ಮೈಸೂರು: ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನಾಳೆ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ಯುವತಿ ಮತ್ತು ಆಕೆಯ ಹೆತ್ತವರು ಆತ್ಮಹತ್ಯೆಗೆ ಕಾರಣವಾದ ಆರೋಪದ ಮೇಲೆ ಉಲ್ಲಾಸ್ ಗೌಡ ಎಂಬ ಯುವಕನನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.
ಒಂದೇ ಕುಟುಂಬದ ಮೂವರು ಡೆತ್ನೋಟ್ ಬರೆದಿಟ್ಟು ಸಾವಿಗೆ ಶರಣಾಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ ಉಲ್ಲಾಸ್ ಗೌಡನನ್ನು ಬಂಧಿಸಲು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು, ಇನ್ಸ್ಪೆಕ್ಟರ್ ಧನಂಜಯ್, ಶಿವಾನಂದ ಶೆಟ್ಟಿ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದರು.
ಇಂದು ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬಳಿಕ ಪೊಲೀಸರು ಉಲ್ಲಾಸ್ ಗೌಡನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.
ನಿನ್ನೆ ಯುವತಿ ರಕ್ಷಿತಾ(21) ಹಾಗೂ ಆಕೆಯ ತಂದೆ ಶಿವಣ್ಣ(54), ತಾಯಿ ನಾಗರತ್ನ(44) ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಸಾವಿಗೆ ಉಲ್ಲಾಸ್ ಗೌಡ ಕಾರಣನೆಂದು ಡೆತ್ನೋಟ್ನಲ್ಲಿ ಬರೆದಿದ್ದರು. ಉಲ್ಲಾಸ್ ಗೌಡ ಯುವತಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಮೂವರು ವಿಷ ಸೇವಿಸಿ ಒಟ್ಟಿಗೆ ಪ್ರಾಣಬಿಟ್ಟಿದ್ದಾರೆ.
ಇನ್ನು ಈ ಪ್ರಕರಣದ ಬಗ್ಗೆ ಮಾತನಾಡಿರುವ ಶಾಸಕ ಪುಟ್ಟರಂಗಶೆಟ್ಟಿ ಅವರು, ಮೃತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಬದ್ಧ ಎಂದು ಹೇಳಿದ್ದಾರೆ.
ಆರೋಪಿ ಉಲ್ಲಾಸ್ಗೌಡನಿಗೆ ಕಠಿಣ ಶಿಕ್ಷೆ, ಅಗತ್ಯವಿದ್ದರೆ ಮರಣದಂಡನೆ ವಿಧಿಸಬೇಕು ಎಂದು ಮೃತರ ಸಂಬಂಧಿಕರು ಆಗ್ರಹಿಸಿದ್ದಾರೆ. ಅಲ್ಲದೆ, ಆರೋಪಿಯ ಆಸ್ತಿಯನ್ನು ಮುಟ್ಟುಗೋಲು ಹಾಕಬೇಕು ಎಂದು ಒತ್ತಾಯಿಸಿದ್ದಾರೆ.