ಬೆಂಗಳೂರು: ಶೀಘ್ರದಲ್ಲೇ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಐವರು ಸದಸ್ಯರ ಗ್ಯಾರಂಟಿ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭಾನುವಾರ ಘೋಷಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ಹಸ್ತಾಂತರಿಸಿ ಮಾತನಾಡಿದ ಅವರು, ಕಳೆದ ಐರು ವರ್ಷಗಳಲ್ಲಿ ಪಕ್ಷದ ಅನೇಕ ಕಾರ್ಯಕರ್ತರು ನನ್ನೊಂದಿಗೆ ಕೆಲಸ ಮಾಡಿದ್ದಾರೆ. ಈ ಪೈಕಿ ಅನೇಕ ಜನರಿಗೆ ಅಧಿಕಾರದ ಅವಕಾಶ ನೀಡಲು ಸಾಧ್ಯವಾಗಿಲ್ಲ. ಹೀಗಾಗಿ ಗ್ಯಾರಂಟಿ ಯೋಜನೆಗಾಗಿ ಸಮಿತಿಯನ್ನು ರಚಿಸಿದ್ದು, ಸಾವಿರಾರು ಕಾರ್ಯಕರ್ತರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದರು.
ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿಯೂ ಐವರು ಸದಸ್ಯರು ಗ್ಯಾರಂಟಿ ಸಮಿತಿಗಳನ್ನು ರಚಿಸಲು ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಸಮಾಜದಲ್ಲಿನ ಎಲ್ಲ ವರ್ಗದವರಿಗೂ ಈ ಸಮಿತಿಯಲ್ಲಿ ಸಮಾನ ಅವಕಾಶ ನೀಡಲಾಗುವುದು, ಈ ಸಮಿತಿ ಸದಸ್ಯರು ಗ್ಯಾರಂಟಿ ಫಲಾನುಭವಿಗಳ ದಾಖಲೆ ಮರುಪರಿಶೀಲನೆ ಮಾಡಬೇಕು ಎಂದು ಸೂಚಿಸಿದರು.
ರಾಹುಲ್ ಗಾಂಧಿಯವರ ಮಾರ್ಗದರ್ಶನದಂತೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸಲು ಕಾಲೇಜುಗಳಲ್ಲಿ ಮಾತುಕತೆ ನಡೆಸಲಾಗುತ್ತಿದೆ. ಸಚಿವ ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು, ಇದೇ ವರ್ಷದಿಂದ ವಿದ್ಯಾರ್ಥಿ ಚುನಾವಣೆ ನಡೆಸಲಾಗುವುದು. ಆ ಮೂಲಕ ಪಂಚಾಯಿತಿಗಳಿಂದ ಪಾರ್ಲಿಮೆಂಟ್ ವರೆಗೂ ನಾಯಕರನ್ನು ತಯಾರು ಮಾಡಲಾಗುವುದು. ಅಲ್ಲದೇ ಮಹಿಳೆಯರಿಗೆ ಮೀಸಲಾತಿ ನೀಡುವುದನ್ನು ತಪ್ಪಿಸುವುದಿಲ್ಲ ಎಂದು ಭರವಸೆ ನೀಡಿದರು.
ರಾಜ್ಯದಲ್ಲಿ ನಡೆಯಲಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ನಮಗೆ ಅಪಾಯವೂ ಹೌದು. ಅವಕಾಶವೂ ಹೌದು. ಎಸ್ ಐಆರ್ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.