ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ತ್ಯಾಜ್ಯ ನೀರು ಸಂಸ್ಕರಣಾ ಘಟಕದ (STP) ಟ್ಯಾಂಕ್ ಸ್ವಚ್ಛಗೊಳಿಸುವಾಗ ಇಬ್ಬರು ಕಾರ್ಮಿಕರು ಆಕಸ್ಮಿಕವಾಗಿ ಬಿದ್ದು, ಕೊಚ್ಚಿ ಹೋಗಿರುವ ಘಟನೆ ಬೆಂಗಳೂರಿನ ವರ್ತೂರು ಸಮೀಪದ ಬೆಳಗೆರೆಯಲ್ಲಿ ನಡೆದಿದೆ.
ನಾಪತ್ತೆಯಾಗಿರುವ ಕಾರ್ಮಿಕರನ್ನು ಬಿಹಾರ ಮೂಲದ ಅಕಿಲನ್ (30) ಹಾಗೂ ತಮಿಳುನಾಡು ಮೂಲದ ಅಖಿಲೇಶ್ (30) ಎಂದು ಗುರುತಿಸಲಾಗಿದೆ.
ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗೆರೆಯಲ್ಲಿರುವ ಎಸ್ಟಿಪಿ ಘಟಕದಲ್ಲಿ ಸಂಜೆ ಸುಮಾರು 6.10ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ.
ಮೂವರು ಕಾರ್ಮಿಕರು ಟ್ಯಾಂಕ್ ಸಮೀಪ ನಿರ್ವಹಣಾ ಕಾರ್ಯದಲ್ಲಿ ತೊಡಗಿದ್ದ ವೇಳೆ ಆಕಸ್ಮಿಕವಾಗಿ ಸಮತೋಲನ ಕಳೆದುಕೊಂಡು ಟ್ಯಾಂಕ್ಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಟ್ಯಾಂಕ್ಗೆ ಬಿದ್ದವರಲ್ಲಿ ತಮಿಳುನಾಡು ಮೂಲದ ಕಾರ್ತಿಕ್ (25) ಅವರನ್ನು ಸ್ಥಳದಲ್ಲಿದ್ದ ಸಹೋದ್ಯೋಗಿಗಳು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಅಕಿಲನ್ ಮತ್ತು ಅಖಿಲೇಶ್ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ.
ಅವರನ್ನು ಪತ್ತೆಹಚ್ಚಲು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ತಕ್ಷಣವೇ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.
ಆದರೆ, ಟ್ಯಾಂಕ್ನಲ್ಲಿ ನೀರಿನ ಪ್ರಮಾಣ ಹೆಚ್ಚಿರುವುದು ಹಾಗೂ ದೃಶ್ಯತೆ ಕಡಿಮೆಯಿರುವ ಕಾರಣ ಗುರುವಾರ ರಾತ್ರಿ ಕಾರ್ಯಾಚರಣೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದ್ದು, ನಾಪತ್ತೆಯಾದ ಇಬ್ಬರಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.
ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ನಾರಾಯಣ ಎಂ. ಅವರು ರಾತ್ರಿ ವೇಳೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ ನಡೆಸಿದರು. ಘಟನೆಯ ಕುರಿತು ವರ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.