿರುದ್ಧ ವಿವಿಧ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ವಿಷಯಗಳನ್ನು ಪ್ರಕಟಿಸದಂತೆ ತಡೆಯಾಜ್ಞೆ ನೀಡಬೇಕು ಹಾಗೂ ಈಗಾಗಲೇ ಪ್ರಕಟವಾಗಿರುವ ವಿಷಯಗಳನ್ನು ತೆಗೆದುಹಾಕಬೇಕು ಎಂದು ಅವರು ಅರ್ಜಿಯಲ್ಲಿ ಕೋರಿದ್ದರು.
ಈ ಮೊದಲು ಜೂನ್ 10ರಂದು ನ್ಯಾಯಾಲಯ ಮಧ್ಯಂತರ ಆದೇಶ ನೀಡಿದ್ದು, ನಾಗರಿಕ ಪ್ರಕ್ರಿಯಾ ಸಂಹಿತೆ (CPC) 1908ರ ಆದೇಶ XXXIX, ನಿಯಮ 3(ಎ)ರ ಷರತ್ತುಗಳನ್ನು ಪಾಲಿಸುವಂತೆ ಸೂಚಿಸಿತ್ತು. ಬಳಿಕ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಜೂನ್ 11ರಂದು ತನ್ನ ಹಿಂದಿನ ಆದೇಶವನ್ನು ಪರಿಷ್ಕರಿಸಿ ವಿಸ್ತೃತ ತಡೆಯಾಜ್ಞೆ ಹೊರಡಿಸಿದೆ.
ಪವನ್ ಕಲ್ಯಾಣ್ ವಿರುದ್ಧ ಸಾರ್ವಜನಿಕ ಜಮೀನು ಅಥವಾ ಜಲಮೂಲ ಅತಿಕ್ರಮಣದ ಆರೋಪಗಳಿಗೆ ಸಂಬಂಧಿಸಿದ ಯಾವುದೇ ಹೇಳಿಕೆ, ಲೇಖನ, ವಿಡಿಯೊ ಅಥವಾ ಇತರ ವಿಷಯಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯ ಸ್ಪಷ್ಟ ಸೂಚನೆ ನೀಡಿದೆ.