ಬೆಂಗಳೂರು: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಪರಿಹರಿಸಲು ನೂತನ “ಪ್ರಜಾಸೇವೆ ಇಲಾಖೆ” ಸ್ಥಾಪಿಸಲಾಗುತ್ತಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಇದರ ಜವಾಬ್ದಾರಿಯನ್ನು ಪ್ರತ್ಯೇಕ ಸಚಿವರಿಗೆ ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಜನರ ಕಷ್ಟ ಭಾವನೆಗಳನ್ನು ಅರಿತು, ಕಾನೂನು ಚೌಕಟ್ಟಿನಲ್ಲಿ ಸ್ಪಂದಿಸುವುದು ಸರ್ಕಾರದ ಗುರಿಯಾಗಿದೆ. ಹೀಗಾಗಿ ಈ ಇಲಾಖೆಗೆ ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಲಾಗುವುದು. ಅವರು ಎಲ್ಲಾ ಸಮಸ್ಯೆಗಳನ್ನು ಪರಿಶೀಲನೆ ಮಾಡಿ ಮಾಹಿತಿ ನೀಡುವ ಕೆಲಸ ಮಾಡಲಿದ್ದಾರೆ. ಈ ಮೂಲಕ ಜನರಿಗೆ ನ್ಯಾಯ ಒದಗಿಸಲು ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿಗಳು ಹಾಗೂ ಇತರೆ ಸಚಿವರಿಗೆ ನೀಡಿದ ಮನವಿಗಳನ್ನು ಕೂಡ ಈ ಇಲಾಖೆ ಅಡಿಯಲ್ಲಿ ತರಲಾಗುವುದು ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜವಾಬ್ದಾರಿಯ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ವಾರಕ್ಕೆ ಒಮ್ಮೆ ಸ್ಥಳೀಯ ಶಾಸಕರೊಂದಿಗೆ ಈ ಇಲಾಖೆಯ ಮೂಲಕ ಜನಸ್ಪಂದನ ಸಭೆಗಳನ್ನು ನಡೆಸಬೇಕು. ಆನಂತರ ಅದನ್ನು ಪರಿಶೀಲಿಸುವ ಕೆಲಸ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
2026, ಮೇ 31ರ ಒಳಗೆ ಪೂರ್ಣಗೊಂಡಿರುವ ಎಲ್ಲಾ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ವಿನಾಯಿತಿ ನೀಡಲಾಗಿದ್ದು, ಈ ವಿಚಾರವಾಗಿ ಸರ್ಕಾರಿ ಆದೇಶ ಬಂದ ದಿನದಿಂದ 15 ದಿನಗಳ ಕಾಲಾವಕಾಶ ನೀಡಲಾಗುವುದು. ಕಟ್ಟಡ ಮಾಲೀಕರು ಕಟ್ಟಡದ ಜೊತೆಗಿನ ಫೋಟೋ ಹಾಗೂ ಜಿಪಿಎಸ್ ದಾಖಲೆ ಕಡ್ಡಾಯವಾಗಿ ಸಲ್ಲಿಕೆ ಮಾಡಬೇಕು. ಗ್ರಾಮೀಣ ಭಾಗದ ರೇಷ್ಮೆ ಸಾಕಾಣಿಕೆ ಮನೆ, ಕೊಟ್ಟಿಗೆಗಳಿಗೆ ವಿದ್ಯುತ್ ವಿನಾಯಿತಿ ನೀಡಲಾಗಿದೆ. ಹೊಸದಾಗಿ ನಿರ್ಮಾಣ ಮಾಡಿದರೆ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಯಾದಗಿರಿಯ ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ100 ಕೋಟಿ ರೂ. ವೆಚ್ಚದಲ್ಲಿ ನೂತನ 200 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. 18 ಕೋಟಿ ರೂ. ವೆಚ್ಚದಲ್ಲಿ ಕಾರವಾರ ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆಗಳ 6 ಸಿವಿಲ್ ಕಾಮಗಾರಿಗಳಿಗೆ ಮತ್ತು ಬೆಂಗಳೂರು ವೈದ್ಯಕೀಯ ಸಂಶೋಧನಾ ಆಸ್ಪತ್ರೆಗೆ ಸುಮಾರು 60 ಕೋಟಿ ವೆಚ್ಚದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಗೆ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಸಾರ್ವಜನಿಕರ ಅನುಕೂಲಕ್ಕಾಗಿ 620 ನೂತನ ಬಸ್ಗಳ ಖರೀದಿಗೆ ಅನುಮತಿ ನೀಡಲಾಗಿದೆ. ಎಲ್ಲಾ ಸಾರಿಗೆ ನಿಗಮಗಳ ಅಡಿಯಲ್ಲಿ 11 ಕಡೆ ಎಲೆಕ್ಟ್ರಿಕ್ ಬಸ್ಗಳ ಡಿಪೋಗಳನ್ನು ತೆರೆಯಲು ನಿರ್ಧರಿಸಲಾಗಿದೆ. ₹30 ಕೋಟಿ ವೆಚ್ಚದಲ್ಲಿ ಸಂಡೂರು ತಾಲೂಕು ಕೇಂದ್ರದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಲಾಗುವುದು. 620 ಬಸ್ಗಳ ಪೈಕಿ ಗ್ರಾಮೀಣ ಪ್ರದೇಶಗಳಿಗೆ 400 ಬಸ್ಗಳು ಹಾಗೂ ವಾಯುವ್ಯ ಸಾರಿಗೆ ನಿಗಮಕ್ಕೆ 220 ಬಸ್ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಯುಪಿಎಸ್ಸಿ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಗೂ ಒಂದೇ ಸೂರಿನಡಿ ಎಲ್ಲಾ ಅನುಕೂಲ ದೊರೆಯಬೇಕು ಎನ್ನುವ ಕಾರಣಕ್ಕೆ ಕೆಐಡಬ್ಲ್ಯೂಬಿ ವತಿಯಿಂದ ನವದೆಹಲಿಯಲ್ಲಿ ಕರ್ನಾಟಕ ಭವನ - 4 ಅನ್ನು ನಿರ್ಮಾಣ ಮಾಡಲು ₹80 ಕೋಟಿಗೆ ಅನುಮೋದನೆ ನೀಡಲಾಗಿದೆ. ಇದರಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಶೇ 50, ಇತರೆ ಸಮುದಾಯದ ವಿದ್ಯಾರ್ಥಿಗಳಿಗೆ ಶೇ. 50 ರಷ್ಟು ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಮಾಹಿತಿ ಒದಗಿಸಿದ್ದಾರೆ.